ದೇವನಹಳ್ಳಿ ಭೂಸ್ವಾದೀನ ವಿರೋಧಿಸಿ 4ರಂದು ನಾಡ ಉಳಿಸಿ ಸಮಾವೇಶ ನಡೆಸಲು ರೈತರ ತೀರ್ಮಾನ

Most read

ಬೆಂಗಳೂರು: ಬೆಂಗಳೂರು ಹೊರವಲಯದ ದೇವನಹಳ್ಳಿಯ ಚನ್ನರಾಯಪಟ್ಟಣದಲ್ಲಿ ರೈತರ ಕೃಷಿ ಭೂಮಿಯನ್ನು ಸ್ವಾದೀನಪಡಿಸಿಕೊಳ್ಳದಂತೆ ಆಗ್ರಹಿಸಿ ಜುಲೈ 4ರಂದು ನಗರದ ಫ್ರೀಡಂ ಪಾರ್ಕ್‌ ನಲ್ಲಿ ನಾಡ ಉಳಿಸಿ ಸಮಾವೇಶ ನಡೆಸಲು ನಿರ್ಧರಿಸಲಾಗಿದೆ. ಸಂಯುಕ್ತ ಹೋರಾಟ ಮತ್ತು ಕರ್ನಾಟಕ ಭೂಸ್ವಾದೀನ ಹೋರಾಟ ಸಮಿತಿ ಹಾಗೂ ಸಮಾನ ಮನಸ್ಕ ಸಂಘಟನೆಗಳು ತೀರ್ಮಾನಿಸಿವೆ.

ಸ್ವಾತಂತ್ರ್ಯ ಉದ್ಯಾನವನದಲ್ಲಿ ದೇವನಹಳ್ಳಿಯಲ್ಲಿ ಭೂ ಸ್ವಾಧೀನ ವಿರೋಧಿಸಿ ಭೂಮಿ ಸತ್ಯಾಗ್ರಹ ನಡೆಯುತ್ತಿದೆ. ಅಲ್ಲಿಯೇ  ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ವಿವಿಧ ಸಂಘಟನೆಗಳ ಮುಖಂಡರು, 4ರಂದು ನಡೆಯಲಿರುವ ಸಮಾವೇಶದಲ್ಲಿ ರಾಜ್ಯದ ಎಲ್ಲಾ ತಾಲ್ಲೂಕುಗಳಿಂದಲೂ ರೈತ ಪರ ಹೋರಾಟಗಾರರು, ಸಮಾನ ಮನಸ್ಕರು ದೊಡ್ಡ ಸಂಖ್ಯೆಯಲ್ಲಿ ಭಾಗವಹಿಸಲಿದ್ದಾರೆ ಎಂದರು.

ದೇವನಹಳ್ಳಿಯ ಭೂ ಸ್ವಾಧೀನ ವಿರುದ್ಧದ ಹೋರಾಟಕ್ಕೆ ರಾಜ್ಯದಾದ್ಯಂತ ಉತ್ತಮ ಬೆಂಬಲ ವ್ಯಕ್ತವಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೂ ಹೋರಾಟಗಾರರೊಂದಿಗೆ ಸಭೆ ನಡೆಸುವ ಆಶ್ವಾಸನೆ ನೀಡಿದ್ದಾರೆ. ಈ ನಡುವೆ ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ, ಪತ್ರಿಕೆಯಲ್ಲಿ ಲೇಖನ ಬರೆದು ತಮ್ಮ ನಿಲುವನ್ನು ಸಮರ್ಥಿಸಿಕೊಂಡಿದ್ದಾರೆ. ಇದನ್ನು ಗಮನಿಸಿದರೆ, ಜುಲೈ 4ರ ಸಭೆ ಈಡೇರುವ ಸಾಧ್ಯತೆಗಳು ಕಡಿಮೆಯಾಗಿದೆ. ಎಂದು ಸಂಯುಕ್ತ ಹೋರಾಟ ಕರ್ನಾಟಕದ ಮುಖಂಡರು ಅನುಮಾನ ವ್ಯಕ್ತಪಡಿಸಿದ್ದಾರೆ.

ಮುಖ್ಯಮಂತ್ರಿಗಳು ಜುಲೈ 4ರಂದು ರೈತ ಮುಖಂಡರೊಂದಿಗೆ ನಡೆಯುವ ಸಭೆಯಲ್ಲಿ ಭೂ ಸ್ವಾಧೀನ ಕೈಬಿಡುವ ತೀರ್ಮಾನವನ್ನು ತೆಗೆದುಕೊಂಡರೆ, ಸರ್ಕಾರಕ್ಕೆ ಅಭಿನಂದನೆ ಸಲ್ಲಿಸಿ ಪ್ರತಿಭಟನೆಯನ್ನು ಕೈಬಿಡುತ್ತೇವೆ. ಒಂದು ವೇಳೆ ರೈತರಿಗೆ ನ್ಯಾಯ ಸಿಗದಿದ್ದರೆ ಅಂದೇ ಕಠಿಣ ಹೋರಾಟದ ತೀರ್ಮಾನ ತೆಗೆದುಕೊಳ್ಳುತ್ತೇವೆ ಎಂದು ಎಚ್ಚರಿಸಿದರು.

ಹೋರಾಟ ಸಮಿತಿಯ ಪರವಾಗಿ ಕರ್ನಾಟಕ ರಾಜ್ಯ ರೈತ ಸಂಘದ ಬಡಗಲಪುರ ನಾಗೇಂದ್ರ, ಕರ್ನಾಟಕ ಜನಶಕ್ತಿ ಸಂಘಟನೆಯ ನೂರ್ ಶ್ರೀಧರ್, ಸಿಐಟಿಯುನ ಎಸ್. ವರಲಕ್ಷ್ಮಿ, ದಲಿತ ಸಂಘರ್ಷ ಸಮನ್ವಯ ಸಮಿತಿಯ ವಿ.ನಾಗರಾಜು, ಕೆಪಿಆರ್‌ಎಸ್‌ನ ಯು.ಬಸವರಾಜು ಮತ್ತು ಭೂಸ್ವಾಧೀನ ವಿರೋಧಿ ಹೋರಾಟ ಸಮಿತಿಯ ಕಾರಳ್ಳಿ ಶ್ರೀನಿವಾಸ್‌ ಸುದ್ದಿಗೋಷ್ಠಿಯಲ್ಲಿ ಇದ್ದರು.

More articles

Latest article