ಜಾತಿ ಗಣತಿ: ಸೆ. 22ರಿಂದ ಅ. 7ರವರೆಗೆ ಸಮೀಕ್ಷೆ: ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ನಿರ್ಧಾರ

Most read

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ನಡೆದ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಕುರಿತಾದ ಪೂರ್ವಭಾವಿ ಸಭೆ ನಡೆಯಿತು. ಸಭೆಯಲ್ಲಿ ಸಚಿವರಾದ ಶಿವರಾಜ ತಂಗಡಗಿ, ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಮಧುಸೂಧನ ಆರ್ ನಾಯ್ಕ್, ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್, ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರ ಪೊನ್ನಣ್ಣ, ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.

ಸಭೆಯಲ್ಲಿ ಮಾತನಾಡಿದ ಮುಖ್ಯಮಂತ್ರಿಗಳು ಹಿಂದುಳಿದ ವರ್ಗಗಳ ಆಯೋಗ, ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ನಡೆಸುವ ಕುರಿತಾಗಿ ಸರ್ಕಾರಕ್ಕೆ ಪ್ರಸ್ತಾವನೆಯನ್ನು ಸಲ್ಲಿಸಿದೆ. ಇದರಂತೆ ರಾಜ್ಯದ ಎಲ್ಲಾ 7 ಕೋಟಿ ಜನರ ಸಮೀಕ್ಷೆ ನಡೆಸಲಾಗುವುದು. ಜಾತಿ ತಾರತಮ್ಯ ನಿವಾರಣೆ ಮಾಡುವುದು ಗಣತಿಯ ಮುಖ್ಯ ಉದ್ದೇಶ ಎಂದು ತಿಳಿಸಿದರು.

ರಾಜ್ಯದ ಪ್ರತಿಯೊಬ್ಬರ ಆರ್ಥಿಕ ಪರಿಸ್ಥಿತಿ, ಜಮೀನು ಇದೆಯೇ ಇಲ್ಲವೇ ಸೇರಿದಂತೆ ಸಮಗ್ರ ಸಮೀಕ್ಷೆ ನಡೆಯಬೇಕು. ಈ ಸಮೀಕ್ಷೆ ವರದಿ ಮುಂದಿನ ಬಜೆಟ್ ಸಿದ್ಧಪಡಿಸುವ ಸಂದರ್ಭದಲ್ಲಿ ಆಧಾರವಾಗಲಿದೆ. ಈ ಬಾರಿಯ ಸಮೀಕ್ಷೆ ದೇಶದಲ್ಲೇ ಮಾದರಿ ಸಮೀಕ್ಷೆಯಾಗಬೇಕು. ಸೆಪ್ಟಂಬರ್ 22ರಿಂದ ಅಕ್ಟೋಬರ್ 7ರವರೆಗೆ 15ದಿನಗಳ ಕಾಲ ಸಮೀಕ್ಷೆ ನಡೆಸುವ ನಿರ್ಧಾರ. ಅಕ್ಟೋಬರ್ ಕೊನೆಯ ಒಳಗಾಗಿ ಸಮೀಕ್ಷೆ ವರದಿಯನ್ನು ಸಲ್ಲಿಸಬೇಕು. ತರಬೇತಿ ಸೇರಿದಂತೆ ಸಮೀಕ್ಷೆಗೆ ಪೂರ್ವಭಾವಿ ಸಿದ್ಧತೆಗಳನ್ನು ಈಗಲೇ ಆರಂಭಿಸಲು ಸೂಚನೆ ನೀಡಿದರು.

