ಬೆಂಗಳೂರು: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ ಹೆದ್ದಾರಿಯ ಮಂಡ್ಯ ಸಮೀಪ ತೂಬಿನಕೆರೆ ಎಂಬಲ್ಲಿ ಸಂಭವಿಸಿದ ಭೀಕರ ಅಪಘಾತದಲ್ಲಿ ನಾಲ್ವರು ಮೃತಪಟ್ಟಿದ್ದಾರೆ. ಇಂದು ಮಧ್ಯಾಹ್ನ ಅತೀ ವೇಗವಾಗಿ ಬರುತ್ತಿದ್ದ ಐರಾವತ ಬಸ್ ಮುಂದೆ ಹೋಗುತ್ತಿದ್ದ ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಈ ಅಪಘಾತ ಸಂಭವಿಸಿದೆ. ಅಸು ನೀಗಿರುವ ನಾಲ್ವರು ಬೆಂಗಳೂರಿನ ಜೆಪಿ ನಗರದ ನಿವಾಸಿಗಳು ಎಂದು ತಿಳಿದು ಬಂದಿದೆ.
ಬೆಂಗಳೂರಿನಿಂದ ಪಿರಿಯಾಪಟ್ಟಣಕ್ಕೆ ಕಾರಿನಲ್ಲಿಈ ನಾಲ್ವರು ಹೋಗುತ್ತಿದ್ದರು. ತೂಬಿನಕೆರೆ ಬಳಿ ಸರ್ವಿಸ್ ರಸ್ತೆಗೆ ಕಾರನ್ನು ತಿರುಗಿಸುವಾಗ ಕಾರು ಚಲಾಯಿಸುತ್ತಿವರಿಗೆ ಗೊಂದಲ ಉಂಟಾಗಿದೆ. ಸರ್ವಿಸ್ ರಸ್ತೆಗೆ ಹೋಗಲು ಕಾರು ತಿರುಗಿಸಿ ಮತ್ತಡ ಹೆದ್ದಾರಿಗೆ ಕಾರನ್ನು ತಿರುಗಿಸಿದ್ದಾರೆ. ಆಗ ಹಿಂದಿನಿಂದ ವೇಗವಾಗಿ ಬರುತ್ತಿದ್ದ ಐರಾವತ ಬಸ್ ಡಿಕ್ಕಿ ಹೊಡೆದಿದೆ. ಇಂದು ಮಧ್ಯಾಹ್ನ 12.30 ರಲ್ಲಿ ಈ ಅಪಘಾತ ಸಂಭವಿಸಿದೆ.
ಡಿಕ್ಕಿ ಹೊಡೆದ ರಭಸಕ್ಕೆ ಕಾರು ನಜ್ಜುಗುಜ್ಜಾಗಿದ್ದು, ಪ್ರಯಾಣಿಕರು ಹೊರ ಬರಲಾಗದೆ ಮೃತಪಟ್ಟಿದ್ದಾರೆ. ಸುದ್ದಿ ತಿಳಿದು ಸ್ಥಳಕ್ಕೆ ದಾವಿಸಿದ ಮಂಡ್ಯ ಗ್ರಾಮಾಂತರ ಠಾಣೆ ಪೊಲೀಸರು ಪರಿಹಾರ ಕಾರ್ಯಾಚರಣೆ ಕೈಗೊಂಡರು.
ಒಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದು ಮೂವರು ಆಸ್ಪತ್ರೆಗೆ ಕರೆದೊಯ್ಯುತ್ತಿದ್ದಾಗ ಮಾರ್ಗಮಧ್ಯೆ ಕೊನೆಯುಸಿರು ಎಳೆದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಬಗ್ಗೆ ಮಂಡ್ಯ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ಪೊಲೀಸರು ಮುಂದಿನ ಕ್ರಮಕೈಗೊಂಡಿದ್ದಾರೆ.