ಬೆಂಗಳೂರು: ಹರಿಹರದ ಬಿಜೆಪಿ ಶಾಸಕ ಬಿ.ಪಿ.ಹರೀಶ್ ಅವರನ್ನು ಬಂಧಿಸಿ ನ್ಯಾಯಾಲಯದ ಮುಂದೆ ಹಾಜರುಪಡಿಸುವಂತೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ವಾರೆಂಟ್ ಜಾರಿ ಮಾಡಿದೆ.
ಶಾಸಕರಾಗಿ ಆಯ್ಕೆಯಾದ ಹಿನ್ನೆಲೆಯಲ್ಲಿ ಶುಭಾಶಯ ಕೋರಲು ಬಂದಿದ್ದ ಪರಿಶಿಷ್ಟ ಜಾತಿಯ ಪೌರಕಾರ್ಮಿಕರ ಜಾತಿನಿಂದನೆ ಮಾಡಿದ ಆರೋಪದಲ್ಲಿ ವಿಚಾರಣೆಗೆ ಗೈರಾದ ಹರಿಹರ ಕ್ಷೇತ್ರದ ಬಿಜೆಪಿ ಶಾಸಕ ಬಿ.ಪಿ.ಹರೀಶ್ ಅವರನ್ನು ಬಂಧಿಸಲು ನ್ಯಾಯಾಲಯ ಆದೇಶಿಸಿದೆ.
ಪ್ರಕರಣದ ವಿಚಾರಣೆ ನಡೆಸಿದ ವಿಶೇಷ ನ್ಯಾಯಾಲಯದ ನ್ಯಾಯಾಧೀಶರಾದ ಸಂತೋಷ್ ಗಜಾನನ ಭಟ್ ಅವರು, ಶಾಸಕರ ವಿರುದ್ಧ ಬಂಧನ ವಾರೆಂಟ್ ಜಾರಿಗೊಳಿಸಿ, ಮುಂದಿನ ವಿಚಾರಣೆಯನ್ನು ಗುರುವಾರಕ್ಕೆ ಮುಂದೂಡಿದ್ದಾರೆ.
ಏನಿದು ಪ್ರಕರಣ: ಕಳೆದ ವಿಧಾನಸಭಾ ಚುನಾವಣೆಯಲ್ಲಿ ಶಾಸಕರಾಗಿ ಆಯ್ಕೆಯಾಗಿದ್ದ ಬಿ.ಪಿ.ಹರೀಶ್ ಅವರನ್ನು ಅಭಿನಂದಿಸಲು 2023ರ ಮೇ 16ರಂದು ಹರಿಹರ ನಗರಸಭೆಯ ಪೌರಕಾರ್ಮಿಕರು ಹಾಗೂ ಮಾದಿಗ ಸಮಾಜದ ಮುಖಂಡರು ಆಗಮಿಸಿದ್ದರು. ಈ ವೇಳೆ ಒಳಮೀಸಲಾತಿ ನೀಡಿದ್ದರೂ ನಿಮ್ಮ ಸಮಾಜದವರು ನಮ್ಮ ಪಕ್ಷವನ್ನು ಬೆಂಬಲಿಸಿಲ್ಲ, ನಿಮಗೆ ಕೃತಜ್ಞತೆಯಿಲ್ಲ ಎಂದು ಜಾತಿಯ ಹೆಸರನ್ನು ಉಲ್ಲೇಖಿಸಿ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದರು ಎಂದು ಆರೋಪಿಸಲಾಗಿತ್ತು.
ಬಹುಜನ ಸಮಾಜ ಪಕ್ಷದ ಜಿಲ್ಲಾ ಘಟಕದ ಅಧ್ಯಕ್ಷ ಡಿ.ಹನುಮಂತಪ್ಪ ಅವರು ಹರಿಹರ ನಗರ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಈ ಸಂಬಂಧ ಎಫ್ಐಆರ್ ದಾಖಲಾಗಿದ್ದು, ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಪ್ರಕರಣದ ವಿಚಾರಣೆ ನಡೆಸುತ್ತಿದೆ.

