ಬೆಂಗಳೂರು: ಬಿಜೆಪಿ ಶಾಸಕ ಸುನಿಲ್ ಕುಮಾರ್ ಅವರಿಗೆ ಸೌಜನ್ಯ ಹತ್ಯೆ ಮಾಡಿದವರು ಯಾರು ಎಂಬ ಮಾಹಿತಿ ಇದೆ ಎಂದು ಸ್ವತಃ ಬಿಜೆಪಿ ಮುಖಂಡ ನಳಿನ್ ಕುಮಾರ್ ಕಟೀಲ್ ಅವರು 2023ರಲ್ಲಿ ಪಕ್ಷದ ಅಧ್ಯಕ್ಷರು ಹಾಗೂ ಸಂಸದರಾಗಿದ್ದ ಅವಧಿಯಯಲ್ಲಿ ಹೇಳಿದ್ದಾರೆ. ಆದರೆ ಇದುವರೆಗೂ ಬಿಜೆಪಿ ಸೌಜನ್ಯ ಹಂತಕರ ಬಗ್ಗೆ ಮಾಹಿತಿ ಇದ್ದರೂ ಅಂದಿನಿಂದ ಇಂದಿನವರೆಗೂ ಗೌಪ್ಯವಾಗಿ ಇಟ್ಟಿರುವುದೇಕೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ಖರ್ಗೆ ಪ್ರಶ್ನಿಸಿದ್ದಾರೆ.
ಸಾಮಾಜಿಕ ಜಾಲತಾಣ ಎಕ್ಸ್ ಮೂಲಕ ಅವರು ಸೌಜನ್ಯ ಹಂತಕರ ಮಾಹಿತಿ ನೀಡುವಂತೆ ಸವಾಲು ಹಾಕಿದ್ದಾರೆ. ಕಟೀಲ್ ಅವರ ಈ ಮಾತನ್ನು ಗಂಭೀರವಾಗಿ ತೆಗೆದುಕೊಳ್ಳಬೇಕಿದೆ. ಈಗಲೂ ಧೃಮಸ್ಥಳ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (SIT) ಮುಂದೆ ಮಾಹಿತಿ ನೀಡಲು ಮುಕ್ತ ಅವಕಾಶವಿದೆ. ಸೌಜನ್ಯ ಹಂತಕರ ಬಗ್ಗೆ ಮಾಹಿತಿ ನೀಡುವ ಬಿಜೆಪಿ ನಾಯಕರಿಗೆ ರಕ್ಷಣೆ ಒದಗಿಸುವುದು ನಮ್ಮ ಸರ್ಕಾರದ ಜವಾಬ್ದಾರಿ ಎಂದಿದ್ದಾರೆ.
ಬಿಜೆಪಿಯವರು ಸೌಜನ್ಯ ಹತ್ಯೆಗೆ ನ್ಯಾಯ ಒದಗಿಸುವ ತಮ್ಮ ವಾಗ್ದಾನವನ್ನು ನೆನಪು ಮಾಡಿಕೊಳ್ಳಲಿ, ಹಂತಕರ ಬಗ್ಗೆ ತಮಗಿರುವ ಮಾಹಿತಿ ಬಹಿರಂಗಪಡಿಸಿ ತಮ್ಮ ಬದ್ಧತೆಯನ್ನು ನಿರೂಪಿಸಲಿ ಎಂದು ಧರ್ಮಸ್ಥಳಕ್ಕೆ ಯಾತ್ರೆ ನಡೆಸಿರುವ ಬಿಜೆಪಿ ಮುಖಂಡರಗೆ ಸವಾಲು ಹಾಕಿದ್ದಾರೆ.