ಬಜೆಟ್‌ ಮುಖ್ಯಾಂಶಗಳು: ಮೇಕೆದಾಟು ಸಮತೋಲನ ಜಲಾಶಯ ನಿರ್ಮಾಣಕ್ಕೆ ಒತ್ತು

Most read

ಜಲಸಂಪನ್ಮೂಲ:
ಹಾ! ಗಂಟಲು ಒಣಗಿದೆ!! ತಕೋ ಈ ಬಂಗಾರದ ಸರಪಳಿ ಬದಲಾಗಿ ಒಂದು ಗುಟುಕು ನೀರು ಕೊಡು – ವಿಲ್ಸನ್ ಕಟೀಲ್

  1. ನೀರಾವರಿ ಯೋಜನೆಗಳಡಿ ನೀರಿನ ಬಳಕೆಯಲ್ಲಿ ದಕ್ಷತೆ ಹೆಚ್ಚಿಸಲು ಹಾಗೂ ನೀರು ನಿರ್ವಹಣೆಯಲ್ಲಿ ಸುಧಾರಣೆ ತರುವ ನಿಟ್ಟಿನಲ್ಲಿ ಕರ್ನಾಟಕ ನೀರಾವರಿ (ತಿದ್ದುಪಡಿ) ವಿಧೇಯಕ 2024ನ್ನು ತಿದ್ದುಪಡಿ ಮಾಡಿ ಜಾರಿಗೊಳಿಸಲಾಗಿದೆ.
  2. ಎತ್ತಿನಹೊಳೆ ಸಮಗ್ರ ಕುಡಿಯುವ ನೀರಿನ ಯೋಜನೆಯಡಿ ನೀರನ್ನು ಮೇಲೆತ್ತಿ ಗುರುತ್ವಾ ಕಾಲುವೆಯ ಸರಪಳಿ: 32.5 ಕಿ.ಮೀ ವರೆಗೆ ಹರಿಸಲಾಗಿದೆ. ಪ್ರಸಕ್ತ ಸಾಲಿನಲ್ಲಿ ಎಲ್ಲಾ ಎಂಟು ವಿಯರ್‌ಗಳಲ್ಲಿ ಲಭ್ಯವಾಗುವ ನೀರನ್ನು ಗುರುತ್ವಾ ಕಾಲುವೆಯ ಸರಪಳಿ: 241 ಕಿ.ಮೀ ವರೆಗೆ ಹರಿಸಲಾಗುವುದು. ಈ ಯೋಜನೆಯನ್ನು ಕಾಲಮಿತಿಯೊಳಗೆ ಪೂರ್ಣಗೊಳಿಸಲು ಕ್ರಮಕೈಗೊಳ್ಳಲಾಗುವುದು.
  3. ಭದ್ರಾ ಮೇಲ್ದಂಡೆ ಯೋಜನೆಗೆ 2023-24ರ ಕೇಂದ್ರ ಸರ್ಕಾರದ ಆಯವ್ಯಯದಲ್ಲಿ ಘೋಷಿಸಿದ 5,300 ಕೋಟಿ ರೂ. ಅನುದಾನ ಇನ್ನೂ ಬಿಡುಗಡೆಯಾಗಿರುವುದಿಲ್ಲ. ಆದರೂ, ರಾಜ್ಯ ಸರ್ಕಾರವು ಅಗತ್ಯ ಅನುದಾನವನ್ನು ಒದಗಿಸಿ ಈ ಯೋಜನೆಯನ್ನು ಪೂರ್ಣಗೊಳಿಸಲು ಕ್ರಮವಹಿಸುತ್ತಿದೆ. ತರೀಕೆರೆ ಏತ ನೀರಾವರಿ ಯೋಜನೆಯಡಿ 79 ಕೆರೆಗಳನ್ನು ತುಂಬಿಸುವ ಮೂಲಕ 49,790 ಎಕರೆ ಸೂಕ್ಷ್ಮ ನೀರಾವರಿ ಸಾಮರ್ಥ್ಯ ಕಲ್ಪಿಸಲಾಗಿದೆ. ಪ್ರಸಕ್ತ ಸಾಲಿನಲ್ಲಿ 2,611 ಕೋಟಿ ರೂ. ಅಂದಾಜು ಮೊತ್ತದ ಚಿತ್ರದುರ್ಗ ಶಾಖಾ ಕಾಲುವೆ ಕಾಮಗಾರಿಗಳನ್ನು ಪೂರ್ಣಗೊಳಿಸುವ ಮೂಲಕ ಹೊಸದುರ್ಗ, ಹೊಳಲ್ಕೆರೆ, ಜಗಳೂರು, ಮೊಳಕಾಲ್ಮೂರು, ಚಳ್ಳಕೆರೆ ಮತ್ತು ಪಾವಗಡ ತಾಲ್ಲೂಕುಗಳಲ್ಲಿನ 30 ಕೆರೆಗಳನ್ನು ತುಂಬಿಸಿ ಒಂದು ಲಕ್ಷದ ಎಪ್ಪತ್ತೇಳು ಸಾವಿರ ಎಕರೆ ಪ್ರದೇಶಕ್ಕೆ ಸೂಕ್ಷ್ಮ ನೀರಾವರಿ ಸಾಮರ್ಥ್ಯವನ್ನು ಕಲ್ಪಿಸಲಾಗುವುದು.