ಸಮೀಕ್ಷೆ ಅತ್ಯಂತ ಸಮರ್ಪಕವಾಗಿ ನಡೆಯಬೇಕು. ಸಮೀಕ್ಷೆ ಕುರಿತು ಯಾವುದೇ ದೂರುಗಳಿಗೆ ಅಸ್ಪದವಾಗದಂತೆ ಮುನ್ನೆಚ್ಚರಿಕೆ ವಹಿಸಬೇಕು. ಸಮೀಕ್ಷೆಯಿಂದ ಯಾರೂ ಹೊರಗುಳಿಯದಂತೆ ಖಾತ್ರಿಪಡಿಸಬೇಕು. ಕಾಂತರಾಜು ಆಯೋಗ 54 ಪ್ರಶ್ನೆಗಳನ್ನು ಸಿದ್ದಪಡಿಸಿ manual ಆಗಿ ಈ ಹಿಂದೆ ಸಮೀಕ್ಷೆ ನಡೆಸಿತ್ತು. ಈ ಬಾರಿಯ ಸಮೀಕ್ಷೆಯಲ್ಲಿ ಇನ್ನಷ್ಟು ಅಂಶಗಳನ್ನು ಸೇರಿಸುವ ಕುರಿತು ಪರಿಶೀಲನೆ. ಈ ಬಾರಿ ಮೊಬೈಲ್ ಆಪ್ ಬಳಸಿಕೊಂಡು ಸಮೀಕ್ಷೆ ನಡೆಸಲಾಗುವುದು ಎಂದು ಹೇಳಿದರು.

ಈ ಬಾರಿ ಸಮೀಕ್ಷೆ ಕಾರ್ಯಕ್ಕೆ 1.65ಲಕ್ಷ ಗಣತಿದಾರರು ಸೇರಿದಂತೆ ಮಾನವ ಸಂಪನ್ಮೂಲ ಅವಶ್ಯಕತೆಯಿದೆ. ಸಮೀಕ್ಷೆ ಕಾರ್ಯಕ್ಕೆ ಶಿಕ್ಷಕರ ಸೇವೆಯೊಂದಿಗೆ ಇತರ ಇಲಾಖೆಗಳ ಸಿಬ್ಬಂದಿಗಳನ್ನು ಸಹ ಬಳಸಿಕೊಳ್ಳಲಾಗುವುದು. ಸಂಬಂಧಪಟ್ಟ ಎಲ್ಲಾ ಇಲಾಖೆಗಳು ಸಮನ್ವಯದಿಂದ ಕಾರ್ಯನಿರ್ವಹಿಸಿ ಸಮೀಕ್ಷೆ ಕಾರ್ಯವನ್ನು ಯಶಸ್ವಿಗೊಳಿಸಬೇಕು. ಬೆಂಗಳೂರು ನಗರ ವ್ಯಾಪ್ತಿಯಲ್ಲಿ ಸಮೀಕ್ಷೆ ಕಾರ್ಯವನ್ನು ಯಶಸ್ವಿಗೊಳಿಸಲು ಯೋಜನೆ ರೂಪಿಸಿ ಕಾರ್ಯನಿರ್ವಹಿಸಬೇಕು ಎಂದು ಮುಖ್ಯಮಂತ್ರಿ ಅವರು ತಿಳಿಸಿದರು.

ತೆಲಂಗಾಣದಲ್ಲಿ ಕೈಗೊಳ್ಳಲಾಗಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಗಣತಿ ಕುರಿತು ಅಧ್ಯಯನ ನಡೆಸಲು ಸೂಚನೆ ನೀಡಲಾಯಿತು. ಸಮೀಕ್ಷೆ ಕಾರ್ಯದ ಮೇಲುಸ್ತುವಾರಿಗೆ ಉನ್ನತಮಟ್ಟದ ಸಮಿತಿ ರಚಿಸಲು ತಿರ್ಮಾನ ಮಾಡಲಾಗಿದೆ. ಸಮೀಕ್ಷೆ ವೈಜ್ಞಾನಿಕವಾಗಿ ಮತ್ತು ಪಾರದರ್ಶಕವಾಗಿ ನಡೆಯಬೇಕು. ಸಮೀಕ್ಷೆಯಲ್ಲಿ ಕೇಳಬೇಕಾದ ಪ್ರಶ್ನೆಗಳನ್ನು ಅಂತಿಮಗೊಳಿಸಲು ತಜ್ಞರ ಸಮಿತಿಯ ನೆರವು ಪಡೆಯಲು ನಿರ್ಧರಿಸಲಾಗಿದೆ.

More articles

Latest article