Sunday, September 8, 2024

ಇಡಿಯವರ ಬೆದರಿಕೆಗಳಿಗೆ ನಾವು ಬೆದರುವುದಿಲ್ಲ: ಸಿಎಂ ಸಿದ್ದರಾಮಯ್ಯ

Most read

ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ಅಕ್ರಮ ವರ್ಗಾವಣೆ ಪ್ರಕರಣದವನ್ನು ಇಡಿ ತನಿಖೆ ನಡೆಸುವುದಕ್ಕೆ ನಮಗೆ ತಕರಾರಿಲ್ಲ. ಆದರೆ ನಮ್ಮ ಸರ್ಕಾರವನ್ನ ಗುರಿಯಾಗಿಸುವ ಕೆಲಸ ಮಾಡುತ್ತಿದೆ. ಕಾನೂನಿಗೆ ವಿರುದ್ಧವಾಗಿ ವಾಮಮಾರ್ಗವಾಗಿ ಇಡಿ ಕೆಲಸ ಮಾಡುತ್ತಿದೆ. ಇಡಿಯವರ ಬೆದರಿಕೆಗಳಿಗೆ ನಾವು ಬೆದರುವುದಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಅವರು ಇಡಿ ತನಿಖಾ ಸಂಸ್ಥೆ ಹಾಗೂ ಕೇಂದ್ರ ಬಿಜೆಪಿ ವಿರುದ್ಧ ಆಕ್ರೋಶ ಹೊರ ಹಾಕಿದ್ದಾರೆ.

ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಸಿಎಂ, ಡಿಸಿಎಂ ಹಾಗೂ ನಾಗೇಂದ್ರ ಹೆಸರೇಳುವಂತೆ ಕಿರುಕುಳ ಆರೋಪಕ್ಕೆ ಸಂಬಂಧಿಸಿ ವಿಧಾನಸೌಧದ ಗಾಂಧಿ ಪ್ರತಿಮೆ ಬಳಿ ಕಾಂಗ್ರೆಸ್ ನಾಯಕರು ಪ್ರತಿಭಟನೆ ನಡೆಸುತ್ತಿದ್ದಾರೆ.

ಪ್ರತಿಭಟನೆ ವೇಳೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಒಂದೇ ಕೇಸ್ನಲ್ಲಿ ಮೂರು ತನಿಖಾ ಸಂಸ್ಥೆ ವಿಚಾರಣೆ ಮಾಡುತ್ತಿವೆ. ವಾಲ್ಮೀಕಿ ನಿಗಮದಲ್ಲಿ ಅಕ್ರಮ ನಡೆದಿಲ್ಲ ಎಂದು ನಾವು ಹೇಳ್ತಿಲ್ಲ. ವಿಪಕ್ಷದವರು 186 ಕೋಟಿ ದುರುಪಯೋಗ ಆಗಿದೆ ಅಂತಿದ್ದಾರೆ. ನಿಗಮದ ಹಣ ವರ್ಗಾಣೆ ಆಗಿರುವುದು 89.63 ಕೋಟಿ ರೂ. ಪ್ರಕರಣ ಸಂಬಂಧ ಈಗಾಗಲೇ 12 ಆರೋಪಿಗಳ ಬಂಧನವಾಗಿದೆ. ಅಧಿಕಾರಿಗಳು ಈಗಾಗಲೇ 34 ಕೋಟಿ ರಿಕವರಿ ಮಾಡಿದ್ದಾರೆ. ಶೇಕಡಾ 90ರಷ್ಟು ಎಸ್ಐಟಿ ಅಧಿಕಾರಿಗಳ ತನಿಖೆ ಮುಗಿದಿದೆ. ಬ್ಯಾಂಕ್ ಅಧಿಕಾರಿಗಳ ದೂರಿನ ಮೇರೆಗೆ ಸಿಬಿಐ ತನಿಖೆ ಮಾಡ್ತಿದೆ. ಆದ್ರೆ ಇಡಿ ತಂಡ ಸ್ವಯಂ ಪ್ರೇರಣೆಯಿಂದ ತನಿಖೆ ಮಾಡುತ್ತಿದೆ. ಪ್ರಕರಣ ಸಂಬಂಧ ಅಧಿಕಾರಿ ಕಲ್ಲೇಶ್ರನ್ನು ವಿಚಾರಣೆ ಮಾಡಿದ್ದಾರೆ. ವಿಚಾರಣೆ ವೇಳೆ ಸಿಎಂ, ಡಿಸಿಎಂ, ಸಚಿವರ ಹೆಸರೇಳುವಂತೆ ಒತ್ತಡ ಹಾಕಿದ್ದಾರೆ ಎಂದು ದೂರಿದ್ದಾರೆ.