  4. ಕೃಷ್ಣ ಮೇಲ್ದಂಡೆ ಯೋಜನೆ ಹಂತ-3ರ ವ್ಯಾಪ್ತಿಯ ಆಲಮಟ್ಟಿ ಅಣೆಕಟ್ಟಿನ ಗೇಟನ್ನು 524.256 ಮೀಟರ್‌ವರೆಗೆ ಎತ್ತರಿಸುವುದರಿಂದ ಮುಳುಗಡೆಯಾಗುವ ಜಮೀನುಗಳನ್ನು ಒಪ್ಪಂದ ಐತೀರ್ಪಿನ (Consent Award) ಮುಖಾಂತರ ಒಂದೇ ಹಂತದಲ್ಲಿ ಭೂಸ್ವಾಧೀನಪಡಿಸಿಕೊಂಡು ರೈತರಿಗೆ ಪರಿಹಾರ ವಿತರಣೆಗೆ ಕ್ರಮವಹಿಸಲಾಗುವುದು. ಅಲ್ಲದೇ, 2.01 ಲಕ್ಷ ಎಕರೆ ನೀರಾವರಿ ಸಾಮರ್ಥ್ಯ ಕಲ್ಪಿಸುವ ಬಾಕಿ ಕಾಮಗಾರಿಗಳನ್ನು ಅನುಷ್ಠಾನಗೊಳಿಸಲು ಕ್ರಮವಹಿಸಲಾಗುವುದು.
  5. ಮೇಕೆದಾಟು ಸಮತೋಲನ ಜಲಾಶಯ ಯೋಜನೆಯ ಪೂರ್ವ ಸಿದ್ಧತಾ ಕಾರ್ಯ ಅಂತಿಮಗೊಂಡಿದ್ದು, ಕೇಂದ್ರ ಸರ್ಕಾರದ ಸಕ್ಷಮ ಪ್ರಾಧಿಕಾರಗಳ ತೀರುವಳಿ ದೊರೆತ ಕೂಡಲೇ ಯೋಜನೆಯನ್ನು ಅನುಷ್ಠಾನಗೊಳಿಸಲಾಗುವುದು.
  6. ಕಳಸಾ-ಬಂಡೂರಾ ನಾಲಾ ತಿರುವು ಯೋಜನೆಯಡಿ 3.9 ಟಿಎಂಸಿ ನೀರಿನ ಬಳಕೆಗಾಗಿ ಕೇಂದ್ರ ಸರ್ಕಾರದಿಂದ ತೀರುವಳಿಗಳನ್ನು ನಿರೀಕ್ಷಿಸಿ ಈಗಾಗಲೇ ಯೋಜನಾ ಕಾಮಗಾರಿಗಳನ್ನು ಕೆಲವು ಷರತ್ತುಗಳೊಂದಿಗೆ ಗುತ್ತಿಗೆ ವಹಿಸಲಾಗಿದೆ. ಕೇಂದ್ರ ಸರ್ಕಾರದ ಅನುಮೋದನೆ ದೊರೆತ ಕೂಡಲೇ ಕಾಮಗಾರಿಗಳನ್ನು ಪ್ರಾರಂಭಿಸಲಾಗುವುದು.
