ನವದೆಹಲಿ : ಬೆಂಗಳೂರು ಮಹಾನಗರ ಸೇರಿದಂತೆ ಮಂಡ್ಯ, ರಾಮನಗರ ಮತ್ತು ಚಾಮರಾಜನಗರ ಜಿಲ್ಲೆಗಳ ಕುಡಿಯುವ ನೀರಿನ ಭದ್ರತೆ ಹಾಗೂ ಸಂಕಷ್ಟದ ವರ್ಷಗಳಲ್ಲಿ ನೀರಿನ ಸಮರ್ಪಕ ನಿರ್ವಹಣೆಗೆ ಅತ್ಯಗತ್ಯವಾಗಿರುವ ಮೇಕೆದಾಟು ಸಮತೋಲನ ಜಲಾಶಯ ಯೋಜನೆಯ ಪರಿಷ್ಕೃತ ಡಿಪಿಆರ್ಗೆ ಕೇಂದ್ರ ಜಲ ಆಯೋಗವು ತಕ್ಷಣವೇ ಅನುಮೋದನೆ ನೀಡಬೇಕು ಎಂದು ಜಲ ಸಂಪನ್ಮೂಲ ಸಚಿವ ಎನ್ ಚಲುವರಾಯಸ್ವಾಮಿ ಆಗ್ರಹಿಸಿದರು.
ಕೇಂದ್ರ ಜಲಶಕ್ತಿ ಸಚಿವಾಲಯ ನವದೆಹಲಿಯ ಸುಷ್ಮಾ ಸ್ವರಾಜ್ ಭವನದಲ್ಲಿ ಎರ್ಪಡಿಸಿದ್ದ ಎರಡು ದಿನಗಳ ‘ರಾಷ್ಟ್ರೀಯ ಜಲ ಇಲಾಖಾ ಸಮಾವೇಶ’ದಲ್ಲಿ ಮಾತನಾಡಿದರು.
ಕರ್ನಾಟಕದ ಮಹತ್ವಾಕಾಂಕ್ಷೆಯ ಮೇಕೆದಾಟು ಸಮತೋಲನ ಜಲಾಶಯ ಯೋಜನೆಗೆ ಅಗತ್ಯವಿರುವ ಶಾಸನಬದ್ಧ ತಾಂತ್ರಿಕ ಅನುಮೋದನೆಗಳನ್ನು ಶೀಘ್ರವಾಗಿ ನೀಡುವಂತೆ ಜಲಸಂಪನ್ಮೂಲ ಸಚಿವ ಎನ್.ಚಲುವರಾಯಸ್ವಾಮಿ ಕೇಂದ್ರ ಜಲ ಆಯೋಗದ ಅಧ್ಯಕ್ಷ ಅನುಪಮ್ ಪ್ರಸಾದ್ ಅವರಿಗೆ ಮನವಿ ಮಾಡಿದ್ದಾರೆ.
ಕೃಷ್ಣಾ ಮೇಲ್ದಂಡೆ ಯೋಜನೆ ಹಂತ-3 ಅಡಿಯಲ್ಲಿ ರಾಜ್ಯಕ್ಕೆ ಹಂಚಿಕೆಯಾಗಿರುವ 130 ಟಿಎಂಸಿ ನೀರಿನ ಸದ್ಬಳಕೆಗೆ ಅನುಕೂಲವಾಗುವಂತೆ ಕೃಷ್ಣಾ ಜಲವಿವಾದ ನ್ಯಾಯಾಧಿಕರಣ-2ರ ಅಂತಿಮ ತೀರ್ಪನ್ನು ಕೇಂದ್ರ ಸರ್ಕಾರವು ಅಧಿಕೃತ ಗೆಜೆಟ್ನಲ್ಲಿ ಶೀಘ್ರವಾಗಿ ಅಧಿಸೂಚನೆ ಹೊರಡಿಸಬೇಕು ಎಂದು ಆಗ್ರಹಿಸಿದರು.
ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ವ್ಯಾಪ್ತಿಯ ಕುಡಿಯುವ ನೀರಿಗಾಗಿ ರೂಪಿಸಲಾಗಿರುವ ಮಹದಾಯಿ ಕೊಳ್ಳದ ಕಳಸಾ ಮತ್ತು ಬಂಡೂರಿ ನಾಲಾ ತಿರುವು ಯೋಜನೆಗಳಿಗೆ ಬಾಕಿ ಇರುವ ಅರಣ್ಯ ಮತ್ತು ವನ್ಯಜೀವಿ ಅನುಮೋದನೆಗಳನ್ನು ತ್ವರಿತವಾಗಿ ಮಂಜೂರು ಮಾಡುವಂತೆ ಹಾಗೂ ಕೇಂದ್ರ ಬಜೆಟ್ನಲ್ಲಿ ಘೋಷಿಸಲಾದ ಭದ್ರಾ ಮೇಲ್ದಂಡೆ ಯೋಜನೆಗೆ 5,300 ಕೋಟಿ ರೂ. ನೆರವು ಸೇರಿದಂತೆ ಪರಿಷ್ಕೃತ ಅಂದಾಜು ಮೊತ್ತಕ್ಕೆ ಸಾರ್ವಜನಿಕ ಹೂಡಿಕೆ ಮಂಡಳಿಯ ಶಿಫಾರಸು ಪೂರ್ಣಗೊಳಿಸಿ ನಿಧಿ ಬಿಡುಗಡೆ ಮಾಡಲು ಕೇಂದ್ರ ಸರ್ಕಾರವನ್ನು ಕೋರಿದರು.