ನಾವು ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಅಕ್ರಮ ನಡೆದಿಲ್ಲ ಎಂದು ಹೇಳಿಲ್ಲ. ವಿರೋಧ ಪಕ್ಷದವರು ಪದೇ ಪದೇ 187.33 ಕೋಟಿ ರೂ.ಗಳ ದುರುಪಯೋಗವಾಗಿದೆ ಎಂದು ಆರೋಪಿಸಿದ್ದಾರೆ . ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ, ಎಂ.ಜಿ ರಸ್ತೆ ಶಾಖೆಯಿಂದ ತೆಲಂಗಾಣಕ್ಕೆ ಹೋಗಿರುವುದು 89.63 ಕೋಟಿ ರೂ.ಗಳು. ಎಸ್. ಐ.ಟಿ ರಚನೆಯಾದ ಮೇಲೆ ತ್ವರಿತವಾಗಿ ತನಿಖೆ ಕೈಗೊಂಡಿದ್ದಾರೆ. ಈಗಾಗಲೇ 12 ಜನರನ್ನು ಬಂಧಿಸಿದ್ದು, ಬೇರೆ ಬೇರೆ ಜನರು ಹಂಚಿಕೊಂಡಿದ್ದ ಮೊತ್ತದಲ್ಲಿ 34 ಕೋಟಿ ರೂಪಾಯಿ ನಗದನ್ನು ಹಿಂಪಡೆದಿದ್ದಾರೆ. 89.63 ಕೋಟಿ . 46 ಕೋಟಿ ರೂ.ಗಳನ್ನು ಫ್ಸ್ತ ಫೈನಾನ್ಸ್ ಕೋ ಆಪರೇಟಿವ್ ಬ್ಯಾಂಕ್ , ರತ್ನಾಕರ ಬ್ಯಾಂಕ್ ಲೀ., ನಲ್ಲಿ 46 ಕೋಟಿ ರೂಪಾಯಿ ಗಳನ್ನೂ ಮುಟ್ಟುಗೋಲು ಹಾಕಿಕೊಳ್ಳಲಾಗಿದೆ.ಒತ್ತು 85.25 ಕೋಟಿ ಹಿಂಪಡೆದು , ಮುಟ್ಟುಗೋಲು ಹಾಕಿಕೊಂಡಿದ್ದಾರೆ. ಒಟ್ಟು ಅಕ್ರಮವಾಗಿರುವುದು 85.63 ಕೋಟಿಗಳು. ಎಸ್. ಐ ಟಿ ಅವರು ಶೇ.95% ತನಿಖೆಯನ್ನು ಪೂರ್ಣಗೊಳಿಸಿದ್ದಾರೆ ಎಂದರು.