  7. ಕೃಷ್ಣಾ ಕಣಿವೆ, ಕಾವೇರಿ ಕಣಿವೆ ಹಾಗೂ ಇತರ ನದಿಗಳ ಕಣಿವೆಯ ವಿವಿಧ ಯೋಜನೆಗಳಡಿ ಬಾಕಿ ಇರುವ ಕಾಮಗಾರಿಗಳನ್ನು ಕೈಗೆತ್ತಿಕೊಂಡು ಪ್ರಸಕ್ತ ಸಾಲಿನಲ್ಲಿ ಪೂರ್ಣಗೊಳಿಸಲು ಕ್ರಮವಹಿಸಲಾಗುವುದು. (ಯೋಜನೆಯ ವಿವರಗಳನ್ನು ಅನುಬಂಧ-1 ರಲ್ಲಿ ಲಗತ್ತಿಸಿದೆ)
  8. ಕೃಷ್ಣಾ ಕಣಿವೆಯ ಅನುಷ್ಠಾನ ಹಂತದಲ್ಲಿರುವ ಆಧುನೀಕರಣ ಹಾಗೂ ಏತ ನೀರಾವರಿ ಯೋಜನೆಗಳನ್ನು PMKSY – AIBP ಯೋಜನೆಯಡಿ ಕೇಂದ್ರ ಸರ್ಕಾರದ ಸಹಾಯಧನ ಪಡೆಯಲು ಸೂಕ್ತ ಪ್ರಸ್ತಾವನೆಯನ್ನು ಸಲ್ಲಿಸಲಾಗುವುದು. (ಯೋಜನೆಯ ವಿವರಗಳನ್ನು ಅನುಬಂಧ-2 ರಲ್ಲಿ ಲಗತ್ತಿಸಿದೆ)
  9. ಜಲಸಂಪನ್ಮೂಲ ಇಲಾಖೆಯಲ್ಲಿ ಕಾಮಗಾರಿಗಳ ಅಂದಾಜು ತಯಾರಿಕೆಯಲ್ಲಿ ಏಕರೂಪದ ತಾಂತ್ರಿಕ ಮಾನದಂಡಗಳನ್ನು ಜಾರಿಗೊಳಿಸಲಾಗುವುದು.
  10. ತುಂಗಭದ್ರಾ ಜಲಾಶಯದಲ್ಲಿ ತುಂಬಿರುವ ಹೂಳಿನಿಂದಾಗಿ ನೀರಿನ ಸಂಗ್ರಹಣೆಯಲ್ಲಿ ಆಗಿರುವ ಕೊರತೆಯನ್ನು ಸರಿದೂಗಿಸಲು ಕೊಪ್ಪಳ ಜಿಲ್ಲೆಯಲ್ಲಿ ನವಲಿ ಸಮತೋಲನಾ ಜಲಾಶಯ ನಿರ್ಮಾಣವೂ ಸೇರಿದಂತೆ ಪರ್ಯಾಯ ಮಾರ್ಗೋಪಾಯಗಳ ಬಗ್ಗೆ ಆಂಧ್ರ ಪ್ರದೇಶ ಮತ್ತು ತೆಲಂಗಾಣ ರಾಜ್ಯಗಳೊಂದಿಗೆ ಚರ್ಚಿಸಿ ಅಂತಿಮಗೊಳಿಸಲಾಗುವುದು.
  11. ರಾಜ್ಯದ ಪ್ರಮುಖ ಅಣೆಕಟ್ಟು ಗೇಟುಗಳ ಸದೃಢತೆಯನ್ನು ತಾಂತ್ರಿಕ ಪರಿಶೀಲನೆಗೊಳಪಡಿಸಿ ಅಗತ್ಯ ಕಂಡುಬಂದಲ್ಲಿ ಗೇಟುಗಳನ್ನು ದುರಸ್ತಿಗೊಳಿಸಲು ಮತ್ತು ಬದಲಿಸಲು ಆದ್ಯತೆಯ ಮೇಲೆ ಕ್ರಮವಹಿಸಲಾಗುವುದು.
    ಸಣ್ಣ ನೀರಾವರಿ
  12. ಎತ್ತಿನಹೊಳೆಯ ಯೋಜನೆಯಿಂದ ತುಮಕೂರು ಜಿಲ್ಲೆಯ ಮಧುಗಿರಿ ತಾಲ್ಲೂಕಿನ 45 ಕೆರೆಗಳನ್ನು ಹಾಗೂ ಕೊರಟಗೆರೆ ತಾಲ್ಲೂಕಿನ 62 ಕೆರೆಗಳನ್ನು ತುಂಬಿಸಿ ಅಂತರ್ಜಲ ಹೆಚ್ಚಿಸುವ ಯೋಜನೆಯನ್ನು 553 ಕೋಟಿ ರೂ. ಮೊತ್ತದಲ್ಲಿ ಅನುಷ್ಠಾನಗೊಳಿಸಲು ಕ್ರಮವಹಿಸಲಾಗುವುದು.
