ಮೈಸೂರು: ಹುಲಿ-ಆನೆಗಳು ಅರಣ್ಯದಿಂದ ಹೊರಗೆ ಬರಲು ಏನು ಕಾರಣ ? ವೈಜ್ಞಾನಿಕ ಕಾರಣ ನೀಡಿ: ವೈಜ್ಞಾನಿಕ ಮಾರ್ಗದಲ್ಲಿ ಪರಿಣಾಮಕಾರಿ ಪರಿಹಾರ ಕಂಡು ಹಿಡಿಯುವ ತುರ್ತು ಇದೆ ಎಂದು ಮುಖ್ಯಮಂತ್ರಿಗಳು ತಿಳಿಸಿ ಪರಿಹಾರ ಕ್ರಮಗಳನ್ನು ಸೂಚಿಸಿದರು
ಕಾಡಿನಲ್ಲಿರುವ ನೀರಿನ ಗುಂಡಿಗಳನ್ನು ತುಂಬಿಸಬೇಕು. ಲಾಂಟೆನಾ ತೆಗೆಸಬೇಕು. ಅರಣ್ಯದಲ್ಲಿ ಮೇವು ಬೆಳೆಸಬೇಕು. ಆನೆ, ಹುಲಿಗಳು ಹೊರಗೆ ಬರುವ ಬಗ್ಗೆ ನಿರಂತರ ನಿಗಾ ವಹಿಸಬೇಕು ಎಂದು ಸೂಚನೆ ನೀಡಿದರು.
ಅರಣ್ಯ ಪ್ರಾಣಿ ಮತ್ತು ಮಾನವ ಸಂಘರ್ಷ ತಪ್ಪಿಸಲು ಪ್ರತ್ಯೇಕವಾದ ಸಭೆ ಕರೆಯುತ್ತಿದ್ದೇವೆ. ಸಮಗ್ರ ಮಾಹಿತಿ ಮತ್ತು ಪರಿಹಾರದ ಬಗ್ಗೆ ಅಧ್ಯಯನ ನಡೆಸಿ ಪೂರ್ತಿ ಸಿದ್ಧತೆಯೊಂದಿಗೆ ಸಭೆಗೆ ಬರಬೇಕು. ಈಗಾಗಲೇ ಹೆಲ್ಪ್ ಲೈನ್ ತೆರೆಯಲಾಗಿದೆ. ಕಮಾಂಡ್ ಸೆಂಟರ್ ತೆರೆಯುವ ಕಾರ್ಯ ಪ್ರಗತಿಯಲ್ಲಿದೆ ಎಂದು ಅಧಿಕಾರಿಗಳು ಸಭೆಗೆ ಮಾಹಿತಿ ನೀಡಿದರು.
ಅರಣ್ಯ ಹಕ್ಕು ಕಾಯ್ದೆಗೆ ಬಂದಿರುವ 7000 ಅರ್ಜಿಗಳಲ್ಲಿ 5900 ಅರ್ಜಿಗಳು ತಿರಸ್ಕರಿಸಲ್ಪಟ್ಟಿರುವುದಕ್ಕೆ ಕಾರಣ ಏನು ಎಂದು ಸಿಎಂ ಪ್ರಶ್ನಿಸಿದರು. ಇವು 2019-20 ರಿಂದ ತಿರಸ್ಕರಿಲ್ಪಟ್ಟ ಅರ್ಜಿಗಳು. ತಿರಸ್ಕರಿಸುವಾಗ ಸ್ಪಷ್ಟವಾದ, ನೈಜವಾದ ಕಾರಣ ನೀಡದಿದ್ದರೆ ಅಂತಹ ಅರ್ಜಿಗಳನ್ನು ಮರುಪರಿಶೀಲನೆಗೆ ಸ್ವೀಕರಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳು ಮುಖ್ಯಮಂತ್ರಿಗಳಿಗೆ ತಿಳಿಸಿದರು.
ಹಾಡಿಗಳು, ಅರಣ್ಯವಾಸಿಗಳ ವಿಚಾರದಲ್ಲಿ ಅಂತಃಕರಣದಿಂದ ವರ್ತಿಸಿ: ಸಿ.ಎಂ ಸೂಚನೆ
ಹಾಡಿಗಳಿಗೆ ಕುಡಿಯುವ ನೀರು, ವಿದ್ಯುತ್ ಸಮರ್ಪಕವಾಗಿ ಆಗುತ್ತಿದೆಯೇ ಎಂದು ಪ್ರಶ್ನಿಸಿದ ಮುಖ್ಯಮಂತ್ರಿಗಳು, ಹಾಡಿಗಳು, ಅರಣ್ಯವಾಸಿಗಳ ವಿಚಾರದಲ್ಲಿ ಅಂತಃಕರಣದಿಂದ ವರ್ತಿಸಿ ಎನ್ನುವ ಸೂಚನೆ ನೀಡಿದರು.
ಹೆಚ್.ಡಿ.ಕೋಟೆಯಲ್ಲಿ ACF ಮತ್ತು RFO ಗಳ ನಡುವೆ ಹೊಂದಾಣಿಕೆ ಇಲ್ಲದಿರುವುದರಿಂದ ಸಮಸ್ಯೆಗಳು ಹೆಚ್ಚಾಗಿವೆ ಎಂದು ಶಾಸಕರಾದ ಅನಿಲ್ ಚಿಕ್ಕಮಾದು ಅವರು ಮುಖ್ಯಮಂತ್ರಿಗಳ ಗಮನಕ್ಕೆ ತಂದರು. ಆಗ ಸಿಎಂ ಸಿದ್ದರಾಮಯ್ಯ ಅವರು, ಅಧಿಕಾರಿಗಳ ಹೊಂದಾಣಿಕೆ ಕೊರತೆಯಿಂದ, ಕರ್ತವ್ಯಲೋಪದಿಂದ ಮಾವ ಜೀವ ಹಾನಿ ಆದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು.