ಅಕ್ರಮವಾಗಲು ಬ್ಯಾಂಕಿನ ಪ್ರಧಾನ ವ್ಯವಸ್ಥಾಪಕ, ಉಪವ್ಯವಸ್ಥಾಪಕರು, ಕ್ರೆಡಿಟ್ ಅಧಿಕಾರಿಗಳು ಕಾರಣ ಎಂದು ಬ್ಯಾಂಕಿನಿಂದ ಸೂರು ನೀಡಲಾಗಿದ್ದು ಸಿಬಿಐ ತನಿಖೆ ಮಾಡುತ್ತಿದೆ. ಅವರೇನು ಮಾಡಿದ್ದಾರೆಂದು ತಿಳಿದಿಲ್ಲ. ಇಡಿ ಯವರು ಸ್ವಯಂ ಪ್ರೇರಿತವಾಗಿ ತನಿಖೆ ಪ್ರಾರಂಭ ಮಾಡಿದ್ದು , ನಾಗೇಂದ್ರ ಹಾಗೂ ದದ್ದಲ್ ಅವರ ಮನೆ ಮೇಲೆ ದಾಳಿ ಮಾಡಿದ್ದಾರೆ. ನಾಗೇಂದ್ರ ಅವರನ್ನು ವಶಕ್ಕೆ ಪಡೆದು ನ್ಯಾಯಾಂಗ ಬಂಧನದಲ್ಲಿದ್ದಾರೆ. ಪರಿಶಿಷ್ಟ ಪಂಗಡ ಕಲ್ಯಾಣ ಇಲಾಖೆ,ಹೆಚ್ಚುವರಿ ನಿರ್ದೇಶಕ ಕಲ್ಲೇಶ್ ಎಂಬುವರು ಹೇಳಿಕೆಯನ್ನು ಕೊಟ್ಟಿದ್ದರೂ ಇವರೇ ಆದೇಶ ಮಾಡಿದ್ದಾರೆ ಎಂದು ಮುಖ್ಯಮಂತ್ರಿ ಹಾಗೂ ಇತರೆ ಸಚಿವರ ಹೆಸರನ್ನು ಬರೆದು ಕೊಡುವಂತೆ ಒತ್ತಾಯ ಮಾಡಿದ್ದಾರೆ. 187.33 ಕೋಟಿಗಳಲ್ಲಿ 43.33 ಕೋಟಿ ರೂಪಾಯಿ ಖಜಾನೆಯಿಂದ ಹೋಗಿದೆ. ಅದಕ್ಕೂ ನಮಗೂ ಸಂಬಂಧವಿಲ್ಲ. ನಮ್ಮ ಹಾಗೂ ಆರ್ಥಿಕ ಇಲಾಖೆ ಪಾತ್ರ ಇದರಲ್ಲಿ ಇರುವುದಿಲ್ಲ. ಬಜೆಟ್ ಒಮ್ಮೆ ಅನುಮೋದನೆಯಾದ ಮೇಲೆ ಅನುದಾನ ಕಾರ್ಯದರ್ಶಿಗಳಿಗೆ, ಅಲ್ಲಿಂದ ಅದನ್ನು ನಿರ್ದೇಶಕರಿಗೆ ಹಾಗೂ ನಿರ್ದೇಶಕರು ಅನುದಾನವನ್ನು ವ್ಯವಸ್ಥಾಪಕ ನಿರ್ದೇಶಕರಿಗೆ ಕೊಡುತ್ತಾರೆ. ಇದು ಪ್ರಕ್ರಿಯೆ ಎಂದು ವಿವರಿಸಿದರು

ಜಾರಿ ನಿರ್ದೇನಾಲಯದವರು ಕಲ್ಲೇಶ್ ಅವರಿಗೆ ಹೆದರಿಸಿ, ಬೆದರಿಸಿ, ಜೀವ ಭಯ ಉಂಟು ಮಾಡಿ ಅನಗತ್ಯವಾಗಿ ನನ್ನ ಹೆಸರು ಹೇಳುವಂತೆ ಬೆದರಿಸಿದ್ದಾರೆ. ಪ್ರಕರಣದಲ್ಲಿ ಕಾನೂನಿನ ಪ್ರಕಾರ ನನ್ನ ಮೇಲೆ ಆರೋಪ ಬರುವಂತೆ ಮಾಡಲು ಒತ್ತಾಯಿಸಿದ್ದಾರೆ. ಕಲ್ಲೇಶ್ ದೂರು ನೀಡಿ ಪ್ರಕರಣ ದಾಖಲಾಗಿದೆ. ದೂರಿನಲ್ಲಿ ಏನೇನು ನಡೆಯಿತು ಎಂದು ಹೇಳಿದ್ದಾರೆ ಎಂದರು.

