ಬೆಂಗಳೂರು: ದೇವನಹಳ್ಳಿ ತಾಲ್ಲೂಕಿನ ಚನ್ನರಾಯಪಟ್ಟಣ ಹೋಬಳಿಯ13 ಗ್ರಾಮಗಳಲ್ಲಿ 1,777 ಎಕರೆ ಭೂ ಸ್ವಾಧೀನ ಕೈಬಿಡಲು ರಾಜ್ಯ ಸರ್ಕಾರ ನಿರ್ಧರಿಸಿದೆ. ವಿಧಾನಸೌಧದಲ್ಲಿ ಮಂಗಳವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ರೈತರ ಜತೆಗಿನ ಸಭೆಯಲ್ಲಿ ಈ ಮಹತ್ವದ ನಿರ್ಧಾರ ತೆಗೆದುಕೊಳ್ಳಲಾಗಿದೆ
ಕೆಐಎಡಿಬಿ ದೇವನಹಳ್ಳಿ ತಾಲೂಕಿನ 13 ಗ್ರಾಮಗಳ 1,777 ಎಕರೆ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳಲು ಈ ಹಿಂದಿನ ಬಿಜೆಪಿ ಸರ್ಕಾರದಲ್ಲಿ ಅಧಿಸೂಚನೆ ಹೊರಡಿಸಲಾಗಿತ್ತು. ಈ ಸ್ವಾದೀನ ವಿರೋಧಿಸಿ ರೈತರು ಸುಮಾರು 1,200ಕ್ಕೂ ಹೆಚ್ಚು ದಿನಗಳಿಂದ ಪ್ರತಿಭಟನೆ, ಹೋರಾಟ ನಡೆಸುತ್ತಿದ್ದರು. ರೈತರ ಹೋರಾಟಕ್ಕೆ ಮಣಿದಿರುವ ರಾಜ್ಯ ಸರ್ಕಾರ ಕೊನೆಗೂ ಭೂ ಸ್ವಾಧೀನ ಪ್ರಕ್ರಿಯೆ ಕೈಬಿಡಲು ನಿರ್ಧರಿಸಿದೆ..
ನಂತರ ಮಾತನಾಡಿದ ಮುಖ್ಯಮಂತ್ರಿಗಳು ದೇವನಹಳ್ಳಿ ತಾಲೂಕು ಚನ್ನರಾಯಪಟ್ಟಣ ಹಾಗೂ ಇತರ ಗ್ರಾಮಗಳಲ್ಲಿನ ಭೂಸ್ವಾಧೀನ ಪ್ರಕ್ರಿಯೆಯನ್ನು ಸಂಪೂರ್ಣವಾಗಿ ಕೈಬಿಟ್ಟಿದ್ದೇವೆ. ಸರ್ಕಾರ ಭೂಸ್ವಾಧೀನ ಪ್ರಕ್ರಿಯೆಯನ್ನು ಸಂಪೂರ್ಣವಾಗಿ ಕೈಬಿಡಲು ನಿರ್ಧರಿಸಿದೆ. ಕೆಲವು ರೈತರು ಜಮೀನು ನೀಡಲು ಸಿದ್ಧರಿರುವುದಾಗಿ ಮುಂದೆ ಬಂದಿದ್ದಾರೆ. ಜಮೀನು ನೀಡಲು ಇಚ್ಚಿಸುವವರ ಜಮೀನು ಸರ್ಕಾರ ಸ್ವಾಧೀನಪಡಿಸಿಕೊಳ್ಳಲಿದ್ದು, ಅವರಿಗೆ ಹೆಚ್ಚಿನ ಪರಿಹಾರ ಮತ್ತು ಅಭಿವೃದ್ಧಿಪಡಿಸಿದ ಜಮೀನು ನೀಡಲಾಗುವುದು ಎಂದರು.
