ಕೋಲ್ಕತ್ತ: ಗಗನಯಾನಿ ಸುನಿತಾ ಮಿಲಿಯಮ್ಸ್ಗೆ ಭಾರತ ರತ್ನ ನೀಡಿ, ಗೌರವಿಸಬೇಕೆಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ. ವಿಧಾನಸಭೆಯಲ್ಲಿ ಮಾತನಾಡಿದ ಅವರು, ಗಗನಯಾನಿಗಳನ್ನು ಭೂಮಿಗೆ ಕರೆ ತರುವಲ್ಲಿ ನಿರಂತರವಾಗಿ ಶ್ರಮಿಸಿದ ರಕ್ಷಣಾ ತಂಡಗಳಿಗೆ ಮೆಚ್ಚುಗೆ ವ್ಯಕ್ತಪಡಿಸಿ ಅಭಿನಂದನೆ ಸಲ್ಲಿಸಿದ್ದಾರೆ.
ಒಂಭತ್ತು ತಿಂಗಳ ಕಾಲ ಬಾಹ್ಯಾಕಾಶದಲ್ಲಿ ಸಿಲುಕಿಕೊಂಡಿದ್ದ ವಿಲಿಯಮ್ಸ್ ಮತ್ತು ಬುಚ್ ಗಗನಯಾನಿಗಳನ್ನು ರಕ್ಷಿಸಿದ್ದಕ್ಕಾಗಿ ಪಶ್ಚಿಮ ಬಂಗಾಳ ವಿಧಾನಸಭೆಯ ಪರವಾಗಿ ಧನ್ಯವಾದ ತಿಳಿಸಲು ಬಯಸುತ್ತೇನೆ. ಸುನಿತಾ ವಿಲಿಯಮ್ಸ್ ಅವರನ್ನು ಅಭಿನಂದಿಸುತ್ತೇನೆ. ಅವರಿಗೆ ಭಾರತ ರತ್ನ ನೀಡಿ ಗೌರವಿಸಬೇಕು ಎಂದು ಬ್ಯಾನರ್ಜಿ ಒತ್ತಾಯಿಸಿದರು.
ನನಗೆ ಬಾಹ್ಯಾಕಾಶ ವಿಜ್ಞಾನದಲ್ಲಿ ಆಸಕ್ತಿ ಇದೆ. ಬೆಳವಣಿಗೆಗಳನ್ನು ಗಮನಿಸುತ್ತೇನೆ ಮತ್ತು ತಂತ್ರಜ್ಞಾನದ ಆಧುನಿಕ ನವೀಕರಣಗಳ ಬಗ್ಗೆಯೂ ತಿಳಿದುಕೊಳ್ಳಲು ಪ್ರಯತ್ನಿಸುತ್ತಿರುತ್ತೇನೆ ಎಂದು ಮಮತಾ ಬ್ಯಾನರ್ಜಿ ತಿಳಿಸಿದ್ದಾರೆ. 9 ತಿಂಗಳ ನಂತರ ಅಂತರರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಿಂದ ಗಗನಯಾನಿಗಳಾದ ಸುನಿತಾ ವಿಲಿಯಮ್ಸ್, ಬುಚ್ ವಿಲ್ಮೋರ್ ಸೇರಿದಂತೆ ನಾಲ್ವರು ಗಗನಯಾನಿಗಳು ಸುರಕ್ಷಿತವಾಗಿ ಇಂದು ಮುಂಜಾನೆ 3.37ರ ಸುಮಾರಿಗೆ (ಭಾರತೀಯ ಕಾಲಮಾನ) ಫ್ಲೋರಿಡಾದ ಕರಾವಳಿಗೆ ಬಂದಿಳಿದ್ದಾರೆ.