Sunday, September 8, 2024

ರಾಜ್ಯದ ನಾಲ್ಕೂವರೆ ಕೋಟಿ ಫಲಾನುಭವಿಗಳನ್ನು ಬಿಜೆಪಿ ಹೀಯಾಳಿಸಿ ಅವಮಾನಿಸುತ್ತಿದೆ: ಸಿ.ಎಂ. ಸಿದ್ದರಾಮಯ್ಯ

Most read

ನೆಲಮಂಗಲ ಮಾ. 4: ನಾವು ನಿಮ್ಮನ್ನು ದೇವರು-ಧರ್ಮದ ಹೆಸರಲ್ಲಿ ಭಾವನಾತ್ಮಕವಾಗಿ ಕೆರಳಿಸಿ ಅಧಿಕಾರ ನಡೆಸುವುದಿಲ್ಲ. ಅನ್ನ-ಆರೋಗ್ಯ-ಅಕ್ಷರ-ಸೂರು-ನೀರಿಗಾಗಿ ಕಾರ್ಯಕ್ರಮ ಜಾರಿ ಮಾಡಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ ಹಾಗೂ ತುಮಕೂರು ಜಿಲ್ಲೆಗಳ ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್, ಇವರುಗಳ ಸಂಯುಕ್ತಾಶ್ರಯದಲ್ಲಿ ಆಯೋಜಿಸಿದ್ದ ವೃಷಭಾವತಿ ಏತ ನೀರಾವರಿ ಯೋಜನೆಯ ಶಂಕುಸ್ಥಾಪನೆ ಮತ್ತು ನೆಲಮಂಗಲ ವಿಧಾನಸಭಾ ಕ್ಷೇತ್ರದ ವಿವಿಧ ಸರ್ಕಾರಿ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದರು.

3 ಸಾವಿರ ಕೋಟಿ ರೂಪಾಯಿಯನ್ನು ಕೆ.ಸಿ.ವ್ಯಾಲಿ ಮತ್ತು ಎವ್.ಎನ್.ವ್ಯಾಲಿಗೆ ಮತ್ತು ಈಗ ವೃಷಭಾವತಿ ಯೋಜನೆಯನ್ನು 2240 ಕೋಟಿ ಖರ್ಚು ಮಾಡಿ ಮಾಡುತ್ತಿದ್ದೇವೆ. ಇದರಿಂದ ಬೆಂಗಳೂರು ನಗರ, ಗ್ರಾಮಾಂತರ, ತುಮಕೂರು ಜಿಲ್ಲೆಗಳ ಜನರ ನೀರಿನ ಬವಣೆ ಶಾಶ್ವತವಾಗಿ ತೀರುತ್ತದೆ. ಮೊದಲ ಹಂತದಲ್ಲಿ 70 ಕೆರೆಗಳಿಗೆ ನೀರು ತುಂಬಿಸುವ ಯೋಜನೆ ಇದಾಗಿದೆ. ಇದರಿಂದ ನಾಲ್ಕೂ ಜಿಲ್ಲೆಗಳ ಅಂತರ್ಜಲ ಪ್ರಮಾಣ ವೃದ್ಧಿಯಾಗುತ್ತದೆ. ಜಮೀನುಗಳಿಗೆ ನೀರಿನ ಆಸರೆ ಹೆಚ್ಚಾಗಿ ಪರಿಣಾಮವಾಗಿ ಜನರ ಆರ್ಥಿಕ ಶಕ್ತಿಯೂ ಹೆಚ್ಚಾಗುತ್ತದೆ ಎಂದು ವಿವರಿಸಿದರು.

ಶಾಸಕ ಶ್ರೀನಿವಾಸ್ ಅವರು ಸರ್ಕಾರ ಅಧಿಕಾರಕ್ಕೆ ಬಂದ ಕೇವಲ 9 ತಿಂಗಳಲ್ಲಿ 850 ಕೋಟಿಗೂ ಹೆಚ್ಚು ಹಣವನ್ನು ಕ್ಷೇತ್ರಕ್ಕೆ ತಂದಿದ್ದಾರೆ. ಶ್ರೀನಿವಾಸ್ ಬಹಳ ಕ್ರಿಯಾಶೀಲ ಶಾಸಕ. ಹಿಡಿದ ಕೆಲಸ ಬಿಡಲ್ಲ. ನನ್ನ ಬಳಿಗೆ ಬಂದಾಗೆಲ್ಲಾ ನೆಲಮಂಗಲದ ಅಭಿವೃದ್ಧಿ ಬಗ್ಗೆಯೇ ಚರ್ಚೆ ಮಾಡಿ ಕ್ಷೇತ್ರದ ಅಭಿವೃದ್ಧಿಗೆ ನೂರಾರು ಕೋಟಿ ಹಣ ತರುತ್ತಿದ್ದಾರೆ. ಆದ್ದರಿಂದ ಶ್ರೀನಿವಾಸ್ ಅವರನ್ನು ಶಾಶ್ವತವಾಗಿ ಕಾಂಗ್ರೆಸ್ ನಿಂದ ಗೆಲ್ಲಿಸಿ ಎಂದು ಕರೆ ನೀಡಿದರು.