ಭುಮಿ ಕೊಡುವ ರೈತರಿಗೆ ಮಾರ್ಗಸೂಚಿ ದರಕ್ಕಿಂತ ಹೆಚ್ಚುವರಿ ದರವನ್ನು ನೀಡಲಿದೆ. ಅಲ್ಲಿ ಕೃಷಿ ಚಟುವಟಿಕೆಗಳನ್ನು ಮುಂದುವರೆಸಲು ಬಯಸುವ ರೈತರು ಕೃಷಿ ಚಟುವಟಿಕೆಗಳನ್ನು ಮುಂದುವರೆಸಿಕೊಂಡು ಹೋಗಬಹುದಾಗಿದೆ. ದೇವನಹಳ್ಳಿ ತಾಲೂಕು ಬೆಂಗಳೂರಿಗೆ ಹತ್ತಿರದ್ದಲ್ಲಿದ್ದು, ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಅಲ್ಲಿಯೇ ಇದೆ. ರಾಜ್ಯದ ಪ್ರತಿಯೊಬ್ಬರ ವರಮಾನ ಹೆಚ್ಚಳವಾಗಬೇಕಿದ್ದರೆ ಅಭಿವೃದ್ದಿ ಕಾರ್ಯ ನಡೆಯಬೇಕಾಗಿದೆ. ಹೊಸ ಕೈಗಾರಿಕೆಗಳ ಪ್ರಾರಂಭಕ್ಕೆ, ಬಂಡವಾಳ ಹೂಡಿಕೆಗೆ ಜಮೀನಿನ ಅಗತ್ಯವಿದೆ. ಜಮೀನು ಸ್ವಾಧೀನ ಪಡಿಸಿ ಕೈಗಾರಿಕೆಗಳನ್ನು ಪ್ರಾರಂಭಿಸಲು ಸರ್ಕಾರ ನೀಡಬೇಕಾಗುತ್ತದೆ ಎಂದು ಹೇಳಿದರು.
ಸರ್ಕಾರ ಭೂಸ್ವಾಧೀನ ಪ್ರಕ್ರಿಯೆಯನ್ನು ಸಂಪೂರ್ಣವಾಗಿ ಕೈಬಿಡಲು ನಿರ್ಧರಿಸಿದೆ. ಆದರೆ ಕೆಲವು ರೈತರು ಜಮೀನು ನೀಡಲು ಸಿದ್ಧರಿರುವುದಾಗಿ ಮುಂದೆ ಬಂದಿದ್ದಾರೆ. ಜಮೀನು ನೀಡಲು ಇಚ್ಚಿಸುವವರ ಜಮೀನು ಸರ್ಕಾರ ಸ್ವಾಧೀನಪಡಿಸಿಕೊಳ್ಳಲಿದ್ದು, ಅವರಿಗೆ ಹೆಚ್ಚಿನ ಪರಿಹಾರ ಮತ್ತು ಹೆಚ್ಚಿನ ವಿಸ್ತೀರ್ಣದ ಅಭಿವೃದ್ಧಿಪಡಿಸಿದ ನಿವೇಶನ ನೀಡಲಾಗುವುದು. 1777 ಎಕ್ರೆ ಜಮೀನು ದೇವನಹಳ್ಳಿ ತಾಲೂಕಿನಲ್ಲಿ ಸರ್ಕಾರ ಸ್ವಾಧೀನಪಡಿಸಿ, ಅಲ್ಲಿ ಏರೋಸ್ಪೇಸ್ ಪ್ರಾರಂಭಿಸುವುದು ಸರ್ಕಾರದ ಉದ್ದೇಶ. ಬೆಂಗಳೂರಿನ ಸಮೀಪದಲ್ಲಿ ಇದಕ್ಕೆ ಜಮೀನು ಒದಗಿಸಲು ಕೋರಿಕೆ ಸ್ವೀಕರಿಸಲಾಗಿತ್ತು. ರಾಜ್ಯದಲ್ಲಿ ಭೂಸ್ವಾಧೀನ ವಿರುದ್ಧ ಈ ಮಟ್ಟದ ಪ್ರತಿಭಟನೆ ನಡೆದಿಲ್ಲ. ಅದು ಫಲವತ್ತಾದ ವ್ಯವಸಾಯಕ್ಕೆ ಯೋಗ್ಯವಾದ ಭೂಮಿ. ಅಲ್ಲಿನ ರೈತರು ಆ ಜಮೀನಿನ ಮೇಲೆ ಹೆಚ್ಚು ಅವಲಂಬಿತರಾಗಿದ್ದಾರೆ. ಆದ್ದರಿಂದ ಭೂಸ್ವಾಧೀನ ಪ್ರಕ್ರಿಯೆ ಕೈಬಿಡಬೇಕೆಂದು ಹೋರಾಟಗಾರರು ಸ್ಪಷ್ಟಪಡಿಸಿದ್ದಾರೆ ಎಂದರು.
