ಮೊದಲು ನೀರು ಕೊಟ್ಟು ಆಮೇಲೆ ಚುನಾವಣಾ ಪ್ರಚಾರಕ್ಕೆ ಬನ್ನಿ : ಕರವೇ ಟಿ.ಎ.ನಾರಾಯಣಗೌಡ ಆಗ್ರಹ

Most read

ಕಲ್ಯಾಣ ಕರ್ನಾಟಕ ಮತ್ತು ಕಿತ್ತೂರು ಕರ್ನಾಟಕ ಭಾಗಗಳಲ್ಲಿ ತೀವ್ರ ಬರಗಾಲದಿಂದ ಹನಿ ನೀರಿಗೂ ಜನರು ಪರದಾಡುತ್ತಿರುವಾಗ ರಾಜಕೀಯ ಪಕ್ಷಗಳು ಚುನಾವಣಾ ಪ್ರಚಾರದಲ್ಲಿ ತೊಡಗಿವೆ. ಮೊದಲು ಜನರಿಗೆ ನೀರು ಕೊಡಿ, ಆಮೇಲೆ ನಿಮ್ಮ ಪ್ರಚಾರ ಮಾಡಿಕೊಳ್ಳಿ. ಇಲ್ಲದೇ ಹೋದಲ್ಲಿ ಈ ಭಾಗದಲ್ಲಿ ತೀವ್ರ ಸ್ವರೂಪದ ಪ್ರತಿಭಟನೆ ಹಮ್ಮಿಕೊಳ್ಳಬೇಕಾಗುತ್ತದೆ ಎಂದು ಕರವೇ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣಗೌಡ ಎಚ್ಚರಿಕೆ ನೀಡಿದ್ದಾರೆ.

ಈ ಕುರಿತು ಪ್ರತಿಕಾ ಪ್ರಕಟಣೆ ಹೊರಡಿಸಿರುವ ಅವರು, ಕಲಬುರ್ಗಿ, ಯಾದಗಿರಿ, ಬೆಳಗಾವಿ, ವಿಜಯಪುರ, ಬಾಗಲಕೋಟೆ, ರಾಯಚೂರು ಸೇರಿದಂತೆ ಉತ್ತರ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಬರ ತಾಂಡವವಾಡುತ್ತಿದೆ. ನದಿ, ಕೆರೆ, ಹಳ್ಳ, ಬಾವಿಗಳು ಬತ್ತಿಹೋಗಿವೆ. ಜನರಿಗೆ ಕುಡಿಯಲು ನೀರಿಲ್ಲ, ಜಾನುವಾರುಗಳಿಗೆ ನೀರು, ಮೇವು ಇಲ್ಲ. ಇಂಥ ಸನ್ನಿವೇಶದಲ್ಲಿ ನಮ್ಮ ಜನಪ್ರತಿನಿಧಿಗಳು ಮೊದಲು ಜನರ ಕಣ್ಣೀರು ಒರೆಸುವ ಕೆಲಸ ಮಾಡಬೇಕು ಎಂದು ಆಗ್ರಹಿಸಿದ್ದಾರೆ.

ಬಚಾವತ್ ಆಯೋಗದ ತೀರ್ಪಿನ ಪ್ರಕಾರ ಮಹಾರಾಷ್ಟ್ರ ಸರ್ಕಾರ ರಾಜ್ಯದ ಪಾಲಿನ 15 ಟಿಎಂಸಿ ನೀರು ಕೊಟ್ಟಿಲ್ಲ. ಮಹಾರಾಷ್ಟ್ರದ ಜಲಾಶಯಗಳಲ್ಲಿ ನೀರಿದ್ದರೂ ಕೂಡ ನೀರು ಬಿಡುತ್ತಿಲ್ಲ, ಇಂಥ ಸಂದರ್ಭದಲ್ಲಿ ನಮ್ಮ ರಾಜ್ಯದ ಎಲ್ಲ ಪಕ್ಷಗಳ ನಾಯಕರೂ ಒಂದಾಗಿ ಮಹಾರಾಷ್ಟ್ರ ಸರ್ಕಾರದ ಮೇಲೆ ಒತ್ತಡ ಹೇರಿ, ನೀರು ಬಿಡುಗಡೆಯಾಗುವಂತೆ ನೋಡಬೇಕಿತ್ತು. ಆದರೆ ಆ ಕೆಲಸ ಆಗುತ್ತಿಲ್ಲ ಎಂದು ಕಿಡಿಕಾರಿದ್ದಾರೆ

