ಪುತ್ರ ಭರತ್ ಗೆಲ್ಲಿಸಲು ಬಸವರಾಜ ಬೊಮ್ಮಾಯಿ ಕರೆ

Most read

ಹಾವೇರಿ: ಕಾಂಗ್ರೆಸ್ ನ ದುರಾಡಳಿತದಿಂದ ನಮ್ಮ ಜನರನ್ನು ರಕ್ಷಣೆ ಮಾಡಲು ಈ ಚುನಾವಣೆಯಲ್ಲಿ ಅತಿ ಹೆಚ್ಚು ಮತಗಳಿಂದ ಭರತ್ ಬೊಮ್ಮಾಯಿಯವರನ್ನು ಗೆಲ್ಲಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ‌.


ಶಿಗ್ಗಾವಿಯಲ್ಲಿ ಇಂದು ಬಿಜೆಪಿ ಅಭ್ಯರ್ಥಿ ಭರತ್ ಬೊಮ್ಮಾಯಿಯವರ ನಾಮಪತ್ರ ಸಲ್ಲಿಕೆಗೂ ಮುನ್ನ ಶಿಗ್ಗಾವಿ ಪಟ್ಟಣದಲ್ಲಿ ನಡೆದ ಬೃಹತ್ ರೋಡ್ ಶೋ ನಲ್ಲಿ ಪಾಲ್ಗೊಂಡು ನಂತರ ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡಿದರು. ಭರತ್ ಬೊಮ್ಮಾಯಿವರಿಗೆ ಇಷ್ಟು ದೊಡ್ಡ ಶಕ್ತಿ ನೀಡಿದ್ದೀರಿ ನಿಮ್ಮ ಅಭೂತಪೂರ್ವ ಬೆಂಬಲಕ್ಕೆ ನಾನು ಚಿರ ಋಣಿ ಯಾಗಿದ್ದೇನೆ. ಮಾಜಿ ಮುಖ್ಯಮಂತ್ರಿ ಹಾಗೂ ನಮ್ಮೆಲ್ಲರ ನೆಚ್ಚಿನ ನಾಯಕರಾದ ಬಿ.ಎಸ್‌. ಯಡಿಯೂರಪ್ಪ ಅವರು ನನ್ನ ಚುನಾವಣೆಗೆ ನಾಲ್ಕು ಬಾರಿ ಶಿಗ್ಗಾವಿಗೆ ಬಂದಿದ್ದಾರೆ. ಅವರು ಶಿಗ್ಗಾವಿಗೆ ಕಾಲಿಟ್ಟಾಗಲೆಲ್ಲಾ ಬಿಜೆಪಿ ಇಲ್ಲಿ ಗೆದ್ದಿದೆ. ಯಡಿಯೂರಪ್ಪ ಅವರ ಆಶಿರ್ವಾದ ಎಷ್ಟಿದೆ ಎಂದರೆ ನನಗಿಂತ ಹೆಚ್ಚಿನ ಅಂತರದಿಂದ ಭರತ್‌ ಬೊಮ್ಮಾಯಿಯನ್ನು ಗೆಲ್ಲಿಸಬೇಕು ಎಂದು ಮನವಿ ಮಾಡಿದರು.

ಬಿ. ಎಸ್. ಯಡಿಯೂರಪ್ಪ ಹಾಗೂ ಕೇಂದ್ರ ಸಚಿವ ಪ್ರಲ್ಹಾದ್ ಜೋಷಿ ಅವರು ಬಿಜೆಪಿ ಕಟ್ಟಿದ್ದಾರೆ ಅವರ ಶ್ರಮದಿಂದ ಶಿಗ್ಗಾವಿಯಲ್ಲಿ ಐಟಿಐ, ಮೆಡಿಕಲ್ ಕಾಲೇಜು, ಆಸ್ಪತ್ರೆ ಬಂದಿದೆ. ಕ್ಷೇತ್ರದಲ್ಲಿ ಗಾರ್ಮೆಂಟ್ ಕಾರ್ಖಾನೆಯಿಂದ ಸುಮಾರು ಐದು ಸಾವಿರ ಹೆಣ್ಣು ಮಕ್ಕಳು ಉದ್ಯೋಗ ಪಡೆದಿದ್ದಾರೆ. ಕಾಂಗ್ರೆಸ್ ನ ದುರಾಡಳಿತದಿಂದ ನಮ್ಮ ಜನರನ್ನು ರಕ್ಷಣೆ ಮಾಡಬೇಕು. ಅದಕ್ಕಾಗಿ ಭರತ್ ಬೊಮ್ಮಾಯಿಯನ್ನು ಗೆಲ್ಲಿಸುವಂತೆ ಮನವಿ ಮಾಡಿದರು.

ಇದೇ ಸಂದರ್ಭದಲ್ಲಿ ಭರತ್ ಬೊಮ್ಮಾಯಿ ನಮ್ಮ ಕಾಲದ ಅಭಿವೃದ್ಧಿ ಮುಂದುವರೆಯಬೇಕು. ರೈತರು, ಹಿಂದುಳಿದವರು, ಮಹಿಳೆಯರು, ಯುವಕರ ಸಮಗ್ರ ಅಭಿವೃದ್ಧಿ ಮಾಡಬೇಕೆಂದು ಭರತ್ ಗೆ ಆದೇಶ ಮಾಡುತ್ತೇನೆ. ನಾನು ನಿಮ್ಮ ಜೊತೆಗೆ ಇರುತ್ತೇನೆ. ಚುನಾವಣೆಯಲ್ಲಿ ಯಾರೂ ಮೈಮರೆಯಬಾರದು, ಹತ್ತು ದಿನ ಎಲ್ಲರೂ ಬೂತ್ ಮಟ್ಟದಲ್ಲಿ ಸಕ್ರಿಯರಾಗಿ ಕಾರ್ಯ ನಿರ್ವಹಿಸಬೇಕು ಎಂದು ಹೇಳಿದರು.

ಈ ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಕೇಂದ್ರ ಸಚಿವರಾದ ಪ್ರಲ್ಹಾದ್ ಜೋಷಿ, ಸಂಸದ ಗೋವಿಂದ ಕಾರಜೋಳ, ಮಾಜಿ ಸಚಿವರಾದ ಸಿ.ಸಿ. ಪಾಟೀಲ್, ಮುರುಗೇಶ ನಿರಾಣಿ, ಬೈರತಿ ಬಸವರಾಜ್, ಶಂಕರ ಪಾಟೀಲ್ ಮುನೇನಕೊಪ್ಪ, ವಿಧಾನ ಸಭೆ ವಿರೋಧ ಪಕ್ಷದ ಉಪ ನಾಯಕ ಅರವಿಂದ ಬೆಲ್ಲದ, ವಿಧಾನ ಪರಿಷತ್ ಪ್ರತಿಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಸೇರಿದಂತೆ ಅನೇಕ ನಾಯಕರು ಪಾಲ್ಗೊಂಡಿದ್ದರು.

More articles

Latest article