ಸರ್ಕಾರ ರೈತರು, ಜಮೀನುದಾರರು ಸೇರಿದಂತೆ ಎಲ್ಲರ ಅಹವಾಲುಗಳನ್ನು ಆಲಿಸಿದೆ. ರಾಜ್ಯದ ಅಭಿವೃದ್ದಿಗೆ, ಬೆಳವಣಿಗೆಗೆ ಕೈಗಾರಿಕೆ ಉತ್ತೇಜನ ನೀಡುವುದು ಅಗತ್ಯವಿದೆ.
ಯಾವುದೇ ಕಾರಣಕ್ಕೆ ಜಮೀನು ಸ್ವಾಧೀನ ಕೈಬಿಟ್ಟರೆ ಈ ಕೈಗಾರಿಕೆ ಬೇರೆ ಕಡೆ ಹೋಗುವ ಸಾಧ್ಯತೆ ಇದೆ. ಆದರೂ ಸರ್ಕಾರ ರೈತಪರವಾಗಿದ್ದು, ಅವರ ಬೇಡಿಕೆಗಳನ್ನು ಪರಿಗಣಿಸಿ ಭೂಸ್ವಾಧೀನ ಪ್ರಕ್ರಿಯೆಯನ್ನು ಕೈಬಿಡಲು ನಿರ್ಧರಿಸಿದೆ ಎಂದು ಮುಖ್ಯಮಂತ್ರಿಗಳು ಹೇಳಿದರು.
ಮುಖ್ಯಮಂತ್ರಿ ಅವರ ಸಾಮಾಜಿಕ ನ್ಯಾಯ ಕೇವಲ ನುಡಿಯಲ್ಲಿ ಮಾತ್ರವಲ್ಲ ನಡೆಯಲ್ಲೂ ಅದನ್ನು ಇಂದು ಅವರು ತೋರಿಸಿಕೊಟ್ಟಿದ್ದಾರೆ ಎಂದು ಹೋರಾಟಗಾರ, ನಟ ಪ್ರಕಾಶ್ ರಾಜ್ ಹೇಳಿದರು.
ವಿರೋಧ ಪಕ್ಷದ ನಾಯಕರಾಗಿದ್ದ ಸಿಎಂ ಸಿದ್ದರಾಮಯ್ಯ ಅವರು ಈ ಭೂ ಸ್ವಾಧೀನವನ್ನು ವಿರೋಧಿಸಿದ್ದರು.
ಸಚಿವರಾದ ಎಂ.ಬಿ.ಪಾಟೀಲ್, ಕೆ.ಎಚ್.ಮುನಿಯಪ್ಪ, ಹೆಚ್.ಕೆ.ಪಾಟೀಲ್, ಕೃಷ್ಣ ಭೈರೇಗೌಡ, ಪ್ರಿಯಾಂಕ ಖರ್ಗೆ, ಭೈರತಿ ಸುರೇಶ್, ಮುಖ್ಯಮಂತ್ರಿ ಅವರ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್, ಕಾನೂನು ಸಲಹೆಗಾರ ಪೊನ್ನಣ್ಣ, ಅಡ್ವಕೇಟ್ ಜನರಲ್ ಶಶಿಕಿರಣ ಶೆಟ್ಟಿ, ರೈತ ಪ್ರತಿನಿಧಿಗಳು ಮತ್ತಿತರರು ಉಪಸ್ಥಿತರಿದ್ದರು