ಮಹಾರಾಷ್ಟ್ರದ ಕೊಯ್ನಾ ಜಲಾಶಯದಿಂದ ಕೃಷ್ಣಾ ನದಿಗೆ 2 ಟಿಎಂಸಿ ಹಾಗು ಉಜ್ಜಿನಿ ಜಲಾಶಯದಿಂದ ಭೀಮಾ ನದಿಗೆ 1 ಟಿಎಂಸಿ ನೀರು ಬಿಡುವಂತೆ ಮುಖ್ಯಮಂತ್ರಿ ಸಿದ್ಧರಾಮಯ್ಯನವರು ಈಗಾಗಲೇ ಮಹಾರಾಷ್ಟ್ರ ಮುಖ್ಯಮಂತ್ರಿ ಏಕ್ ನಾಥ್ ಶಿಂಧೆಯವರಿಗೆ ಪತ್ರ ಬರೆದಿದ್ದಾರೆ. ಆದರೆ ಮಹಾರಾಷ್ಟ್ರ ಇದಕ್ಕೆ ಸ್ಪಂದಿಸುತ್ತಿಲ್ಲ.

ಈ ಜಿಲ್ಲೆಗಳನ್ನು ಪ್ರತಿನಿಧಿಸುವ ಸಂಸತ್ ಸದಸ್ಯರಿಗೆ ಬಾಯಿ ಇಲ್ಲದಂತಾಗಿದೆ. ಅವರೆಲ್ಲ ಈಗ ಲೋಕಸಭಾ ಚುನಾವಣೆಯ ತಯಾರಿಯಲ್ಲಿ ತೊಡಗಿದ್ದಾರೆ. ರಾಜಕೀಯ ಪಕ್ಷಗಳ ಉನ್ನತ ನಾಯಕರು ಈ ಭಾಗದಿಂದಲೇ ಚುನಾವಣಾ ಪ್ರಚಾರ ನಡೆಸುತ್ತಿದ್ದಾರೆ, ಆದರೆ ಜನರ ಕುಡಿಯುವ ನೀರಿನ ಬವಣೆಯ ಕುರಿತು ಚಕಾರ ಎತ್ತುತ್ತಿಲ್ಲ. ಇದನ್ನು ಸಹಿಸಿಕೊಂಡಿರಲು ಸಾಧ್ಯವಿಲ್ಲ ಎಂದಿದ್ದಾರೆ.

ಎಲ್ಲ ರಾಜಕೀಯ ಪಕ್ಷಗಳ ಮುಖಂಡರು ಒಂದಾಗಿ ಮೊದಲು ಈ ಭಾಗದ ಜನರ ಕುಡಿಯುವ ನೀರಿನ ಸಮಸ್ಯೆ ಬಗೆಹರಿಸಬೇಕು. ಮಹಾರಾಷ್ಟ್ರದಿಂದ ನಮಗೆ ಬರಬೇಕಾಗಿರುವ ನೀರು ಬರುವಂತೆ ನೋಡಿಕೊಳ್ಳಬೇಕು. ಇಲ್ಲವಾದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ರಾಜಕಾರಣಿಗಳು ಚುನಾವಣಾ ಪ್ರಚಾರಕ್ಕೆ ಬರದಂತೆ ತಡೆಯಬೇಕಾಗುತ್ತದೆ ಎಂದು ಕರೆ ನೀಡಿದ್ದಾರೆ.

More articles

Latest article