ಮಂಗಳೂರು ಕದ್ರಿ ಮಂಜುನಾಥ ದೇವಾಲಯದ ಕೆರೆಯಲ್ಲಿ ಬುದ್ಧನ ಶಿಲ್ಪ ಪತ್ತೆ; ಬೌದ್ಧನೆಲೆಯಾಗಿದ್ದಕ್ಕೆ ಪುರಾವೆ?

Most read

ಮಂಗಳೂರು: ಇತ್ತೀಚೆಗೆ ನಡೆಸಿದ ಪುರಾತತ್ತ್ವ ಅನ್ವೇಷಣೆಯ ಸಂದರ್ಭದಲ್ಲಿ ಮಂಗಳೂರಿನ ಕದ್ರಿ ಮಂಜುನಾಥ ದೇವಾಲಯದ ಕೆರೆಯೊಂದರಲ್ಲಿ ಅಪೂರ್ವವಾದ ಬುದ್ಧನ ಶಿಲ್ಪ ಮತ್ತು ಗುಹಾ ಸಮುಚ್ಚಯಗಳು ಪತ್ತೆಯಾಗಿವೆ ಎಂದು ಶಿರ್ವದ ಮುಲ್ಕಿ ಸುಂದರ್ ರಾಮ್ ಶೆಟ್ಟಿ ಕಾಲೇಜಿನ ಪ್ರಾಚೀನ ಇತಿಹಾಸ ಮತ್ತು ಪುರಾತತ್ತ್ವಶಾಸ್ತ್ರ ವಿಭಾಗದ ನಿವೃತ್ತ ಸಹ ಪ್ರಾಧ್ಯಾಪಕ ಪ್ರೊ.ಟಿ. ಮುರುಗೇಶಿ ತಿಳಿಸಿದ್ದಾರೆ.

ಈ ಶಿಲ್ಪವನ್ನು ಕದ್ರಿ ದೇವಾಲಯದ ಆಡಳಿತಾಧಿಕಾರಿಗಳ ಅನುಮತಿಯೊಂದಿಗೆ ಮೇಲೆ ತೆಗೆದು ಅಧ್ಯಯನ ನಡೆಸಿದಾಗ ಕೆರೆಯ ನೀರಿನಲ್ಲಿ ವಿಸರ್ಜನೆ ಮಾಡಿರುವ ಸ್ಥಿತಿಯಲ್ಲಿ ಕಂಡುಬಂದಿದೆ ಎಂದು ಅವರು ಹೇಳಿದ್ದಾರೆ.