ಯುಕೆಪಿ-3 ಮಾದರಿಯ ಒಪ್ಪಿಗೆ ಪರಿಹಾರ ದರ ಹಾಗೂ ಲೋಕ ಅದಾಲತ್ ಮೂಲಕ ಭೂಸ್ವಾಧೀನ ವ್ಯಾಜ್ಯಗಳ ತ್ವರಿತ ಇತ್ಯರ್ಥ, ಎತ್ತೆತ್ತುವ ನೀರಾವರಿ ಯೋಜನೆಗಳ ಡಿಪಿಆರ್ ಮೌಲ್ಯಮಾಪನಕ್ಕೆ ‘ಅಂದಾಜು ಪರಿಶೀಲನಾ ಸಮಿತಿ ರಚನೆ, ಕರ್ನಾಟಕ ಸಾರ್ವಜನಿಕ ಸಂಗ್ರಹಣೆ ಪೋರ್ಟಲ್ ಮೂಲಕ ಪಾರದರ್ಶಕ ಇ-ಟೆಂಡರಿಂಗ್ ಮತ್ತು ಭೂಸ್ವಾಧೀನದ ಪ್ರಮಾಣ ತಗ್ಗಿಸಲು ಪೈಪ್ಡ್ ನೀರಾವರಿ ಅಳವಡಿಕೆಯಂತಹ ಮಾದರಿ ಸುಧಾರಣೆಗಳನ್ನು ಸಮ್ಮೇಳನದಲ್ಲಿ ರಾಜ್ಯದ ನೀರಾವರಿ ಅಧಿಕಾರಿಗಳ ನಿಯೋಗ ಪ್ರಸ್ತುತ ಪಡಿಸಿತು.
ಅಗತ್ಯವಿರುವ ಹೆಚ್ಚುವರಿ ತಾಂತ್ರಿಕ ಮಾಹಿತಿಯನ್ನು ರಾಜ್ಯ ಸರ್ಕಾರದಿಂದ ತ್ವರಿತವಾಗಿ ಒದಗಿಸಲಾಗುವುದು. ಯೋಜನೆಯ ಪರಿಶೀಲನಾ ಪ್ರಕ್ರಿಯೆಯನ್ನು ನಿಗದಿತ ಕಾಲಮಿತಿಯಲ್ಲಿ ಪೂರ್ಣಗೊಳಿಸಿ ಶೀಘ್ರ ಹಸಿರು ನಿಶಾನೆ ನೀಡಲು ಸಿಡಬ್ಲ್ಯೂಸಿ ಸಹಕಾರ ನೀಡಬೇಕು ಎಂದು ಒತ್ತಾಯಿಸಿದರು.
ಪ್ರಸ್ತುತ ಹವಾಮಾನ ವೈಪರೀತ್ಯ, ಮಳೆ ಕೊರತೆ ಹಾಗೂ ನೀರಿನ ಸಂಕಷ್ಟದ ಹಿನ್ನೆಲೆಯಲ್ಲಿ ಮೇಕೆದಾಟು ಯೋಜನೆಯ ಅಗತ್ಯತೆಯನ್ನು ಸಚಿವರು ಸಭೆಯಲ್ಲಿ ಬಲವಾಗಿ ಪ್ರತಿಪಾದಿಸಿದರು. ಯೋಜನೆಯಿಂದ ಬೆಂಗಳೂರು ಮಹಾನಗರ ಸೇರಿದಂತೆ ಸುತ್ತಮುತ್ತಲಿನ ಜಿಲ್ಲೆಗಳ ಕುಡಿಯುವ ನೀರಿನ ಅಗತ್ಯ ಪೂರೈಸಲು ನೆರವಾಗಲಿದೆ. ಜೊತೆಗೆ ಜಲವಿದ್ಯುತ್ ಉತ್ಪಾದನೆಗೂ ಅವಕಾಶ ದೊರೆಯಲಿದೆ ಎಂದು ವಿವರಿಸಿದರು.
ಬರಗಾಲದ ವರ್ಷಗಳಲ್ಲಿ ತಮಿಳುನಾಡಿಗೆ ನಿಗದಿತ ಪ್ರಮಾಣದ ನೀರನ್ನು ನಿಯಮಿತವಾಗಿ ಹರಿಸಲು ಮೇಕೆದಾಟು ಸಮತೋಲನ ಜಲಾಶಯ ಎರಡೂ ರಾಜ್ಯಗಳಿಗೆ ಪ್ರಯೋಜನಕಾರಿಯಾಗಲಿದೆ ಎಂದು ಸಚಿವರು ತಿಳಿಸಿದರು. ಯೋಜನೆ ಜಾರಿಗೆ ರಾಜ್ಯ ಸರ್ಕಾರ ದೃಢ ರಾಜಕೀಯ ಬದ್ಧತೆ ಹೊಂದಿದ್ದು, ತಾಂತ್ರಿಕ ಪರಿಶೀಲನೆಗಳನ್ನು ತ್ವರಿತವಾಗಿ ಪೂರ್ಣಗೊಳಿಸಿ ಅನುಮೋದನೆ ನೀಡಬೇಕು ಎಂದು ನಿಯೋಗ ಆಗ್ರಹಿಸಿದರು.

