ರಾಯಚೂರು: ಈ ವರ್ಷ ರಾಜ್ಯದಲ್ಲಿ ಬಿಸಿಲಿನ ತಾಪಮಾನ ಹೆಚ್ಚಾಗುವ ಸಾಧ್ಯತೆಗಳಿದ್ದು, ಮಧ್ಯಾಹ್ನ 12 ರಿಂದ 3 ರವರೆಗೆ ಹೊರಗೆ ಕೆಲಸ ಮಾಡಬಾರದು. ಮನೆ ಅಥವಾ ಕಚೇರಿಯಲ್ಲೇ ಇರಬೇಕು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸಲಹೆ ನೀಡಿದ್ದಾರೆ.
ರಾಯಚೂರಿನ ಮಾನ್ವಿಯಲ್ಲಿ ಮಾತನಾಡಿದ ಅವರು, ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳುವಂತೆ ಈಗಾಗಲೇ ಅಧಿಕಾರಿಗಳಿಗೆ ಸೂಚಿಸಿದ್ದೇವೆ. ಬಿಸಿಲು ಹೆಚ್ಚಾಗುತ್ತಿರುವುದರಿಂದ ಸರ್ಕಾರಿ ಕಚೇರಿಗಳ ಕೆಲಸದ ಸಮಯ ಬದಲಾವಣೆಯ ಬಗ್ಗೆ ಸರ್ಕಾರ ಮಟ್ಟದಲ್ಲಿ ತೀರ್ಮಾನ ಮಾಡಲಾಗುತ್ತದೆ. ಮಧ್ಯಾಹ್ನದ ವೇಳೆ ಕ್ಷೇತ್ರ ಪ್ರದಕ್ಷಿಣೆ ಮಾಡಬಾರದು. ಬದಲಾಗಿ ಮುಂಜಾನೆ ಇಲ್ಲವೇ ಸಾಯಂಕಾಲ ಮಾಡಬೇಕು. ಒಟ್ಟಾರೆ ಸಮಯ ಬದಲಾವಣೆ ಮಾಡಿಕೊಂಡರೆ ಒಳ್ಳೆಯದು ಎಂದರು.
ರಾಯಚೂರು ಜಿಲ್ಲೆ ಸೇರಿ ಈ ಭಾಗದಲ್ಲಿ 43 ರಿಂದ 44 ಡಿಗ್ರಿ ಸೆಲ್ಸಿಯಸ್ವರೆಗೆ ತಾಪಮಾನ ತಲುಪುತ್ತದೆ. ಮಧ್ಯಾಹ್ನ ಸಮಯದಲ್ಲಿ ಮನೆಯೊಳಗೆ ಅಥವಾ ಕಚೇರಿಯೊಳಗೆ ಇರುವಂತೆ ನೋಡಿಕೊಳ್ಳಲು ಸೂಚಿಸಲಾಗಿದೆ. ಶಾಲೆಗಳು, ಎಲ್ಲಾ ಸಂಸ್ಥೆಗಳು ಆ ಬಗ್ಗೆ ಗಮನ ಕೊಡಬೇಕು. ಆಹಾರದ ಬಗ್ಗೆಯೂ ಗಮನ ಕೊಡಬೇಕು. ಆಗಾಗ ನೀರು ಕುಡಿದರೆ ನಿರ್ಜಲೀಕರಣದಿಂದ ದೂರ ಇರಬಹುದು. ಬಿಸಿಲಿನ ತಾಪಮಾನ ಹೆಚ್ಚಳ ಹಿನ್ನೆಲೆ ಸರ್ಕಾರಿ ಆಸ್ಪತ್ರೆಗಳಲ್ಲಿ ಸ್ಪೆಷಲ್ ವಾರ್ಡ್ ಅಗತ್ಯ ಇಲ್ಲ. ನಮ್ಮಲ್ಲಿ ಎಲ್ಲಾ ಸೌಲಭ್ಯಗಳಿವೆ ಎಂದು ತಿಳಿಸಿದರು