ಮಂಗಳೂರು: ಧರ್ಮಸ್ಥಳ ಗ್ರಾಮದಲ್ಲಿ ನಡೆದಿವೆ ಎನ್ನಲಾದ ಅಪರಾಧ ಕೃತ್ಯಗಳಿಗೆ ಸಂಬಂಧಿಸಿದ ಮೃತದೇಹಗಳನ್ನು ಹೂತುಹಾಕಿದ ಪ್ರಕರಣದ ಸಾಕ್ಷಿ ದೂರುದಾರ ಧರ್ಮಸ್ಥಳದ ನೇತ್ರಾವತಿ ಸ್ನಾನಘಟ್ಟದ ಸಮೀಪದಲ್ಲಿ ಮೃತದೇಹಗಳನ್ನು ಹೂತು ಹಾಕಿದ ಜಾಗವನ್ನು ವಿಶೇಷ ತನಿಖಾ ತಂಡದ (ಎಸ್ ಐ ಟಿ) ಅಧಿಕಾರಿಗಳಿಗೆ ತೋರಿಸಿದ್ದಾರೆ.
ಸಾಕ್ಷಿದಾರರ ಮುಖಕ್ಕೆ ಮುಸುಕು ಹಾಕಿಸಿ ಕರೆದೊಯ್ದಿದ್ದರು. ಅವರನ್ನು ಪೋಲೀಸ್ ಭದ್ರತೆಯೊಂದಿಗೆ ಎಸ್ಐಟಿ ಅಧಿಕಾರಿಗಳು ನೇತ್ರಾವತಿ ಸ್ನಾನ ಘಟ್ಟದ ಬಳಿಗೆ ಕರೆತಂದರು. ನೇತ್ರಾವತಿ ನದಿ ಪಕ್ಕದಲ್ಲೇ ಇರುವ ಕಾಡಿನೊಳಗೆ ಎಸ್ ಐ ಟಿ ಅಧಿಕಾರಿಗಳನ್ನು ಸಾಕ್ಷಿ ದೂರುದಾರ ಕರೆದೊಯ್ದರು. ಆ ಸಂದರ್ಭದಲ್ಲಿ ಸಾಕ್ಷಿದಾರರ ಮೂವರು ವಕೀಲರು ಜತೆಗಿದ್ದರು.
ನಿನ್ನೆ ಮತ್ತು ಇಂದು ಸಾಕ್ಷಿ ದೂರುದಾರನನ್ನು ಮಂಗಳೂರಿನ ಮಲ್ಲಿಕಟ್ಟೆಯ ಪ್ರವಾಸಿ ಬಂಗಲೆಯಲ್ಲಿ ಎಸ್ಐಟಿ ಅಧಿಕಾರಿಗಳು ವಿಚಾರಣೆಗೆ ಒಳಪಡಿಸಿದ್ದರು. ಇದಕ್ಕೂ ಮುನ್ನ ಬೆಳ್ತಂಗಡಿಯ ಎಸ್ಐಟಿ ಕಚೇರಿಗೆ ಕರೆದೊಯ್ದರು. ನಂತರ ಅಲ್ಲಿಂದ ನೇತ್ರಾವತಿ ಸ್ನಾನಘಟ್ಟಕ್ಕೆ ಬಿಗು ಭದ್ರತೆಯೊಂದಿಗೆ ಕರೆದೊಯ್ದರು.
ಎಸ್ಐಟಿ ಅಧಿಕಾರಿಗಳಾದ ಎಂ.ಎನ್.ಅನುಚೇತ್, ಜಿತೇಂದ್ರ ಕುಮಾರ್ ದಯಾಮ, ಸಿ.ಎ.ಸೈಮನ್ ಮೊದಲಾದ ಅಧಿಕಾರಿಗಳು ಇದ್ದರು. ಎಸ್ ಐ ಟಿ ಮುಖ್ಯಸ್ಥರಾಗಿರುವ ಆಂತರಿಕ ಭದ್ರತಾ ವಿಭಾಗದ ಪೊಲೀಸ್ ಮಹಾನಿರ್ದೇಶಕ ಪ್ರಣವ್ ಮೊಹಾಂತಿ ಅವರು ಮಂಗಳೂರಿಗೆ ಭೇಟಿ ನೀಡಿ ಎಸ್ಐಟಿ ಅಧಿಕಾರಿಗಳಿಗೆ ಮಾರ್ಗದರ್ಶನ ಮಾಡಿದ್ದರು.