ರಾಜ್ಯದ ಜನರಿಗೆ ಅನ್ನ ಕೊಡಬೇಕು. ಅದಕ್ಕಾಗಿ ಪ್ರತಿ ಕೆಜಿ ಅಕ್ಕಿಗೆ 34 ರೂಪಾಯಿ ಕೊಡ್ತೀವಿ. ನಮಗೆ ಅಕ್ಕಿ ಕೊಡಿ ಎಂದು ಕೇಂದ್ರಕ್ಕೆ ಕೇಳಿದೆವು. ಕೇಂದ್ರದ ಬಿಜೆಪಿ ರಾಜ್ಯದ ಜನರಿಗೆ ಅನ್ನ ಕೊಡಲು ನಿರಾಕರಿಸಿತು. ಬಡವರ ಅನ್ನ ವಿರೋಧಿಸುವ ಬಿಜೆಪಿಗೆ ನಾಚಿಕೆ ಕೂಡ ಆಗಲಿಲ್ಲ. ಬಳಿಕ ನಾವೇ ಅಕ್ಕಿ ಬದಲಿಗೆ ಹಣವನ್ನು ಪ್ರತಿಯೊಬ್ಬರ ಖಾತೆಗೆ ಹಾಕಿದರೆ, ಈ ಫಲಾನುಭವಿಗಳನ್ನು ಬಿಜೆಪಿ ನಿರಂತರವಾಗಿ ಅವಮಾನಿಸುತ್ತಿದೆ. ಬಡವರನ್ನು ಅವಮಾನಿಸುವುದು ಬಿಜೆಪಿಗೆ ಚಾಳಿ ಆಗಿಬಿಟ್ಟಿದೆ. ಇದನ್ನು ತಕ್ಷಣ ನಿಲ್ಲಿಸಿ ಎಂದು ಎಚ್ಚರಿಸಿದರು.

ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ , ಆಹಾರ ಮತ್ತು ನಾಗರಿಕ ಸರಬರಾಜು ವ್ಯವಹಾರ ಸಚಿವ ಕೆ.ಹೆಚ್. ಮುನಿಯಪ್ಪ,
ವಕ್ಫ್ ಮತ್ತು ಅಲ್ಪಸಂಖ್ಯಾತ ಕಲ್ಯಾಣ ಸಚಿವರಾದ ಜಮೀರ್ ಅಹಮದ್ ಖಾನ್, ಸಣ್ಣ ನೀರಾವರಿ, ವಿಜ್ಞಾನ & ತಂತ್ರಜ್ಞಾನ ಸಚಿವರಾದ ಶ್ರೀ ಎನ್.ಎಸ್. ಬೋಸರಾಜ್, ಕರ್ನಾಟಕ ವಿದ್ಯುನ್ಮಾನ ಅಭಿವೃದ್ಧಿ ನಿಗಮ ನಿಯಮಿತದ ಅಧ್ಯಕ್ಷರು ಹಾಗೂ ಶಾಸಕರಾದ ಶ್ರೀ ಶರತ್ ಬಚ್ಚೇಗೌಡ , ಮಾಜಿ ಮುಖ್ಯಮಂತ್ರಿಗಳಾದ ಶ್ರೀ ವೀರಪ್ಪ ಮೊಯ್ಲಿ, ಮಾಜಿ ಸಚಿವರಾದ ಶಾಸಕ ಎಸ್.ಟಿ.ಸೋಮಶೇಖರ್ ಹಾಗೂ ನೆಲಮಂಗಲ ವಿಧಾನಸಭಾ ಕ್ಷೇತ್ರದ ಶಾಸಕರಾದ ಎನ್. ಶ್ರೀನಿವಾಸ್ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.

More articles

Latest article