ಈ ಶಿಲ್ಪವು ಪದ್ಮಪೀಠದ ಮೇಲೆ ಪದ್ಮಾಸನದಲ್ಲಿ ಧ್ಯಾನಮುದ್ರೆಯಲ್ಲಿ ಕುಳಿತಂತೆ ಕಂಡು ಬಂದಿದೆ. ಶಿಲ್ಪದ ಬಲಗೈ ಸಂಪೂರ್ಣ ತುಂಡಾಗಿದ್ದು, ಎಡಗೈನ ಹಸ್ತ ಮಡಚಿದ ಕಾಲುಗಳ ಮಧ್ಯೆ ಇರಿಸಲ್ಪಟ್ಟಿದೆ. ಎಡಭುಜದ ಮೇಲಿಂದ ಹಾದುಬಂದಿರುವ ಉತ್ತರೀಯ, ಶಿಲ್ಪದ ಎಡಭಾಗದ ಎದೆಯ ಮೇಲೆ ಚಪ್ಪಟೆಯಾಗಿ ಇಳಿಬಿಟ್ಟಂತೆ ಅಸ್ಪಸ್ಟವಾಗಿ ಕಾಣುತ್ತದೆ. ತಲೆಯ ಭಾಗ ತುಂಡಾಗಿದೆ. ದೇವಾಲಯದ ಹೊರ ಆವರಣದಲ್ಲಿರುವ ಸ್ಥಂಭದ ಕೆಳಭಾಗದ ಫಲಕಗಳಲ್ಲಿ ಪದ್ಮಪೀಠದ ಮೇಲೆ ಕುಳಿತ ಧ್ಯಾನಿಬುದ್ಧರ ಉಬ್ಬುಶಿಲ್ಪಗಳಿವೆ. ಆದ್ದರಿಂದ, ಈ ಶಿಲ್ಪವನ್ನು ಬುದ್ಧನ ಶಿಲ್ಪವೆಂದು ಗುರುತಿಸಲಾಗಿದೆ. ಶಿಲ್ಪವು 68 ಸೆ.ಮೀ ಎತ್ತರ ಮತ್ತು 48 ಸೆ.ಮೀ ಅಗಲವಾಗಿದೆ. ಈ ಶಿಲ್ಪವು ಬಹುತೇಕ ಗೋವಾದ ಮುಶಿರಾ ವಾಡೋದಲ್ಲಿ ದೊರೆತ ಶಿಲ್ಪವನ್ನು ಹೋಲುತ್ತಿದ್ದು ಕ್ರಿ.ಶ. 4-5ನೇ ಶತಮಾನದ ಶಿಲ್ಪವೆಂದು ಪರಿಗಣಿಸಬಹುದಾಗಿದೆ. ಶಿಲ್ಪವು ಪದ್ಮದ ಕೆಳಭಾಗದಲ್ಲಿ ಪಾಣಿಪೀಠದ ಒಳಗೆ ಸಿಕ್ಕಿಸುವ ಗೂಟವನ್ನು ಹೊಂದಿದ್ದು, ಇದುವೇ ಕದ್ರಿಯ ಮೂಲಸ್ಥಾನ ವಿಗ್ರಹವಾಗಿತ್ತೆಂದು ಸ್ಪಷ್ಟವಾಗಿಕಂಡು ಬರುತ್ತದೆ ಎಂದಿದ್ದಾರೆ.

ಕದ್ರಿಯ ಗುಹೆಗಳು ಹೇಗಿವೆ?:

ಕದ್ರಿ ಮಂಜುನಾಥ ದೇವಾಲಯದ ಕೆರೆಗಳ ಮೇಲ್ಭಾಗದ ಗುಡ್ಡೆಯಲ್ಲಿ ಕೆಂಪುಮುರಕಲ್ಲನ್ನು ಕಡಿದು ಮೂರು ಗುಹೆಗಳನ್ನು ನಿರ್ಮಿಸಲಾಗಿದೆ. ಬಲಭಾಗದ ಗುಹೆಯ ಪ್ರವೇಶದ್ವಾರವು ಬೃಹತ್ ಶಿಲಾಯುಗದ ಕಲ್ಮನೆ ಸಮಾಧಿಗಳ ಪ್ರವೇಶದ್ವಾರದಂತೆ ಗೋಚರಿಸುತ್ತದೆ. ಇಡೀ ರಚನೆ ಕಲ್ಮನೆ ಸಮಾಧಿಯಂತಿದೆ. ಇನ್ನೆರೆಡು ಗುಹೆಗಳು ಎತ್ತರವಾದ ಜಗತಿಯ ಮೇಲೆ ನಿರ್ಮಿಸಲಾಗಿದ್ದು, ಚೌಕಾಕಾರದ ಎರಡು ಪ್ರವೇಶದ್ವಾರಗಳನ್ನು ಒಳಗೊಂಡಿವೆ. ಗುಹೆಗಳ ಹೊರ ಮತ್ತು ಒಳಭಾಗದ ಭಿತ್ತಿಗಳು ನಯವಾಗಿ ನಿರಾಡಂಬರವಾಗಿವೆ. ಗುಹೆಗಳು ಕೇವಲ ಒಂದೊಂದು ಕೋಣೆಯನ್ನು ಒಳಗೊಂಡಿದ್ದು, ದೀಪಗಳನ್ನು ಇಡುವ ಗೂಡುಗಳನ್ನು ಒಳಗೊಂಡಿವೆ. ಆದ್ದರಿಂದ, ವಾಸ್ತವ್ಯದ ಉದ್ದೇಶಕ್ಕಾಗಿ ಈ ಗುಹೆಗಳನ್ನು ನಿರ್ಮಿಸಲಾಗಿದೆ ಎಂದು ಊಹಿಸಬಹುದಾಗಿದೆ. ವಾಸ್ತು ರಚನೆಯ ವಿನ್ಯಾಸ ಮತ್ತು ಶೈಲಿಗಳನ್ನು ಅವಲೋಕಿಸಿದರೆ ಕ್ರಿ.ಶ. ಸಮಾರು 4-6ನೇ ಶತಮಾನದಲ್ಲಿ ನಿರ್ಮಿಸಿದ ಗುಹೆಗಳೆಂದು ನಿರ್ಧರಿಸಬಹುದಾಗಿದೆ ಎಂದು ಮುರುಗೇಶಿ ಹೇಳಿದ್ದಾರೆ.