ಒಟ್ಟಾರೆಯಾಗಿ ಕೇಂದ್ರ ಸರ್ಕಾರ ರಾಜ್ಯ ಸರ್ಕಾರವನ್ನು ಅಸ್ಥಿರಗೊಳಿಸಲು ಹಾಗೂ ಮುಖ್ಯಮಂತ್ರಿಗಳನ್ನು ಗುರಿಯಾಗಿಸಬೇಕು ಹಾಗೂ ನನ್ನ ಮತ್ತು ಸರ್ಕಾರದ ವರ್ಚಸ್ಸನ್ನು ಹಾಳು ಮಾಡಬೇಕು. ನಮ್ಮ ಸರ್ಕಾರದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿರುದ್ಧ ಇದ್ದೇವೆ ಎಂದು ರಾಜ್ಯದ ಜನರಿಗೆ ಹೇಳಬೇಕೆಂದು ಹೀಗೆ ಮಾಡುತ್ತಿದ್ದಾರೆ. ನಾವು ಎಂದಿಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರು, ದುರ್ಬಲ ವರ್ಗದವರ, ಬಡವರ, ರೈತರ , ಕಾರ್ಮಿಕರ ಪರವಾಗಿ ಇದ್ದೇವೆ . ಆದರೂ ಹೇಗಾದರೂ ಮಾಡಿ ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರವಿರಬಾರದು, ದುರ್ಬಲಗೊಳಿಸಬೇಕೆಂಬ ಉದ್ದೇಶದಿಂದ ವಾಮ ಮಾರ್ಗವನ್ನು ಅನುಸರಿಸುತ್ತಿದ್ದಾರೆ. ಆರ್ಥಿಕ ಇಲಾಖೆಯಾಗಲಿ, ಮುಖ್ಯಮಂತ್ರಿಯಾಗಲಿ ಈ ಹಗರಣಕ್ಕೆ ಸಂಬಂಧಪಟ್ಟಿಲ್ಲ ಎಂದು ಸ್ಪಷ್ಟಪಡಿಸಿದ ಮುಖ್ಯಮಂತ್ರಿಗಳು , ಹಗರಣ ಆಗಿದೆ ಎಂದು ತನಿಖೆ ಮಾಡಿಸುತ್ತಿದ್ದೇವೆ ಎಂದರು.

ಮೃತ ಚಂದ್ರಶೇಖರ್ ಅವರ ಪತ್ನಿ ಕವಿತಾ ಅವರು ನೀಡಿರುವ ದೂರು, ಪದ್ಮನಾಭ ಅವರ ದೂರಿನನ್ವಯ ತನಿಖೆ ಸರಿಯಾದ ದಾರಿಯಲ್ಲಿ ಸಾಗಿದೆ ಎಂದರು.

