ಡೆಹ್ರಾಡೂನ್ : ಹಲ್ದ್ವಾನಿಯಲ್ಲಿ ನಡೆದ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ರ್ಯಾಲಿ ನಡೆದ ಸ್ಥಳದಲ್ಲಿ ನಡೆದ ‘ಶುದ್ಧೀಕರಣ’ ಕುರಿತ ವಿವಾದವು ಹೊಸ ರಾಜಕೀಯ ಮತ್ತು ಕಾನೂನು ತಿರುವು ಪಡೆದುಕೊಂಡಿದೆ ಜಾತಿ-ಸಂಬಂಧಿತ ಹೇಳಿಕೆಗಳ ಆರೋಪದ ಮೇಲೆ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
ಶ್ರೀ ರಾಮ್ ಸೇನಾ ಧರ್ಮಾರ್ಥ ಸೇವಾ ನ್ಯಾಸ್’ಗೆ ಸಂಬಂಧಿಸಿದ ವಿನೋದ್ ಕುಮಾರ್ ಆರ್ಯ ಮತ್ತು ಅಮಿತ್ ಕುಮಾರ್ ನೀಡಿದ ದೂರಿನ ಮೇರೆಗೆ ಹಲ್ದ್ವಾನಿ ಕೊತ್ವಾಲಿಯಲ್ಲಿ ಈ ಪ್ರಕರಣ ದಾಖಲಾಗಿದೆ. ಆ ಘಟನೆಯ ಕುರಿತು ಪ್ರತಿಕ್ರಿಯಿಸುವಾಗ ರಾಹುಲ್ ಗಾಂಧಿ ಅವರು ಪರಿಶಿಷ್ಟ ಜಾತಿ ಸಮುದಾಯವನ್ನು ಉಲ್ಲೇಖಿಸಿ ಆಕ್ಷೇಪಾರ್ಹ ಪದಗಳನ್ನು ಬಳಸಿದ್ದಾರೆ ಎಂದು ದೂರುದಾರರು ಆರೋಪಿಸಿದ್ದಾರೆ.
ಲೋಕಸಭೆಯ ವಿರೋಧ ಪಕ್ಷದ ನಾಯಕರ ವಿರುದ್ಧ ಪೊಲೀಸರು ‘ಭಾರತೀಯ ನ್ಯಾಯ ಸಂಹಿತೆ’ಯ ಸೆಕ್ಷನ್ 196 ಮತ್ತು 299 ಹಾಗೂ ‘ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯ್ದೆ’ಯ ಸೆಕ್ಷನ್ 3(1)(q) ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಈ ಆರೋಪಗಳು ಇನ್ನೂ ಸಾಬೀತಾಗಿಲ್ಲ ಮತ್ತು ಪ್ರಕರಣದ ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ತನಿಖೆಯ ಜವಾಬ್ದಾರಿಯನ್ನು ಸರ್ಕಲ್ ಆಫೀಸರ್ ಅಮಿತ್ ಕುಮಾರ್ ಸೈನಿ ಅವರಿಗೆ ವಹಿಸಲಾಗಿದೆ.
ನೈನಿತಾಲ್ ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ಮಂಜುನಾಥ್ ಟಿ.ಸಿ. ಮಾತನಾಡಿ, ರಾಹುಲ್ ಗಾಂಧಿ ಅವರ ಹೇಳಿಕೆಗಳು ಮತ್ತು ಪತ್ರಿಕಾಗೋಷ್ಠಿಯು ತಮಗೆ ಹಾಗೂ ತಮ್ಮ ದಲಿತ ಸಮುದಾಯದ ಸದಸ್ಯರಿಗೆ ನೋವುಂಟುಮಾಡಿದೆ ಎಂದು ದೂರುದಾರರು ತಿಳಿಸಿದ್ದಾರೆ ಎಂದು ಹೇಳಿದರು.
ಆಗಸ್ಟ್ 29ರಂದು ನವದೆಹಲಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದ ರಾಹುಲ್ ಗಾಂಧಿ, ಇದು ಬಿಜೆಪಿಯ ದಲಿತ ವಿರೋಧಿ ಮನಸ್ಥಿತಿ ಹಾಗೂ ಅಸ್ಪೃಶ್ಯತೆಯ ಆಚರಣೆ ಎಂದು ಟೀಕಿಸಿ, ಆಯೋಜಕರ ವಿರುದ್ಧ ಎಸ್ಸಿ,ಎಸ್ಟಿ ಕಾಯ್ದೆಯಡಿ ಪ್ರಕರಣ ದಾಖಲಿಸುವಂತೆ ಆಗ್ರಹಿಸಿದ್ದರು.

