ಕರ್ನಾಟಕ | ಸೋತ ಶಾಸಕರಿಗೆ ಲೋಕಸಭಾ ಟಿಕೆಟ್ ಕೊಟ್ಟ ಬಿಜೆಪಿ

Most read

ಲೋಕಸಭಾ ಚುನಾವಣೆಗೆ ಬಿಜೆಪಿಯವರು ಕರ್ನಾಟಕದ 24 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸಿದ್ದು, ತನ್ನ ಪಾಲಿನ ಇನ್ನೂ ಒಂದು ಕ್ಷೇತ್ರವನ್ನು ಬಾಕಿ ಉಳಿಸಿಕೊಂಡಿದೆ. 24 ಕ್ಷೇತ್ರಗಳ ಪೈಕಿ 5 ಅಭ್ಯರ್ಥಿಗಳು ಇತ್ತೀಚಿಗೆ ನಡೆದ ವಿಧಾನಸಭಾ ಚುನಾವಣೆಯಲ್ಲಿ ಜನರು ತಿರಸ್ಕರಿಸಿದ್ದರು. ಈ ಅಭ್ಯರ್ಥಿಗಳಿಗೆ ಈಗ ಬಿಜೆಪಿ ಲೋಕಸಭಾ ಟಿಕೆಟ್ ನೀಡಿದೆ.

ಕಳೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್ ಸಿಗದಿದ್ದಕ್ಕೆ ಮುನಿಸಿಕೊಂಡು ಕಾಂಗ್ರೆಸ್‌ ಪಕ್ಷವನ್ನು ಸೇರಿಕೊಂಡಿದ್ದ ಜಗದೀಶ್ ಶೆಟ್ಟರ್, ಕಾಂಗ್ರೆಸ್‌ನಿಂದ ಹುಬ್ಬಳ್ಳಿ ಧಾರವಾಡ ಸೆಂಟ್ರಲ್‌ ಕ್ಷೇತ್ರದಲ್ಲಿ ಸ್ಪರ್ಧಿಸಿದ್ದರು. ಆದರೆ, ಬಿಜೆಪಿಯ ಮಹೇಶ್‌ ಟೆಂಗಿನಕಾಯಿ ವಿರುದ್ಧ ಸೋಲು ಅನುಭವಿಸಿದ್ದರು. ನಂತರ ಕಾಂಗ್ರೆಸ್‌ನಿಂದಲೇ ವಿಧಾನ ಪರಿಷತ್ ಸದಸ್ಯರಾಗಿದ್ದರು. ಆದರೆ, ಈಗ ಮತ್ತೆ ಬಿಜೆಪಿಗೆ ಮರಳಿದ್ದು, ಹೈಕಮಾಂಡ್‌ ಬೆಳಗಾವಿ ಲೋಕಸಭಾ ಟಿಕೆಟ್‌ ಅನ್ನು ನೀಡಿದೆ. ಸ್ಥಳೀಯರ ವಿರೋಧದ ನಡುವೆಯೂ ಬಿಜೆಪಿ ಜಗದೀಶ್‌ ಶೆಟ್ಟರ್‌ನ್ನು ಬೆಳಗಾವಿಯಿಂದ ಕಣಕ್ಕಿಳಿಸಿದೆ.

ಚಿಕ್ಕಬಳ್ಳಾಪುರ ಕ್ಷೇತ್ರದಲ್ಲಿ ಕಾಂಗ್ರೆಸ್‌ನಿಂದ 2 ಬಾರಿ ಶಾಸಕರಾಗಿದ್ದ ಡಾ ಕೆ. ಸುಧಾಕರ್ ಅವರು ಆಪರೇಷನ್ ಕಮಲದ ಮೂಲಕ ಬಿಜೆಪಿಗೆ ಸೇರ್ಪಡೆಯಾಗಿ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಬರಲು ಕಾರಣರಾದವರಲ್ಲಿ ಒಬ್ಬರು. 2019ರ ಉಪ ಚುನಾವಣೆಯಲ್ಲಿ ಬಿಜೆಪಿಯಿಂದ ಸ್ಪರ್ಧಿಸಿ ಗೆದ್ದಿದ್ದರು. ಬಿಜೆಪಿ ಸರಕಾರದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವರಾಗಿದ್ದರು. ಆದರೆ, 2023ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯಿಂದ ಸ್ಪರ್ಧಿಸಿ ಕಾಂಗ್ರೆಸ್‌ ಅಭ್ಯರ್ಥಿ ಪ್ರದೀಪ್‌ ಈಶ್ವರ್‌ ವಿರುದ್ಧ ಚಿಕ್ಕಬಳ್ಳಾಪುರದಲ್ಲಿ ಸೋಲು ಅನುಭವಿಸಿದ್ದರು. ಅದಾದ ಬಳಿಕ ಮಂಕಾಗಿದ್ದ ಅವರಿಗೆ ಈಗ ಚಿಕ್ಕಬಳ್ಳಾಪುರ ಸ್ಥಳೀಯ ಬಿಜೆಪಿಗರ ವಿರೋಧ ಇದ್ದರೂ ಸಹ ಲೋಕಸಭಾ ಚುನಾವಣೆ ಟಿಕೆಟ್‌ ಅನ್ನು ಬಿಜೆಪಿ ನೀಡಿದೆ.