ಆದರೆ ಬಿಜೆಪಿ ಅಧಿಕಾರದ ಅವಧಿಯಲ್ಲಿ ನಡೆದಿರುವ ಭೋವಿ ಅಭಿವೃದ್ಧಿ ನಿಗಮ, ದೇವರಾಜ ಅರಸ್ ಟ್ರಕ್ ಟರ್ಮಿನಲ್, ಎ.ಪಿ .ಎಂ.ಸಿ ಹಾಗೂ ಕೋವಿಡ್ ಹಗರಣಗಳಲ್ಲಿ ಇಡಿ ಬರಲೇ ಇಲ್ಲ. ಬಿಜೆಪಿ ಸಿಬಿಐ ಗೆ ವಹಿಸಲು ಹೇಳುತ್ತಾರೆ. ಅವರು ವಿರೋಧಪಕ್ಷ ದಲ್ಲಿದ್ದಾಗ ಚೋರ್ ಬಚಾವ್ ಸಂಸ್ಥೆ ಎನ್ನುತ್ತಿದ್ದರು. ಅವರ ಸರ್ಕಾರ. ಕೇಂದ್ರದಲ್ಲಿರುವುದರಿಂದ ಸಿಬಿಐ ಗೆ ವಹಿಸುವಂತೆ ಒತ್ತಾಯಿಸುತ್ತಿದ್ದಾರೆ . ನಾವು ಅನೇಕ ಪ್ರಕರಣಗಳನ್ನು ಸಿಬಿಐ ಗೆ ವಹಿಸಿದ್ದೇವೆ. ರಾಘವೇಂದ್ರ ಕೋ-ಆಪರೇಟಿವ್ ಬ್ಯಾಂಕಿನ ಪ್ರಕರಣವನ್ನು ಸಿಬಿಐ ಗೆ ವಹಿಸಲಾಗಿದೆ. ಪರೇಶ್ ಮೆಹ್ತಾ, ರವಿ, ಗಣಪತಿ, ಲಾಟರಿ ಪ್ರಕರಣಗಳನ್ನು ಸಿಬಿಐ ಗೆ ವಹಿಸಲಾಗಿದೆ. ಸರ್ಕಾರ ವಿವೇಚನೆಯನ್ನು ಆಧರಿಸಿ ಪ್ರಕರಣಗಳನ್ನು ವಹಿಸುತ್ತದೆ. ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಮಾರ್ಗಸೂಚಿಗಳು ಪ್ರಕಾರ 25 ಕೋಟಿ ರೂಪಾಯಿ ಗಿಂತ ಹೆಚ್ಚಿನ ಮೊತ್ತವಿದ್ದರೆ ಸಿಬಿಐ ತನಿಖೆ ಮಾಡಬಹುದು. ತನಿಖೆಗೆ ನಮ್ಮ ತಕರಾರಿಲ್ಲ. ಆದರೆ ಕಾನೂನು ಬಾಹಿರವಾಗಿ ತನಿಖೆ ಮಾಡುವುದನ್ನು ಖಂಡಿಸುತ್ತೇವೆ. ಚುನಾಯಿತ ಸರ್ಕಾರವನ್ನು ಅಸ್ಥಿರಗೊಳಿಸುವ ಕೆಲಸವನ್ನು ಮಾಡುತ್ತಿದ್ದು ಇದನ್ನು ಖಂಡಿಸಲು ಸಾಂಕೇತಿಕವಾಗಿ ಪ್ರತಿಭಟನೆ ಮಾಡುತ್ತಿದ್ದೇವೆ. ವಿಧಾನಸಭೆ ಹಾಗೂ ವಿಧಾನ ಪರಿಷತ್ತಿನಲ್ಲಿಯೂ ಇದನ್ನು ನಾವು ಪ್ರಸ್ತಾಪಿಸಲಿದ್ದೇವೆ ಎಂದರು.

ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆಶಿ ನೇತೃತ್ವದಲ್ಲಿ ಪ್ರತಿಭಟನೆ ನಡೆಯುತ್ತಿದ್ದು ಸಚಿವರಾದ ಡಾ.ಜಿ.ಪರಮೇಶ್ವರ್, ಮುನಿಯಪ್ಪ, ಪ್ರಿಯಾಂಕ್ ಖರ್ಗೆ, ಹೆಚ್.ಕೆ.ಪಾಟೀಲ್, ಭೈರತಿ ಸುರೇಶ್, ಲಾಡ್, ಕೆ.ಎನ್.ರಾಜಣ್ಣ, ಕೃಷ್ಣಭೈರೇಗೌಡ, ಎಂ.ಬಿ.ಪಾಟೀಲ್, ವೆಂಕಟೇಶ್, ದಿನೇಶ್ ಗುಂಡೂರಾವ್, ಲಕ್ಷ್ಮೀ ಹೆಬ್ಬಾಳ್ಕರ್, ರಹೀಂ ಖಾನ್, ಎಂ.ಸಿ.ಸುಧಾಕರ್, ಶರಣಪ್ರಕಾಶ್ ಪಾಟೀಲ್ ಸೇರಿ ಹಲವರು ಭಾಗಿಯಾಗಿದ್ದಾರೆ. ಇಡಿ ಅಧಿಕಾರಿಗಳ ನಡೆ ಖಂಡಿಸಿ ಕೇಂದ್ರದ ವಿರುದ್ಧ ಘೋಷಣೆ ಕೂಗಿ ಕಾಂಗ್ರೆಸ್ ನಾಯಕರು ಆಕ್ರೋಶ ಹೊರ ಹಾಕಿದ್ದಾರೆ.

More articles

Latest article