  13. ಪ್ರಗತಿಯಲ್ಲಿರುವ ಈ ಕೆಳಗಿನ ಯೋಜನೆಗಳನ್ನು ಪ್ರಸಕ್ತ ಸಾಲಿನಲ್ಲಿ ಪೂರ್ಣಗೊಳಿಸಲಾಗುವುದು.
    i) 1,080 ಕೋಟಿ ರೂ. ಮೊತ್ತದ ವೃಷಭಾವತಿ ವ್ಯಾಲಿ ಮೊದಲನೇ ಹಂತದ 70 ಕೆರೆ ತುಂಬಿಸುವ ಯೋಜನೆ;
    ii) 70 ಕೋಟಿ ರೂ. ಮೊತ್ತದ ಹೆಚ್.ಎನ್ ವ್ಯಾಲಿ 2ನೇ ಹಂತದ ಯೋಜನೆಯಡಿ 24 ಕೆರೆ ತುಂಬಿಸುವ ಯೋಜನೆ;
    iii) 93.50 ಕೋಟಿ ರೂ. ಮೊತ್ತದ ಬೆಂಗಳೂರು ಪೂರ್ವ ತಾಲ್ಲೂಕಿನ 18 ಕೆರೆ ತುಂಬಿಸುವ ಯೋಜನೆ ಹಾಗೂ ಇತರೆ ಯೋಜನೆಗಳು (ಯೋಜನೆಯ ವಿವರಗಳನ್ನು
    ಅನುಬಂಧ-3 ರಲ್ಲಿ ಲಗತ್ತಿಸಿದೆ)
  14. ಪ್ರಸಕ್ತ ಸಾಲಿನಲ್ಲಿ ರಾಜ್ಯಾದ್ಯಂತ ಸಣ್ಣ ನೀರಾವರಿ ಯೋಜನೆಗಳಾದ ಕೆರೆಗಳ ಆಧುನೀಕರಣ, ಅಣೆಕಟ್ಟು ಮತ್ತು ಪಿಕಪ್, ಕಿಂಡಿ ಅಣೆಕಟ್ಟು, ಏತ ನೀರಾವರಿ, ನಿಷ್ಕ್ರಿಯ ಯೋಜನೆಗಳ ಪುನರುಜ್ಜೀವನ ಇತ್ಯಾದಿ ಯೋಜನೆಗಳಡಿ ಒಟ್ಟಾರೆ 2,000 ಕೋಟಿ ರೂ. ಮೊತ್ತದ ಹೊಸ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗುವುದು.
    ಶಾಲಾ ಶಿಕ್ಷಣ:
    ಶೋಷಿತರ ಬಹಿಷ್ಕೃತರ ಕಣ್ಣೀರನ್ನು ತೊಡೆದು ಹಾಕು, ಜಾತಿವ್ಯವಸ್ಥೆ ಸಂಕೋಲೆಯನ್ನು ಮುರಿದು ಶಿಕ್ಷಣ ಪಡೆದುಕೋ….. – ಸಾವಿತ್ರಿಬಾಯಿ ಪುಲೆ
  15. ಪೂರ್ವ ಪ್ರಾಥಮಿಕದಿಂದ ಪದವಿ ಪೂರ್ವ ಹಂತದವರೆಗೂ ಒಂದೇ ಸೂರಿನಡಿ ಗುಣಮಟ್ಟದ ಶಿಕ್ಷಣ ನೀಡಲು ನಮ್ಮ ಸರ್ಕಾರದ ಹಿಂದಿನ ಅವಧಿಯಲ್ಲಿ ಪ್ರಾರಂಭಿಸಲಾಗಿರುವ ಕರ್ನಾಟಕ ಪಬ್ಲಿಕ್ ಶಾಲೆಗಳನ್ನು ವಿಸ್ತರಿಸಲು ಉದ್ದೇಶಿಸಿದೆ. ಏಷಿಯನ್ ಡೆವಲಪ್‌ಮೆಂಟ್ ಬ್ಯಾಂಕ್ ನೆರವಿನೊಂದಿಗೆ 2,500 ಕೋಟಿ ರೂ. ವೆಚ್ಚದಲ್ಲಿ 500 ಹೊಸ ಕರ್ನಾಟಕ ಪಬ್ಲಿಕ್ ಶಾಲೆಗಳನ್ನು ಪ್ರಾರಂಭಿಸಲಾಗುವುದು.
