ನವದೆಹಲಿ: ಅಹಮದಾಬಾದ್ ನಲ್ಲಿ ಸಂಭವಿಸಿದ ಏರ್ ಇಂಡಿಯಾ ವಿಮಾನ ಅಪಘಾತದಲ್ಲಿ 275 ಪ್ರಯಾಣಿಕರು ಮೃತಪಟ್ಟಿದ್ದು, ಡಿ ಎನ್ ಎ ಹೊಂದಾಣಿಕೆಯ ಮೂಲಕ ಇದುವರೆಗೆ 135 ಮೃತದೇಹಗಳನ್ನು ಗುರುತಿಸಲಾಗಿದೆ ಮತ್ತು 101 ಶವಗಳನ್ನು ಅವರ ಕುಟುಂಬಗಳಿಗೆ ಹಸ್ತಾಂತರಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಈ ದುರಂತ ಸಂಭವಿಸಿ ಇಂದಿಗೆ ಐದು ದಿನಗಳಾಗಿವೆ.
ವಿಮಾನವು ವೈದ್ಯಕೀಯ ಕಾಲೇಜು ಹಾಸ್ಟೆಲ್ ಕಟ್ಟಡಕ್ಕೆ ಡಿಕ್ಕಿ ಹೊಡೆದಿದ್ದು ಹೊತ್ತಿ ಉರಿದಿದೆ. ಬಹುತೇಕ ಮೃತದೇಹಗಳು ಗುರುತಿಸಲಾಗದಷ್ಟು ಸುಟ್ಟ ಕರಕಲಾಗಿವೆ ಅಥವಾ ಛಿದ್ರವಾಗಿವೆ. ಆದ್ದರಿಂದ ಡಿಎನ್ ಎ ಪರೀಕ್ಷೆ ಮೂಲಕ ಮೃತರ ಗುರುತು ಪತ್ತೆ ಹಚ್ಚಲಾಗುತ್ತಿದೆ. ಈ ಪ್ರಕ್ರಿಯೆಗಾಗಿ 230 ತಂಡಗಳನ್ನು ರಚಿಸಲಾಗಿದೆ ಎಂದು ಅಹಮದಾಬಾದ್ ಸಿವಿಲ್ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ.ರಾಕೇಶ್ ಜೋಶಿ ತಿಳಿಸಿದ್ದಾರೆ. ಇಂದು ಸಂಜೆ ನಾಳೆಯೊಳಗೆ ಎಲ್ಲಾ ಸಂತ್ರಸ್ತರ ಡಿಎನ್ ಎ ಪರೀಕ್ಷೆ ಪೂರ್ಣಗೊಳ್ಳಲಿದೆ ಎಂದು ಅವರು ತಿಳಿಸಿದ್ದಾರೆ.
ಜೂನ್ 12ರಂದು ಅಹಮದಾಬಾದ್ ನ ಸರ್ದಾರ್ ವಲ್ಲಭಭಾಯಿ ಪಟೇಲ್ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಲಂಡನ್ ಗೆ ಹೊರಟಿದ್ದ ಏರ್ ಇಂಡಿಯಾ ವಿಮಾನವು ಟೇಕಾಫ್ ಆದ ಕೆಲವೇ ಕ್ಷಣಗಳಲ್ಲಿ ಪತನಗೊಂಡು, ಗುಜರಾತ್ ನ ಮಾಜಿ ಮುಖ್ಯಮಂತ್ರಿ ವಿಜಯ್ ರೂಪಾನಿ ಸೇರಿದಂತೆ 275 ಮಂದಿ ಮೃತಪಟ್ಟಿದ್ದರು. ವಿಮಾನದಲ್ಲಿದ್ದ ಪ್ರಯಾಣಿಕರ ಜತೆಗೆ ವಿಮಾನ ಡಿಕ್ಕಿ ಹೊಡೆದ ಕಟ್ಟಡದಲ್ಲಿದ್ದ 29 ಎಂಬಿಬಿಎಸ್ ವಿದ್ಯಾರ್ಥಿಗಳೂ ಅಸು ನೀಗಿದ್ದಾರೆ.