ಕಳೆದ ವಿಧಾನಸಭಾ ಚುನಾವಣೆಯಲ್ಲಿ ವರುಣಾ ಮತ್ತು ಚಾಮರಾಜನಗರ 2 ವಿಧಾನಸಭಾ ಕ್ಷೇತ್ರಗಳಲ್ಲಿ ಸ್ಪರ್ಧಿಸಿ ಸೋಲು ಅನುಭವಿಸಿದ್ದ ವಿ. ಸೋಮಣ್ಣ ಬಿಜೆಪಿ ನಾಯಕರ ಮೇಲೆ ಅಸಮಾಧಾನ ವ್ಯಕ್ತಪಡಿಸಿದ್ದರು. ತುಮಕೂರು ಲೋಕಸಭಾ ಕ್ಷೇತ್ರದ ಬಿಜೆಪಿ ಟಿಕೆಟ್‌ ಪಡೆಯಲು ಬಹಳ ಪ್ರಯತ್ನ ನಡೆಸಿದ್ದರು. ಸ್ಥಳೀಯರ ವಿರೋಧದ ನಡುವೆಯೂ ಕೂಡ ವಿ. ಸೋಮಣ್ಣಗೆ ಬಿಜೆಪಿ ನಾಯಕರು ಮಣೆ ಹಾಕಿದ್ದಾರೆ. ತುಮಕೂರಿನಿಂದ ಈಗ ಸ್ಪರ್ಧಿಸುತ್ತಿದ್ದಾರೆ.

ಬಳ್ಳಾರಿ ಮೀಸಲು ಲೋಕಸಭಾ ಕ್ಷೇತ್ರದಲ್ಲಿ ಬಿ. ಶ್ರೀರಾಮುಲು ಅವರಿಗೆ ಬಿಜೆಪಿ ಟಿಕೆಟ್‌ ನೀಡಿದೆ. ಇವರು ಕೂಡ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಬಳ್ಳಾರಿ ಗ್ರಾಮೀಣ ಕ್ಷೇತ್ರದಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ನಾಗೇಂದ್ರ ವಿರುದ್ಧ ಸೋಲು ಅನುಭವಿಸಿದ್ದರು. ಈಗ ಜನಾರ್ಧನ ರೆಡ್ಡಿ ಕೂಡ ಬಿಜೆಪಿ ಸೇರ್ಪಡೆಯಾಗಿದ್ದು, ಶ್ರೀರಾಮುಲು ಗೆಲುವಿಗೆ ಶ್ರಮಿಸಿದರೆ ಗೆಲುವಿನ ಸಾಧ್ಯತೆ ಜಾಸ್ತಿ ಇದೆ ಎನ್ನಲಾಗಿದೆ.

ವಿಶ್ವೇಶ್ವರ ಹೆಗಡೆ ಕಾಗೇರಿ ಕಳೆದ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ವಿರುದ್ದ ಶಿರಸಿಯಲ್ಲಿ ಸೋಲು ಅನುಭವಿಸಿದ್ದರು. ಈಗ ಹಾಲಿ ಸಂಸದ ಅನಂತ ಕುಮಾರ ಹೆಗಡೆ ಬದಲಾಗಿ ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಟಿಕೆಟ್‌ ಪಡೆದುಕೊಂಡಿದ್ದಾರೆ. ಹಿಂದೂ ಫೈಯರ್ ಬ್ರಾಂಡ್ ಎಂದೇ ಖ್ಯಾತಿಯಾಗಿದ್ದ ಅನಂತ್ ಕುಮಾರ್ ಹೆಗಡೆಗೆ ಟಿಕೆಟ್ ಕೈತಪ್ಪಿದ್ದರಿಂದ ಕಾಗೇರಿ ಸ್ಪರ್ಧೆಗೆ ಬಿಜೆಪಿ ಕಾರ್ಯಕರ್ತರಿಂದಲೇ ವಿರೋಧವಿದೆ.

More articles

Latest article