  16. ಶಾಲಾ ಮಕ್ಕಳ ಅಪೌಷ್ಟಿಕತೆ ನಿವಾರಿಸುವ ನಿಟ್ಟಿನಲ್ಲಿ ಪ್ರಸ್ತುತ ೫೩ ಲಕ್ಷ ಮಕ್ಕಳಿಗೆ ವಾರದಲ್ಲಿ ಎರಡು ದಿನ ವಿತರಿಸಲಾಗುತ್ತಿರುವ ಮೊಟ್ಟೆ/ ಬಾಳೆಹಣ್ಣನ್ನು ಅಜೀಮ್ ಪ್ರೇಮ್‌ಜಿ ಫೌಂಡೇಶನ್ ಸಹಯೋಗದೊಂದಿಗೆ 1,500 ಕೋಟಿ ರೂ. ವೆಚ್ಚದಲ್ಲಿ ವಾರದಲ್ಲಿ ಆರು ದಿನಕ್ಕೆ ವಿಸ್ತರಿಸಲಾಗಿದೆ. ಈ ಯೋಜನೆಯನ್ನು 2025-26ನೇ ಸಾಲಿನಲ್ಲಿಯೂ ಮುಂದುವರೆಸಲಾಗುವುದು.
  17. ಶಾಲಾ ಮಕ್ಕಳಿಗೆ ಶ್ರೀ ಸತ್ಯ ಸಾಯಿ ಅನ್ನಪೂರ್ಣ ಟ್ರಸ್ಟ್ ವತಿಯಿಂದ ಪ್ರಸ್ತುತ ವಾರದಲ್ಲಿ ಮೂರು ದಿನ ಸಾಯಿ ಶ್ಯೂರ್ ರಾಗಿ ಹೆಲ್ತ್ ಮಿಕ್ಸ್ ಪುಡಿಯನ್ನು ಬಿಸಿ ಹಾಲಿನೊಂದಿಗೆ ಮಿಶ್ರಣ ಮಾಡಿ ವಿತರಿಸಲಾಗುತ್ತಿದೆ. ಈ ಕಾರ್ಯಕ್ರಮವನ್ನು ವಾರದ ಐದು ದಿನಗಳಿಗೆ ವಿಸ್ತರಿಸಲಾಗುವುದು. ಒಟ್ಟಾರೆ 100 ಕೋಟಿ ರೂ. ವೆಚ್ಚದ ಈ ಯೋಜನೆಯ ಶೇ.25 ರಷ್ಟು ವೆಚ್ಚವನ್ನು ರಾಜ್ಯ ಸರ್ಕಾರದಿಂದ ಭರಿಸಲಾಗುವುದು.
  18. ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳ ಅತಿಥಿ ಶಿಕ್ಷಕರು ಮತ್ತು ಸರ್ಕಾರಿ ಪದವಿ ಪೂರ್ವ ಕಾಲೇಜುಗಳ ಅತಿಥಿ ಉಪನ್ಯಾಸಕರಿಗೆ ಪ್ರಸ್ತುತ ನೀಡಲಾಗುತ್ತಿರುವ ಮಾಸಿಕ ಗೌರವಧನವನ್ನು ತಲಾ 2,000 ರೂ. ಹೆಚ್ಚಿಸಲಾಗುವುದು.
  19. ಸರ್ಕಾರಿ ಶಾಲೆಗಳಲ್ಲಿ ಬಿಸಿಯೂಟ ತಯಾರಿಸುವ ಸಿಬ್ಬಂದಿಗೆ ನೀಡುತ್ತಿರುವ ಮಾಸಿಕ ಗೌರವಧನವನ್ನು ತಲಾ 1,000 ರೂ. ಹೆಚ್ಚಿಸಲಾಗುವುದು.
  20. ರಾಜ್ಯದ ಅರ್ಹ 100 ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗಳನ್ನು ಪ್ರೌಢ ಶಾಲೆಗಳನ್ನಾಗಿ ಹಾಗೂ 50 ಪ್ರೌಢಶಾಲೆಗಳನ್ನು ಪದವಿ ಪೂರ್ವ ಕಾಲೇಜುಗಳನ್ನಾಗಿ ಉನ್ನತೀಕರಿಸಲಾಗುವುದು.