ಈ ಸಂಶೋಧನೆಯಿಂದ ಕದ್ರಿ ಕ್ರಿ.ಶ.4-5ನೇ ಶತಮಾನದಲ್ಲೇ ಅಸ್ತಿತ್ವದಲ್ಲಿ ಇತ್ತು ಎಂದು ತೀರ್ಮಾನಿಸಬಹುದಾಗಿದೆ. ಕದ್ರಿಯು, ಕ್ರಿಸ್ತ ಶಕಾರಂಬದಲ್ಲಿ ಮಹಾಯಾನ ಬೌದ್ಧ ಕೇಂದ್ರವಾಗಿದ್ದು, ನಂತರ ವಜ್ರಯಾ ಬೌದ್ಧ ಕೇಂದ್ರವಾಗಿ ಕೊನೆಗೆ ದಕ್ಷಿಣ ಭಾರತದ ಪ್ರಮುಖ ನಾಥಪಂಥದ ಕೇಂದ್ರವಾಗಿ ಪರಿವರ್ತನೆ ಹೊಂದಿದೆ ಎಂದು ತಿಳಿಯಬಹುದಾಗಿದೆ. ಕದ್ರಿಯಲ್ಲಿ ಪುರಾತತ್ತ್ವ ಅನ್ವೇಷಣೆಗೆ ಅನುಮತಿ ನೀಡಿ ದೇವಾಲಯದ ಆಡಳಿತಾಧಿಕಾರಿ ಅರುಣ್ ಕುಮಾರ್ ಸಹಕರಿಸಿದ್ದು, ಈ ಅನ್ವೇಷಣೆಯಲ್ಲಿ ಮಣಿಪಾಲ್ ವಿಶ್ವವಿದ್ಯಾನಿಲಯದ ಪಿ.ಹೆಚ್ಡಿ ವಿದ್ಯಾರ್ಥಿ, ಶ್ರೇಯಸ್ ಕೊಳಪೆ, ಶಿರ್ವ ಎಂ.ಎಸ್.ಆರ್.ಎಸ್. ಕಾಲೇಜಿನ ಪುರಾತತ್ತ್ವ ವಿಭಾಗದ ಉಪನ್ಯಾಸಕರಾದ ಶ್ರೇಯಸ್ ಬಂಟಕಲ್ಲು, ಕಾಲೇಜಿನ ಪುರಾತತ್ತ್ವ ವಿಭಾಗದ ವಿಧ್ಯಾರ್ಥಿ ರವೀಂದ್ರ ಕುಶ್ವಾ, ಮಂಗಳೂರು ವಿಶ್ವವಿದ್ಯಾ ಕಾಲೇಜಿನ ಸ್ನಾತಕೋತ್ತರ ವಿಭಾಗದ ವಿದ್ಯಾರ್ಥಿ ಕಾರ್ತಿಕ್ ಭಾಗವಹಿಸಿದ್ದರು ಎಂದು ಮುರುಗೇಶಿ ತಿಳಿಸಿದ್ದಾರೆ.

More articles

Latest article