ಬೆಂಗಳೂರು: ಸಾಮಾಜಿಕ ಜಾಲತಾಣಗಳಲ್ಲಿ (ಸೋಶಿಯಲ್ ಮೀಡಿಯಾ) ಸುಳ್ಳು ಸುದ್ದಿ ಮತ್ತು ತಪ್ಪು ಮಾಹಿತಿ ಹಂಚಿಕೊಂಡಿರುವುದು ಸಾಬೀತಾದರೆ ಗರಿಷ್ಠ 7 ವರ್ಷ ಜೈಲು ಶಿಕ್ಷೆ ಮತ್ತು ರೂ. 10 ಲಕ್ಷ ದಂಡ ವಿಧಿಸಲು ಅವಕಾಶ ನೀಡುವ ಕಾನೂನು ರೂಪಿಸಲು ರಾಜ್ಯ ಸರ್ಕಾರ ಮುಂದಾಗಿದೆ.
ಕರ್ನಾಟಕ ತಪ್ಪುಮಾಹಿತಿ ಮತ್ತು ಸುಳ್ಳು ಸುದ್ದಿ (ನಿಷೇಧ) ಮಸೂದೆ ಸಿದ್ಧವಾಗಿದ್ದು, ಗುರುವಾರ ನಡೆದ ಸಚಿವ ಸಂಪುಟ ಸಭೆಯ ಮುಂದೆ ಮಂಡಿಸಲಾಗಿತ್ತು. ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳಲಾಗುವ ಸುಳ್ಳು ಸುದ್ದಿಗಳಿಗೆ ಸಂಪೂರ್ಣ ಕಡಿವಾಣ ಹಾಕುವಂತಹ ಹಲವು ಅಧಿಕಾರಗಳನ್ನು ಈ ಮಸೂದೆಯು ರಾಜ್ಯ ಸರ್ಕಾರಕ್ಕೆ ನೀಡಲಿದೆ ಎಂದು ತಿಳಿದು ಬಂದಿದೆ.
ರಾಜ್ಯದ ಜನರಿಗೆ ತಲುಪುವಂತೆ ರಾಜ್ಯದೊಳಗಿರುವ ಮತ್ತು ಹೊರ ರಾಜ್ಯದ ವ್ಯಕ್ತಿಗಳು, ಸುಳ್ಳು ಸುದ್ದಿಗಳನ್ನು ಹಂಚಿಕೊಂಡರೆ ಅವರ ವಿರುದ್ಧ ಕ್ರಮ ತೆಗೆದುಕೊಳ್ಳಲು ಈ ಮಸೂದೆ ಅವಕಾಶ ಮಾಡಿಕೊಡಲಿದೆ. ಸಾರ್ವಜನಿಕ ಭದ್ರತೆ, ಸಾಮರಸ್ಯಕ್ಕೆ ಧಕ್ಕೆ ತರುವ, ಮುಕ್ತ ಮತ್ತು ಸ್ವತಂತ್ರ ರೀತಿಯಲ್ಲಿ ಚುನಾವಣೆ ನಡೆಸುವುದಕ್ಕೆ ಅಡ್ಡಿಪಡಿಸುವಂತಹ ಪೋಸ್ಟ್ ಮಾಡಿದವರಿಗೂ ಶಿಕ್ಷೆ ವಿಧಿಸಬಹುದಾಗಿದೆ ಎಂದು ಮಸೂದೆಯಲ್ಲಿ ಹೇಳಲಾಗಿದೆ.
ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ ನಿಯಂತ್ರಣ ಪ್ರಾಧಿಕಾರ ಸ್ಥಾಪಿಸಲು, ಕನ್ನಡ ಮತ್ತು ಸಂಸ್ಕೃತಿ ಸಚಿವರ ನೇತೃತ್ವದಲ್ಲಿ ಆರು ಸದಸ್ಯರ ಸಮಿತಿ ರಚಿಸಲು, ಸುಳ್ಳು ಸುದ್ದಿಗಳ ಪ್ರಕರಣ ವಿಚಾರಣೆಗೆ ವಿಶೇಷ ನ್ಯಾಯಾಲಯಗಳನ್ನು ಸ್ಥಾಪಿಸಲು ಮಸೂದೆ ಅವಕಾಶ ಮಾಡಿಕೊಡಲಿದೆ.