  21. LKG ಯಿಂದ ದ್ವಿತೀಯ ಪಿ.ಯು.ಸಿ ವರೆಗಿನ ಎಲ್ಲಾ ತರಗತಿಗಳ ವಿದ್ಯಾರ್ಥಿಗಳು, ಆಯಾ ತರಗತಿಗೆ ತಕ್ಕಂತೆ ಕಲಿಕೆಯ ಮಟ್ಟವನ್ನು ಹೊಂದುವ ನಿಟ್ಟಿನಲ್ಲಿ ಮೂರು ವರ್ಷಗಳ ಮಹತ್ವಾಕಾಂಕ್ಷಿ ಕಾರ್ಯಕ್ರಮವನ್ನು ಜಾರಿಗೊಳಿಸಲಾಗುವುದು. ಈ ಮೂಲಕ SSLC ಮತ್ತು PUC ಪರೀಕ್ಷೆಗಳ ಫಲಿತಾಂಶದಲ್ಲಿ ಸುಧಾರಣೆ ತರಲಾಗುವುದು. ಇದಕ್ಕಾಗಿ, ಈ ಕೆಳಕಂಡ ಉಪಕ್ರಮಗಳನ್ನು ಕೈಗೊಳ್ಳಲಾಗುವುದು:
    i) ಪ್ರಸ್ತುತ 2,619 ಸರ್ಕಾರಿ ಶಾಲೆಗಳ ಪೂರ್ವ ಪ್ರಾಥಮಿಕ ತರಗತಿಗಳಿಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಒಟ್ಟು 90,195 ವಿದ್ಯಾರ್ಥಿಗಳು ದಾಖಲಾಗಿರುತ್ತಾರೆ. ಈ ಯೋಜನೆಯನ್ನು 70 ಕೋಟಿ ರೂ. ವೆಚ್ಚದಲ್ಲಿ ಒಟ್ಟಾರೆ 5,000 ಶಾಲೆಗಳಿಗೆ ವಿಸ್ತರಿಸಲಾಗುವುದು.
    ii) ʻಕಲಿಕಾ ಚಿಲುಮೆʼ ಕಾರ್ಯಕ್ರಮದಡಿ ಒಂದರಿಂದ ಐದನೇ ತರಗತಿವರೆಗಿನ ವಿದ್ಯಾರ್ಥಿಗಳಿಗೆ ಸಂತಸದಾಯಕ ಕಲಿಕಾ ಅನುಭವ ಒದಗಿಸುವುದು.
    iii) ʻಗಣಿತ ಗಣಕʼ ಕಾರ್ಯಕ್ರಮದಡಿ 3 ರಿಂದ 5ನೇ ತರಗತಿ ವಿದ್ಯಾರ್ಥಿಗಳಿಗೆ ಫೋನ್ ಮೂಲಕ ವೈಯಕ್ತಿಕ ಬೋಧನೆಯೊಂದಿಗೆ ಬುನಾದಿ ಗಣಿತ ಕೌಶಲ್ಯವನ್ನು ಅಭಿವೃದ್ಧಿಪಡಿಸಿ ರಾಜ್ಯಾದ್ಯಂತ ವಿಸ್ತರಿಸುವುದು.
    iv) ʻಓದು ಕರ್ನಾಟಕʼ ಯೋಜನೆಯಡಿ 4 ಮತ್ತು 5ನೇ ತರಗತಿ ವಿದ್ಯಾರ್ಥಿಗಳಿಗೆ ಬುನಾದಿ ಸಾಕ್ಷರತೆ ಹಾಗೂ ಸಂಖ್ಯಾಜ್ಞಾನದ ಕೌಶಲ್ಯಗಳನ್ನು ಅಭಿವೃದ್ಧಿಪಡಿಸುವುದು.
    v) ಸರ್ಕಾರಿ ಶಾಲೆಗಳಲ್ಲಿ ಅತೀ ಕಡಿಮೆ ಕಲಿಕಾ ಸ್ತರದಲ್ಲಿರುವ 6 ರಿಂದ 10ನೇ ತರಗತಿ ವಿದ್ಯಾರ್ಥಿಗಳ ಕಲಿಕಾ ಸಾಮರ್ಥ್ಯ ಹೆಚ್ಚಿಸುವ ʻಮರುಸಿಂಚನʼ ಕಾರ್ಯಕ್ರಮವನ್ನು ರಾಜ್ಯಾದ್ಯಂತ ವಿಸ್ತರಿಸುವುದು.
    vi) ಕನ್ನಡ ಮತ್ತು ಆಂಗ್ಲ ಭಾಷೆಯನ್ನು ಆತ್ಮವಿಶ್ವಾಸದಿಂದ ಓದಲು ಹಾಗೂ ಗಣಿತದ ಆರಂಭಿಕ ಸಾಮರ್ಥ್ಯಗಳನ್ನು ಗಳಿಸಲು Ek-Step ಸಂಸ್ಥೆಯ ಸಹಯೋಗದೊಂದಿಗೆ AI ಆಧಾರಿತ ʻಕಲಿಕಾದೀಪʼ ಕಾರ್ಯಕ್ರಮವನ್ನು 2,000 ಶಾಲೆಗಳಿಗೆ ವಿಸ್ತರಿಸುವುದು.
