ಮುಖ್ಯಮಂತ್ರಿ ಬದಲಾವಣೆ ಹೈಕಮಾಂಡ್‌ ಗೆ ಬಿಟ್ಟ ವಿಚಾರ: ಮಲ್ಲಿಕಾರ್ಜುನ ಖರ್ಗೆ

Most read

ಬೆಂಗಳೂರು: ರಾಜ್ಯದಲ್ಲಿ ಮುಖ್ಯಮಂತ್ರಿಯನ್ನು ಬದಲಾವಣೆ ಮಾಡುವ ವಿಚಾರ ಪಕ್ಷದ ಹೈಕಮಾಂಡ್ ಗೆ ಬಿಟ್ಟ ವಿಚಾರ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಇಂದು ಮಾತನಾಡಿದ ಅವರು, ಹೈಕಮಾಂಡ್‌ ಮಟ್ಟದಲ್ಲಿ ಏನು ನಡೆಯುತ್ತಿದೆ ಎಂಬುದನ್ನು ಹೇಳಲು ಯಾರಿಗೂ ಸಾಧ್ಯವಿಲ್ಲ. ಮುಂದಿನ ಕ್ರಮ ಕೈಗೊಳ್ಳುವ ಹಕ್ಕು ಹೈಕಮಾಂಡ್ ಗೆ ಮಾತ್ರ ಇದೆ. ಆದರೆ, ಯಾರೂ ಅನಗತ್ಯವಾಗಿ ಸಮಸ್ಯೆ ಸೃಷ್ಟಿಸಬಾರದು ಎಂದು ಮನವಿ ಮಾಡಿಕೊಂಡರು.

ಸುರ್ಜೇವಾಲಾ ಅವರು ರಾಜ್ಯಕ್ಕೆ ಬಂದಿದ್ದಾರೆ. ಶಾಸಕರ ಅಭಿಪ್ರಾಯಗಳನ್ನು ಆಲಿಸುತ್ತಾರೆ, ಜತೆಗೆ ಏನೇನು ನಡೆದಿದೆ ಎಂದು ಅವರು ಕೇಳುತ್ತಾರೆ. ಅದನ್ನು ನೋಡಿಕೊಂಡು ಮುಂದೇನು ಮಾಡಬೇಕೆಂದು ಹೈಕಮಾಂಡ್‌ ನಿರ್ಧರಿಸುತ್ತದೆ ಎಂದರು.

ಸಚಿವರು, ಶಾಸಕರ ವಿಭಿನ್ನ ಹೇಳಿಕೆಗಳಿಗೆ ನಾನು ಉತ್ತರ ಕೊಡಲು ಹೋಗುವುದಿಲ್ಲ. ನಾನು ಉತ್ತರ ಕೊಡುವುದು ಎಐಸಿಸಿ ಮಟ್ಟದ್ದಕ್ಕೆ ಮಾತ್ರ. ಇಲ್ಲಿಯ ಪ್ರತಿಯೊಂದಕ್ಕೂ ಉತ್ತರ ಕೊಡಲು ಹೋಗಲು ಅಸಾಧ್ಯ. ಸಾಕಷ್ಟು ವಿಚಾರಗಳಿವೆ ಎಂದು ಖರ್ಗೆ ಉತ್ತರಿಸಿದರು.

ಕಾಂಗ್ರೆಸ್ ಪಕ್ಷದ ಕರ್ನಾಟಕ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಮಾತನಾಡಿ, ಕಾಂಗ್ರೆಸ್ ಗ್ಯಾರಂಟಿ ಯೋಜನೆ ಬಗ್ಗೆ ಶಾಸಕರಿಂದ ಮಾಹಿತಿ ಪಡೆಯುತ್ತಿದ್ದೇವೆ. ಕಾಂಗ್ರೆಸ್ ಸಂಘಟನೆ ಅವರವರ ಕ್ಷೇತ್ರದಲ್ಲಿ ಹೇಗಿದೆ ಎಂಬ ವರದಿ ಪಡೆಯುತ್ತೇನೆ. ಮುಂಚೂಣಿ ಘಟಕಗಳು ಹೇಗೆ ಕೆಲಸ ಮಾಡುತ್ತಿವೆ ಎಂಬ ಬಗ್ಗೆ ಪರಾಮರ್ಶೆ ಮಾಡುತ್ತಿದ್ದೇವೆ ಎಂದರು.

ಶಾಸಕರ ಕ್ಷೇತ್ರಗಳ ಅಭಿವೃದ್ಧಿ ಕುರಿತೂ ಮಾಹಿತಿ ಪಡೆಯುತ್ತೇವೆ.‌ಇದರಿಂದ ಸಿಎಂ, ಸಚಿವರಿಗೆ ಸಲಹೆ ಸೂಚನೆ  ನೀಡಲು ಸಹಾಯಕವಾಗಲಿದೆ.‌ ಸರ್ಕಾರದ ಮಟ್ಟದಲ್ಲಿ ಆಗಬೇಕಾದ ಕೆಲಸಗಳ ಬಗ್ಗೆ ಶಾಸಕರಿಂದ ಮಾಹಿತಿ ಪಡೆಯುತ್ತಿದ್ದೇವೆ. ಸಂಘಟನಾತ್ಮಕ ಚಟುವಟಿಕೆಗಳನ್ನು ಎಐಸಿಸಿ, ಕೆಪಿಸಿಸಿ ಜಂಟಿಯಾಗಿ ಮಾಡಬೇಕಿದೆ ಎಂದರು.

ನಾಯಕತ್ವ ಬದಲಾವಣೆ ಕೇವಲ ಊಹಾಪೋಹ ಎಂದ ಲೋಕಸಭೆ ಚುನಾವಣೆಗೆ ಸ್ಪರ್ಧಿಸಿದ್ದ ಅಭ್ಯರ್ಥಿಗಳು, ಪರಾಜಿತ ಅಭ್ಯರ್ಥಿಗಳನ್ನು ಕೂಡ ಸಭೆಗೆ ಕರೆಯುತ್ತೇವೆ.‌ ಇದು ನಿರಂತರವಾಗಿ ನಡೆಯುವ ಪ್ರಕ್ರಿಯೆಯಾಗಿರುತ್ತದೆ. ನಂತರ ಸಿಎಂ, ಡಿಸಿಎಂ ಜೊತೆಗೂ ಅಭಿವೃದ್ಧಿ ವಿಚಾರ ಕುರಿತು ಚರ್ಚೆ ನಡೆಸಲಾಗುತ್ತದೆ ಎಂದು ರಣ್‌ ದೀಪ್‌ ಹೇಳಿದರು.

More articles

Latest article