ನವದೆಹಲಿ: ದೆಹಲಿ ಮುಖ್ಯಮಂತ್ರಿಗಳ ಅಧಿಕೃತ ನಿವಾಸ ‘ಶೀಶ್ ಮಹಲ್’ ನವೀಕರಣಕ್ಕೆ ಮಾಡಲಾಗಿರುವ ವೆಚ್ಚದ ಕುರಿತು ಸಮಗ್ರ ತನಿಖೆ ನಡೆಸುವಂತೆ ಕೇಂದ್ರ ಜಾಗೃತ ಆಯೋಗವು (ಸಿವಿಸಿ) ಲೋಕೋಪಯೋಗಿ ಇಲಾಖೆಗೆ ನಿರ್ದೇಶನ ನೀಡಿದೆ ಎಂದು ಬಿಜೆಪಿ ನಾಯಕ ವಿಜೇಂದರ್ ಗುಪ್ತಾ ಹೇಳಿದ್ದಾರೆ.
ಮಾಜಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರು ಶೀಶ್ ಮಹಲ್ನಲ್ಲಿ 2015ರಿಂದ 2024ರ ಅಕ್ಟೋಬರ್ವರೆಗೆ ವಾಸಿಸುತ್ತಿದ್ದರು. ವಿಜೇಂದರ್ ಗುಪ್ತಾ ಹೇಳಿಕೆ ಸಂಬಂಧ ಆಮ್ ಆದ್ಮಿ ಪಕ್ಷ (ಎಎಪಿ) ಅಥವಾ ಕೇಜ್ರಿವಾಲ್ ಸದ್ಯಕ್ಕೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.
ರಾಷ್ಟ್ರ ರಾಜಧಾನಿ ವಿಧಾನಸಭಾ ಕ್ಷೇತ್ರಗಳಿಗೆ ಇತ್ತೀಚೆಗೆ ನಡೆದ ಚುನಾವಣೆ ಸಂದರ್ಭದಲ್ಲಿ, ಸಿಎಂ ನಿವಾಸ ನವೀಕರಣ ವಿಚಾರ ಚರ್ಚೆಗೆ ಗ್ರಾಸ ಒದಗಿಸಿತ್ತು. ನವೀಕರಣದ ವೇಳೆ ಭಾರಿ ಅಕ್ರಮ ನಡೆದಿದೆ ಎಂದು ಬಿಜೆಪಿ ವ್ಯಾಪಕ ಪ್ರಚಾರ ನಡೆಸಿತ್ತು. ಕೇಜ್ರಿವಾಲ್ ದುಂದುವೆಚ್ಚ ಮಾಡಿದ್ದಾರೆ ಎಂದು ಬಿಜೆಪಿ ನಾಯಕರು ಎಎಪಿ ನಾಯಕ ಕೇಜ್ರಿವಾಲ್ ವಿರುದ್ಧ ಭ್ರಷ್ಟಾಚಾರದ ಆರೋಪಗಳನ್ನು ಮಾಡಿದ್ದರು.