ಬೆಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನಲ್ಲಿ 32 ವರ್ಷದ ಮುಸ್ಲಿಂ ವ್ಯಕ್ತಿಯ ಹತ್ಯೆಗೆ ಸಂಬಂಧಿಸಿದಂತೆ ನಾಲ್ವರನ್ನು ಬಂಧಿಸಲಾಗಿದ್ದು, ಆರೋಪಿಗಳನ್ನು ಶಿಕ್ಷೆಗೆ ಗುರಿಪಡಿಸಲಾಗುವುದು ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ್ ಹೇಳಿದ್ದಾರೆ. ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರನ್ನು ಭೇಟಿಯಾದ ನಂತರ ಅವರು ಮಾತನಾಡಿದರು.
ರಾಜ್ಯ ಸರ್ಕಾರ ಈ ಹತ್ಯೆಯನ್ನು ಬಹಳ ಗಂಭೀರವಾಗಿ ಪರಿಗಣಿಸಿದೆ ಮತ್ತು ಕೋಮು ಚಟುವಟಿಕೆಗಳು ಹಾಗೂ ಕೊಲೆಗಳನ್ನು ನಿಗ್ರಹಿಸುವವರೆಗೆ ತಾವು ವಿಶ್ರಾಂತಿ ಪಡೆಯುವುದಿಲ್ಲ ಎಂದು ಗೃಹ ಸಚಿವರು ಎಚ್ಚರಿಕೆ ನೀಡಿದ್ದಾರೆ. ತಕ್ಷಣದಿಂದಲೇ ಜಾರಿಗೆ ಬರುವಂತೆ ಕೋಮು ವಿರೋಧಿ ಪಡೆ ಕಾರ್ಯರಂಭ ಮಾಡಲಿದೆ ಎಂದೂ ಅವರು ತಿಳಿಸಿದ್ದಾರೆ.
ಈ ಕೊಲೆಯ ನಂತರ ನಾಲ್ವರನ್ನು ಬಂಧಿಸಲಾಗಿದೆ ಮತ್ತು ಅವರ ಹೇಳಿಕೆಗಳ ಆಧಾರದ ಮೇಲೆ ನಮಗೆ ಕೆಲವು ಮಹತ್ವದ ಮಾಹಿತಿಗಳು ಲಭ್ಯವಾಗಿವೆ. ಅದನ್ನು ಬಳಸಿಕೊಂಡು ಮುಂದಿನ ತನಿಖೆ ಮತ್ತು ಕ್ರಮ ಕೈಗೊಳ್ಳಲಾಗುವುದು. ಆರೋಪಿಗಳು ಎಷ್ಟೇ ಪ್ರಭಾವಿಗಳಾಗಿದ್ದರೂ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳುತ್ತೇವೆ. ಇಂತಹ ಘಟನೆಗಳು ಪ್ರತಿ ಬಾರಿಯೂ ಮರುಕಳಿಸುತ್ತಿದ್ದು, ಸರ್ಕಾರ ಕಣ್ಣು ಮುಚ್ಚಿ ಸುಮ್ಮನಿರಲು ಸಾಧ್ಯವಿಲ್ಲ ಎಂದು ಗುಡುಗಿದರು.
ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ ಮತ್ತು ಕೋಮು ಚಟುವಟಿಕೆಗಳು ನಡೆಯುವ ಇತರ ಸ್ಥಳಗಳನ್ನು ಒಳಗೊಂಡ ಕರಾವಳಿ ಪ್ರದೇಶವನ್ನು “ಸೂಕ್ಷ್ಮ” ಎಂದು ಪರಿಗಣಿಸಲಾಗುತ್ತದೆ ಮತ್ತು ಅಂತಹ ಚಟುವಟಿಕೆಗಳಲ್ಲಿ ಭಾಗಿಯಾಗಿರುವವರ ವಿರುದ್ಧ ನಿರ್ದಯವಾಗಿ ಕ್ರಮ ಕೈಗೊಳ್ಳಲಾಗುವುದು. ಕರಾವಳಿಯಲ್ಲಿ ವಾತಾವರಣ ಹಾಳಾಗಿದೆ. ಒಂದು ಕಡೆ ಕೊಲೆ ಮಾಡಿದರೆ, ಇನ್ನೊಂದು ಕಡೆ ಪ್ರತೀಕಾರ ತೀರಿಸಿಕೊಳ್ಳಲಾಗುತ್ತಿದೆ. ಇಂತಹ ಘಟನೆಗಳು ಪುನರಾವರ್ತನೆಯಾಗುತ್ತಿದ್ದರೆ ಸಮಾಜ ಉಳಿಯುವುದಾದರೂ ಹೇಗೆ? ಜನಸಾಮಾನ್ಯರು ಜೀವನ ನಡೆಸಲು ಸಾಧ್ಯವೇ? ಎಂದು ಪ್ರಶ್ನಿಸಿದರು.
ಸರ್ಕಾರ ನಕ್ಸಲ್ ವಿರೋಧಿ ಪಡೆಯನ್ನು ವಿಸರ್ಜಿಸಲಿದ್ದು, ಆ ನಕ್ಸಲ್ ವಿರೋಧಿ ಪಡೆಯ ಅರ್ಧದಷ್ಟು ಭಾಗವನ್ನು ಕೋಮು ವಿರೋಧಿ ಪಡೆಯಾಗಿ ಪರಿವರ್ತಿಸಲಾಗಿದೆ. ಅಗತ್ಯವಿರುವ ಎಲ್ಲಾ ಅಧಿಕಾರ ಮತ್ತು ಸೌಲಭ್ಯಗಳನ್ನು ಅವರಿಗೆ ಒದಗಿಸಲಾಗುವುದು. ಶಿವಮೊಗ್ಗ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಹೆಚ್ಚಿನ ಗಮನ ಹರಿಸಿ ಕಾರ್ಯಾರಂಭ ಮಾಡಲಿವೆ ಎಂದು ಹೇಳಿದರು.