ಬೆಂಗಳೂರು: ಧರ್ಮಸ್ಥಳ ಗ್ರಾಮದಲ್ಲಿ ನಡೆದಿವೆ ಎನ್ನಲಾದ ಅತ್ಯಾಚಾರ, ಅಪರಾಧ ಕೃತ್ಯಗಳ ತನಿಖೆಗೆ ರಾಜ್ಯ ಸರ್ಕಾರ ರಚಿಸಿದ್ದ ವಿಶೇಷ ತನಿಖಾ ತಂಡದಿಂದ (ಎಸ್ ಐ ಟಿ) ಹಿಂದೆ ಸರಿಯಲು ಐಪಿಎಸ್ ಅಧಿಕಾರಿ ಸೌಮ್ಯಲತಾ ಹಾಗೂ ಮತ್ತೊಬ್ಬ ಐಪಿಎಸ್ ಯೇತರ ಅಧಿಕಾರಿ ನಿರ್ಧರಿಸಿದ್ದಾರೆ ಎಂದು ತಿಳಿದು ಬಂದಿದೆ.
ವ್ಯಾಪಕ ಪ್ರಮಾಣದಲ್ಲಿ ದೂರುಗಳು ಮತ್ತು ಎಸ್ ಐಟಿ ತನಿಖೆಗೆ ಒತ್ತಡ ಬಂದಿದ್ದರಿಂದ ಸರ್ಕಾರವು ಜುಲೈ 20ರಂದು ಎಸ್ಐಟಿ ರಚಿಸಿ, ತನಿಖೆಗೆ ಆದೇಶಿಸಿತ್ತು.
ಆದರೆ ಸೌಮ್ಯಲತಾ ಅವರು ಎಸ್ ಐ ಟಿ ಮುಖ್ಯಸ್ಥ ಪ್ರಣವ್ ಮೊಹಾಂತಿ ಅವರಿಗೆ ಪತ್ರ ಬರೆದಿದ್ದು, ವೈಯಕ್ತಿಕ ಕಾರಣಗಳಿಗಾಗಿ ತಮ್ಮನ್ನು ತಂಡದಿಂದ ಕೈಬಿಡಬೇಕೆಂದು ಮನವಿ ಮಾಡಿಕೊಂಡಿದ್ದರು. ಸೌಮ್ಯಲತಾ ಅವರು ಅವರ ಮನವಿಯನ್ನು ಪ್ರಣವ್ ಮೊಹಾಂತಿ ಒಪ್ಪಿಕೊಂಡಿದ್ದಾರೆ ಎನ್ನಲಾಗಿದೆ.
ಮತ್ತೊಬ್ಬ ಐಪಿಎಸ್ ಯೇತರ ಅಧಿಕಾರಿಯೊಬ್ಬರು ತಂಡದಿಂದ ಕೈಬಿಡುವಂತೆ ಪತ್ರ ಬರೆದಿದ್ದಾರೆ ಎಂದು ಮೂಲಗಳು ಹೇಳಿವೆ. ಈ ವಿಚಾರವನ್ನು ತನಿಖಾ ತಂಡದ ಮುಖ್ಯಸ್ಥರು, ಸರ್ಕಾರದ ಗಮನಕ್ಕೆ ತಂದಿನ ಅವರಿಬ್ಬರ ಜಾಗಕ್ಕೆ ಹೊಸ ಅಧಿಕಾರಿಗಳ ನೇಮಕ ಮಾಡುವ ಸಾಧ್ಯತೆ ಇದೆ ಎಂದು ಗೃಹ ಇಲಾಖೆ ಮೂಲಗಳು ತಿಳಿಸಿವೆ.
ಆಂತರಿಕ ಭದ್ರತಾ ವಿಭಾಗದ ಪೊಲೀಸ್ ಮಹಾನಿರ್ದೇಶಕ ಪ್ರಣವ್ ಮೊಹಾಂತಿ ನೇತೃತ್ವದಲ್ಲಿ ವಿಶೇಷ ತನಿಖಾ ರಚಿಸಲಾಗಿತ್ತು. ಪೊಲೀಸ್ ನೇಮಕಾತಿ ವಿಭಾಗದ ಡಿಐಜಿ ಎಂ.ಎನ್.ಅನುಚೇತ್, ಸಿಎಆರ್ ಕೇಂದ್ರದ ಡಿಸಿಪಿ ಸೆ ಮತ್ತು ಆಂತರಿಕ ಭದ್ರತಾ ವಿಭಾಗದ ಎಸ್ಪಿ ಜಿತೇಂದ್ರ ಕುಮಾರ್ ದಯಾಮ ಸದಸ್ಯರಾಗಿದ್ದರು. ಈ ತಂಡಕ್ಕೆ ದಕ್ಷಿಣ ಕನ್ನಡ, ಉತ್ತರ ಕನ್ನಡದ ಇನ್ ಸ್ಪೆಕ್ಟರ್ ಗಳು, ಸಬ್ ಇನ್ ಸ್ಪೆಕ್ಟರ್ ಗಳು, ಹೆಡ್ ಕಾನ್ ಸ್ಟೆಬಲ್ ಹಾಗೂ ಕಾನ್ ಸ್ಟೇಬಲ್ ಗಳನ್ನು ಒಳಗೊಂಡ 20 ಅಧಿಕಾರಿಗಳು ಹಾಗೂ ಸಿಬ್ಬಂದಿಯನ್ನು ನಿಯೋಜಿಸಿ, ರಾಜ್ಯ ಪೊಲೀಸ್ ಮಹಾನಿರ್ದೇಶಕ ಎಂ.ಎ.ಸಲೀಂ ಅವರು ಜುಲೈ 22ರಂದು ಆದೇಶ ಹೊರಡಿಸಿದ್ದರು.
ಧರ್ಮಸ್ಥಳ ಗ್ರಾಮದಲ್ಲಿ ನಡೆದಿದೆ ಎನ್ನಲಾದ ಅಪರಾಧ ಕೃತ್ಯಗಳಿಗೆ ಸಂಬಂಧಿಸಿದಂತೆ ಸಮಗ್ರ ತನಿಖೆ ನಡೆಸಬೇಕೆಂದು ಆಗ್ರಹಿಸಿ, ರಾಜ್ಯ ಮಹಿಳಾ ಆಯೋಗವು ಜುಲೈ 14ರಂದು ಸರ್ಕಾರಕ್ಕೆ ಪತ್ರ ಬರೆದಿತ್ತು. ಅನಾಮಧೇಯ ವ್ಯಕ್ತಿಯೊಬ್ಬರು ನ್ಯಾಯಾಧೀಶರ ಎದುರು ಹಾಜರಾಗಿ ಹೇಳಿಕೆ ದಾಖಲಿಸಿದ್ದರು. ಈ ಆರೋಪಗಳನ್ನು ಕುರಿತು ತನಿಖೆ ನಡೆಸುವಂತೆ ವಕೀಲರು, ಸಾಮಾಜಿಕ ಕಾರ್ಯಕರ್ತರು ಆಗ್ರಹಪಡಿಸಿದ್ದರು.