ಬಿಜೆಪಿ ಸರ್ಕಾರದ ಕೋವಿಡ್‌ ಹಗರಣದ ತನಿಖೆ ಸಿಐಡಿ ಹೆಗಲಿಗೆ

Most read

ಬೆಂಗಳೂರು: ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದಿದೆ ಎನ್ನಲಾದ ಕೋವಿಡ್ ಹಗರಣದ ತನಿಖೆಯನ್ನು  ಸಿಐಡಿಗೆ ವಹಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಕೋವಿಡ್‌ ಹಗರಣ ಕುರಿತು ಎಫ್ಐಆರ್ ದಾಖಲಾದ ಎರಡು ತಿಂಗಳ ನಂತರ ಸಿಐಡಿ ತನಿಖೆಗೆ ಆದೇಶಿಸಲಾಗಿದೆ.

ಸಿಐಡಿ ಎಸ್‌ಪಿ ರಾಘವೇಂದ್ರ ಹೆಗಡೆ, ಮೂವರು ಡಿವೈಎಸ್‌ ಪಿ ಗಳನ್ನು ಒಳಗೊಂಡ ತಂಡ ಹಗರಣದ ತನಿಖೆ ನಡೆಸಲಿದೆ. ಕಳೆದ ವರ್ಷ ಡಿಸೆಂಬರ್ 13ರಂದು ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ವೈದ್ಯಕೀಯ ಶಿಕ್ಷಣ ಇಲಾಖೆ ನಿರ್ದೇಶಕ ಡಾ. ಪಿಜಿ ಗಿರೀಶ್, ಲೆಕ್ಕಪತ್ರ ಇಲಾಖೆ ಜಂಟಿ ನಿಯಂತ್ರಕ ಜೆಪಿ ರಘು ಮತ್ತು ಕೆಲವು ಚುನಾಯಿತ ಪ್ರತಿನಿಧಿಗಳು ಸೇರಿ ಇತರರ ವಿರುದ್ಧ ಎಫ್ಐಆರ್ ದಾಖಲಾಗಿತ್ತು.

ರಾಜ್ಯ ರಾಜಕಾರಣದಲ್ಲಿ ಕೋವಿಡ್ ಹಗರಣ ಭಾರಿ ಮಟ್ಟದಲ್ಲಿ ಸದ್ದು ಮಾಡಿತ್ತು.  ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಬಿಜೆಪಿ ಪ್ರತಿಭಟನೆಯನ್ನು ತೀವ್ರಗೊಳಿಸುತ್ತಿದ್ದಂತೆ ಕಾಂಗ್ರೆಸ್‌ ಸರ್ಕಾರ ಬಿಜೆಪಿ ಸರ್ಕಾರದ ಅವಧಿಯ ಕೋವಿಡ್‌ ಹಗರಣವನ್ನು ಪ್ರಸ್ತಾಪಿಸಿತ್ತು.  ಈ ನಿಟಿನಲ್ಲಿ ಕೋವಿಡ್ ಅಕ್ರಮದ ತನಿಖೆಗೆ ವಿಶೇಷ ತನಿಖಾ ತಂಡ ರಚಿಸುವ ಬಗ್ಗೆ ಸಚಿವ ಸಂಪುಟ ನಿರ್ಧಾರ ಕೈಗೊಂಡಿತ್ತು. ಆದರೆ ಹಗರಣದಲ್ಲಿ ಪ್ರಭಾವಿ ರಾಜಕಾರಣಿಗಳು ಹಾಗೂ ಐಎಎಸ್ ಅಧಿಕಾರಿಗಳ ಹೆಸರು ಪ್ರಸ್ತಾಪವಾಗಿರುವುದರಿಂದ ಎಸ್ಐಟಿ ನೇತೃತ್ವ ವಹಿಸಲು ಅನೇಕ ಐಪಿಎಸ್ ಅಧಿಕಾರಿಗಳು ಹಿಂದೇಟು ಹಾಕಿದ್ದರು. ಹೀಗಾಗಿ ಇದೀಗ ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸಿ ರಾಜ್ಯ ಸರ್ಕಾರ ಆದೇಶಿಸಿದೆ ಎಂದು ತಿಳಿದು ಬಂದಿದೆ.

ಕೋವಿಡ್ ಕಾಲದಲ್ಲಿ ವೈದ್ಯಕೀಯ ಶಿಕ್ಷಣ ಇಲಾಖೆಯ ಮೂಲಕ ಎನ್‌-95 ಮಾಸ್ಕ್‌ ಹಾಗೂ ಪಿಪಿಇ ಕಿಟ್‌ ಸೇರಿದಂತೆ ಇತರ ಉಪಕರಣಗಳ ಖರೀದಿಯಲ್ಲಿ 167 ಕೋಟಿ ರು ಅಕ್ರಮ ನಡೆದಿದೆ ಎಂದು ಆರೋಪಿಸಿ ವಿಧಾನಸೌಧ ಠಾಣೆಗೆ ಡಿ.13 ರಂದು ವೈದ್ಯಕೀಯ ಶಿಕ್ಷಣ ಇಲಾಖೆ ಮುಖ್ಯ ಲೆಕ್ಕಾಧಿಕಾರಿ ಡಾ.ಎಂ.ವಿಷ್ಣುಪ್ರಸಾದ್ ದೂರು ನೀಡಿದ್ದರು.

More articles

Latest article