    vii) ʻಜ್ಞಾನಸೇತುʼ ಕಾರ್ಯಕ್ರಮದಡಿ ಸರ್ಕಾರಿ ಶಾಲೆಗಳಲ್ಲಿ ವಿಜ್ಞಾನ ಮತ್ತು ಗಣಿತ ವಿಷಯಗಳ ಬೋಧನಾ ವಿಧಾನದಲ್ಲಿ ನಾವೀನ್ಯತೆ ಅಳವಡಿಸಿ, ಖಾನ್ ಅಕಾಡೆಮಿ ಸಹಯೋಗದಲ್ಲಿ ಯೋಜನೆ ರೂಪಿಸಲಾಗುವುದು. ರಾಜ್ಯದ 5,೦೦೦ ಸರ್ಕಾರಿ ಶಾಲೆಗಳ 20 ಲಕ್ಷ ವಿದ್ಯಾರ್ಥಿಗಳು ಹಾಗೂ 15,000 ಶಿಕ್ಷಕರು ಈ ಯೋಜನೆಯ ಪ್ರಯೋಜನ ಪಡೆಯಲಿದ್ದಾರೆ.
    viii) ಸರ್ಕಾರಿ ಶಾಲೆಗಳ ವಿದ್ಯಾರ್ಥಿಗಳಿಗೆ ಕೋಡಿಂಗ್ ಕಲಿಕೆ ಪರಿಚಯಿಸಲು ಅಗಸ್ತ್ಯ ಫೌಂಡೇಶನ್ ಸಹಯೋಗದೊಂದಿಗೆ ಐ-ಕೋಡ್ ಲ್ಯಾಬ್ ಸ್ಥಾಪಿಸಲಾಗುವುದು. ಈ ನಿಟ್ಟಿನಲ್ಲಿ ಪ್ರಸಕ್ತ ವರ್ಷ ICT ಸೌಲಭ್ಯವಿರುವ ಆಯ್ದ 63 ಶಾಲೆಗಳನ್ನು ಹಬ್‌ಗಳೆಂದು ಪರಿಗಣಿಸಿ 756 ಸ್ಪೋಕ್ ಶಾಲೆಗಳಿಗೆ ಅನುಕೂಲ ಕಲ್ಪಿಸುವುದು.
    ix) ʻವಿದ್ಯಾವಿಜೇತʼ ಕಾರ್ಯಕ್ರಮದಡಿ ಸರ್ಕಾರಿ ಪದವಿ ಪೂರ್ವ ಕಾಲೇಜುಗಳ 25,000 ವಿದ್ಯಾರ್ಥಿಗಳಿಗೆ CET/NEET/JEE ತರಬೇತಿ ನೀಡಲಾಗಿದ್ದು, ಸದರಿ ಕಾರ್ಯಕ್ರಮವನ್ನು ಮುಂದುವರೆಸಲು 5 ಕೋಟಿ ರೂ. ಒದಗಿಸಲಾಗುವುದು.
  22. ʻನಿರಂತರʼ ಕಾರ್ಯಕ್ರಮದಡಿ Face Recognition ತಂತ್ರಜ್ಞಾನದ ಮೂಲಕ ಮಕ್ಕಳ ಹಾಜರಾತಿಯನ್ನು ಖಚಿತಪಡಿಸುವ ವ್ಯವಸ್ಥೆಯನ್ನು ಜಾರಿಗೊಳಿಸಲಾಗುವುದು.
  23. ವಿದ್ಯಾರ್ಥಿಗಳಲ್ಲಿ ಮಾತೃಭಾಷೆಯ ಜೊತೆಗೆ ಆಂಗ್ಲಭಾಷೆಯ ಕೌಶಲ್ಯ ಬೆಳೆಸಲು ರಾಜ್ಯದ 4,000 ಸರ್ಕಾರಿ ಶಾಲೆಗಳಲ್ಲಿ ದ್ವಿಭಾಷಾ ವಿಭಾಗವನ್ನು ಪ್ರಾರಂಭಿಸಲಾಗುವುದು.
