ಬೆಂಗಳೂರು: ಧರ್ಮಸ್ಥಳ ಗ್ರಾಮದಲ್ಲಿ ಕೊಲೆಯಾದ ನೂರಾರು ಶವಗಳನ್ನು ಕಾನೂನು ಬಾಹಿರವಾಗಿ ಹೂತು ಹಾಕಲಾಗಿದೆ ಎಂಬ ಆರೋಪದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಬಂಧಕ ಆದೇಶ ಕೋರಲಾದ ಅಸಲು ದಾವೆ ವಿಚಾರಣೆ ನಡೆಸುತ್ತಿರುವ ಬೆಂಗಳೂರು ಸಿಟಿ ಸಿವಿಲ್ ಕೋರ್ಟ್ನ ಸೆಷನ್ಸ್ ನ್ಯಾಯಾಧೀಶ ವಿಜಯ ಕುಮಾರ್ ರೈ ತಮ್ಮ ಮುಂದಿರುವ ಹಾಲಿ ಪ್ರಕರಣವನ್ನು ಬೇರೊಂದು ನ್ಯಾಯಾಲಯಕ್ಕೆ ವರ್ಗಾಯಿಸಲು ಮನವಿ ಮಾಡಿಕೊಂಡಿದ್ದಾರೆ.
ಪತ್ರಕರ್ತ ನವೀನ್ ಸೂರಿಂಜೆ, ಸಾಮಾಜಿಕ ಹೋರಾಟಗಾರ ಮುನೀರ್ ಕಾಟಿಪಳ್ಳ ಹಾಗೂ ಬೈರಪ್ಪ ಹರೀಶ್ ಕುಮಾರ್ ಅವರು ನ್ಯಾಯಾಧೀಶ ರೈ ನೀಡಿದ್ದ ಪ್ರತಿಬಂಧಕ ಆದೇಶವನ್ನು ಪ್ರಶ್ನಿಸಿದ್ದರು.
ಡಿ. ಹರ್ಷೇಂದ್ರ ಕುಮಾರ್ ಕುಟುಂಬದಿಂದ ನಿರ್ವಹಣೆ ಮಾಡಲಾಗುತ್ತಿರುವ ಮಂಗಳೂರಿನ ಶ್ರೀ ಧರ್ಮಸ್ಥಳ ಮಂಜುನಾಥ ಕಾನೂನು ಕಾಲೇಜಿನಲ್ಲಿ ನ್ಯಾಯಾಧೀಶ ರೈ 25 ವರ್ಷಗಳ ಹಿಂದೆ ವಿದ್ಯಾರ್ಥಿಯಾಗಿದ್ದರು. ಹೀಗಾಗಿ, ಹಾಲಿ ಪ್ರಕರಣವನ್ನು ಬೇರೊಂದು ನ್ಯಾಯಾಲಯಕ್ಕೆ ವರ್ಗಾಯಿಸಬೇಕು ಎಂದು ಕೋರಿ ಮೆಮೊ ಸಲ್ಲಿಸಿದ್ದರು.
ಈ ಕಾರಣದಿಂದ ನ್ಯಾಯಾಧೀಶ ರೈ ಅವರು, ನ್ಯಾಯಾಂಗ ವ್ಯವಸ್ಥೆಯಲ್ಲಿ ನಂಬಿಕೆ ಮುಂದುವರೆಸಲು ನ್ಯಾಯ ಒದಗಿಸಿದರಷ್ಟೇ ಸಾಲದು. ಅದು ಕಾಣುವಂತಿರಬೇಕು. ಈ ಮೊಕದ್ದಮೆಯಲ್ಲಿ ನಾನು ಯಾವುದೇ ವೈಯಕ್ತಿಕ ಆಸಕ್ತಿ ಹೊಂದಿಲ್ಲ. ಆದರೂ, ನಾನು ಧರ್ಮಸ್ಥಳ ಕಾಲೇಜಿನ ವಿದ್ಯಾರ್ಥಿಯಾಗಿದ್ದೆ. ಈ ಕಾರಣದಿಂದ, ಬೆಂಗಳೂರು ನಗರ ಸಿವಿಲ್ ನ್ಯಾಯಾಲಯ ಕಾಯ್ದೆ-1979ರ ಕಲಂ 13(2)(ಬಿ) ಪ್ರಕಾರ ಈ ಅಸಲು ದಾವೆ ಸಂಖ್ಯೆ No.5185/2025ರ ಈ ಮೊಕದ್ದಮೆಯನ್ನು ಬೇರೊಂದು ನ್ಯಾಯಾಲಯಕ್ಕೆ ವರ್ಗಾಯಿಸುವುದು ಸೂಕ್ತ ಎಂದು ಪ್ರಧಾನ ನ್ಯಾಯಾಧೀಶರಿಗೆ ವಿನಂತಿ ಮಾಡಿದ್ದಾರೆ.
ನ್ಯಾಯಾಧೀಶ ವಿಜಯಕುಮಾರ್ ರೈ ಈ ಪ್ರಕರಣದಲ್ಲಿ, ಕ್ಷೇತ್ರದ ಧರ್ಮಾಧಿಕಾರಿ ಡಿ.ವೀರೇಂದ್ರ ಹೆಗ್ಗಡೆ ಅವರ ಸಹೋದರ ಡಿ. ಹರ್ಷೇಂದ್ರ ಕುಮಾರ್ ವಿರುದ್ಧ ಯಾವುದೇ ಮಾನಹಾನಿ ವಿಷಯ ಪ್ರಸಾರ ಅಥವಾ ಪ್ರಕಟ ಮಾಡಬಾರದು ಎಂದು ಈ ಮೊದಲು ಏಕಪಕ್ಷೀಯ ಪ್ರತಿಬಂಧಕ ಆದೇಶ ನೀಡಿದ್ದರು.