  24. ರಾಜ್ಯದ 2,710 ಸರ್ಕಾರಿ ಪ್ರೌಢಶಾಲೆಗಳಲ್ಲಿ ಈಗಾಗಲೇ ಕಂಪ್ಯೂಟರ್ ಮತ್ತು ವಿಜ್ಞಾನ ಪ್ರಯೋಗಾಲಯಗಳನ್ನು ಸ್ಥಾಪಿಸಲಾಗಿದ್ದು, ಪ್ರಸಕ್ತ ಸಾಲಿನಲ್ಲಿ ಇನ್ನೂ ೫೦೦ ಶಾಲೆಗಳಿಗೆ ಈ ಸೌಲಭ್ಯ ವಿಸ್ತರಿಸಲಾಗುವುದು.
  25. ಪ್ರೌಢಶಾಲಾ / ಪದವಿ ಪೂರ್ವ ಕಾಲೇಜು ಹಂತದಲ್ಲಿಯೇ ವಿದ್ಯಾರ್ಥಿಗಳಿಗೆ ಕೌಶಲ್ಯ ತರಬೇತಿ ನೀಡಲು Skill at School ಕಾರ್ಯಕ್ರಮ ರೂಪಿಸಲಾಗಿದೆ. ಇದರಡಿ, ಆಯ್ದ 7,500 ವಿದ್ಯಾರ್ಥಿಗಳಿಗೆ ಉನ್ನತೀಕರಿಸಿದ 150 ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಗಳಲ್ಲಿ ತರಬೇತಿ ನೀಡಲಾಗುವುದು.
  26. ಸರ್ಕಾರಿ ಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಲ್ಲಿ ಹೆಚ್ಚುವರಿ ಕೊಠಡಿ, ಶೌಚಾಲಯಗಳ ನಿರ್ಮಾಣ ಮತ್ತು ದುರಸ್ತಿ ಕಾರ್ಯಗಳಿಗೆ ೭೨೫ ಕೋಟಿ ರೂ. ಹಾಗೂ ಅಗತ್ಯ ಪೀಠೋಪಕರಣಗಳನ್ನು ಒದಗಿಸಲು 50 ಕೋಟಿ ರೂ. ನೀಡಲಾಗಿದೆ.
  27. ಮಧ್ಯಾಹ್ನ ಉಪಹಾರ ಯೋಜನೆಯಡಿ ರಾಜ್ಯದ 16,347 ಶಾಲೆಗಳ ಅಡುಗೆಮನೆ ಆಧುನೀಕರಣ ಕಾರ್ಯ ಮತ್ತು ಹೊಸ ಪಾತ್ರೆ ಪರಿಕರಗಳನ್ನು ಒದಗಿಸಲು 46 ಕೋಟಿ ರೂ. ವೆಚ್ಚ ಮಾಡಲಾಗುವುದು.
  28. ಕಲ್ಯಾಣ ಕರ್ನಾಟಕ ಭಾಗದಲ್ಲಿ ಅಕ್ಷರ ಆವಿಷ್ಕಾರ ಯೋಜನೆ ಅಡಿ 2೦೦ ಕೋಟಿ ರೂ. ವೆಚ್ಚದಲ್ಲಿ ಆಯ್ದ 50 ಶಾಲೆಗಳನ್ನು ಸುಸಜ್ಜಿತ ಕೆ.ಪಿ.ಎಸ್. ಶಾಲೆಗಳನ್ನಾಗಿ ಉನ್ನತೀಕರಿಸಲಾಗುವುದು.
  29. ಕಲ್ಯಾಣ ಕರ್ನಾಟಕ ಭಾಗದಲ್ಲಿ ಖಾಲಿ ಇರುವ 5,267 ಶಿಕ್ಷಕರ ಹುದ್ದೆಗಳನ್ನು ಭರ್ತಿ ಮಾಡಲಾಗುವುದು. ಮುಂದುವರೆದು, ಇಲಾಖೆಯಲ್ಲಿ ಇನ್ನೂ ಖಾಲಿ ಇರುವ ಶಿಕ್ಷಕರ ಹುದ್ದೆಗಳನ್ನು ತರ್ಕಬದ್ಧಗೊಳಿಸಿ 5,000 ಹುದ್ದೆಗಳನ್ನು ಭರ್ತಿ ಮಾಡಲು ಕ್ರಮವಹಿಸಲಾಗುವುದು.
  30. ದಕ್ಷಿಣ ಕನ್ನಡ ಜಿಲ್ಲೆಯ ಪಿಲಿಕುಳದಲ್ಲಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಅಂತಾರಾಷ್ಟ್ರೀಯ ಯುವಕರ ತರಬೇತಿ ಕೇಂದ್ರದ ಅಭಿವೃದ್ಧಿಗಾಗಿ ಎರಡು ಕೋಟಿ ರೂ. ಒದಗಿಸಲಾಗುವುದು.

More articles

Latest article