ಸಿದ್ಧರಾಮಯ್ಯ ಬೆನ್ನಿಗೆ ನಿಂತ ಹೈಕಮಾಂಡ್: ನ್ಯಾಯಾಲಯ, ಜನತಾ ನ್ಯಾಯಾಲಯದಲ್ಲಿ ಹೋರಾಡುತ್ತೇವೆ

Most read

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಬದಲಿ ನಿವೇಶನ ಹಂಚಿಕೆ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಕರ್ನಾಟಕದ ರಾಜ್ಯಪಾಲ ಥಾವರಚಂದ ಗೆಹ್ಲೋಟ್ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ ಬೆನ್ನಲ್ಲೇ ಕಾಂಗ್ರೆಸ್ ಹೈಕಮಾಂಡ್ ನಾಯಕರು ಸಿದ್ದರಾಮಯ್ಯ ಬೆಂಬಲಕ್ಕೆ ನಿಂತಿದ್ದಾರೆ.

ಈ ಕುರಿತು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ರಣದೀಪ್‌ ಸಿಂಗ್‌ ಸುರ್ಜೇವಾಲ, ಕಾಂಗ್ರೆಸ್‌ನ ಐದು ಗ್ಯಾರಂಟಿಗಳನ್ನು ರದ್ದುಗೊಳಿಸುವ ಸಲುವಾಗಿ ಬಿಜೆಪಿಯಿಂದ ಕರ್ನಾಟಕದ ಜನರ ಮೇಲೆ  ದಾಳಿ ಮಾಡುತ್ತಲೇ ಇದೆ.  ಬಡವರು, ಹಿಂದುಳಿದವರು, ಎಸ್‌ಸಿ/ಎಸ್‌ಟಿ ಮತ್ತು ಹಿಂದುಳಿದ ವರ್ಗಗಳ ವಿರುದ್ಧ ಬಿಜೆಪಿ ಮತ್ತು ಮೋದಿ ಸರ್ಕಾರದಿಂದ ಷಡ್ಯಂತ್ರ ಮುಂದುವರೆದಿದೆ ಎಂದು ಹೇಳಿದ್ದಾರೆ.

ಕರ್ನಾಟಕ ಮತ್ತು ಅದರ ಚುನಾಯಿತ ಸರ್ಕಾರದ ವಿರುದ್ಧ ದೆಹಲಿಯಲ್ಲಿ ಪ್ರಧಾನ ಮಂತ್ರಿ ಕಚೇರಿ ಮತ್ತು ಗೃಹ ಸಚಿವಾಲಯ ರಾಜಕೀಯ ಷಡ್ಯಂತ್ರ ಮಾಡಿ ‘ಕರ್ನಾಟಕದ ಕೈಗೊಂಬೆ ರಾಜ್ಯಪಾಲರ’ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಮಂಜೂರು ಮಾಡಲು ಮುಂದಾಗಿದ್ದಾರೆ. ತಮ್ಮ ರಾಜಕೀಯ ಯಜಮಾನರ ತಾಳಕ್ಕೆ ತಕ್ಕಂತೆ ರಾಜ್ಯಪಾಲರು ಕುಣಿದಾಡಿದ್ದಾರೆ ಎಂದು ಆರೋಪಿಸಿದ್ದಾರೆ.

ರಾಜ್ಯಪಾಲರ ಈ ನಡೆ ನಾಚಿಕೆಗೇಡಿನ ನಿರ್ಧಾರವಾಗಿದ್ದು, ಅಸಾಂವಿಧಾನಿಕ ಕೃತ್ಯವಾಗಿದೆ, ಬಿಜೆಪಿಯ ಪಿತೂರಿಗೆ ದಾರಿಮಾಡಿಕೊಡುವ ಮೂಲಕ ಕಾನೂನು ಮತ್ತು ಸಂವಿಧಾನವನ್ನು ನೆಲಸಮ ಮಾಡಲು ಮುಂದಾಗಿದ್ದಾರೆ ಎಂದು ಆರೋಪಿದ್ದಾರೆ.

ಕಾಂಗ್ರೆಸ್ ಕೋಟ್ಯಂತರ ಕನ್ನಡಿಗರ ಆಶೀರ್ವಾದ ಪಡೆದು 2023ರ ವಿಧಾನಸಭೆ ಚುನಾವಣೆಯಲ್ಲಿ ಜನಾದೇಶವನ್ನು ಗಳಿಸಿತು. ಪಿಎಂ ಮೋದಿ ಮತ್ತು ರಾಜ್ಯದಲ್ಲಿ ಬಿಜೆಪಿ ನಾಯಕರು ತಮ್ಮ ಸೋಲನ್ನು ಅರಗಿಸಿಕೊಳ್ಳಲು ಸಾಧ್ಯವಾಗದೇ, ಕಾಂಗ್ರೆಸ್ ಸರ್ಕಾರವನ್ನು ಕೆಡವಲು ತಮ್ಮ ಬತ್ತಳಿಕೆಯಲ್ಲಿರುವ ಎಲ್ಲಾ ತಂತ್ರಗಳನ್ನು ಬಳಸುತ್ತಿದ್ದಾರೆ. ಪ್ರತಿಯೊಂದು ಪ್ರಯತ್ನವೂ ವಿಫಲವಾಗಿದ್ದು, ಈಗ ಅವರು ತಮ್ಮ ‘ಕೈಗೊಂಬೆ ಗವರ್ನರ್’ ಅನ್ನು ಬಳಸಿಕೊಂಡು ಸರ್ಕಾರವನ್ನು ಕೆಡವಲು  ಪಿತೂರಿಯನ್ನು ರೂಪಿಸುತ್ತಿದ್ದಾರೆ. ಚುನಾಯಿತ ಸರ್ಕಾರ ಮತ್ತು ಮುಖ್ಯಮಂತ್ರಿಯ ಮೇಲೆ ದಾಳಿ ಮಾಡಲು ರಾಜ್ಯಪಾಲರು ಈಗ ದೂರುದಾರರೊಬ್ಬರೊಂದಿಗೆ ಶಾಮೀಲಾಗಿದ್ದಾರೆ. ಈ ಪ್ರಕ್ರಿಯೆಯಲ್ಲಿ ರಾಜ್ಯಪಾಲರು ತಮ್ಮದೇ ಆದ ಸಾಂವಿಧಾನಿಕ ಸ್ಥಾನಕ್ಕೆ ಅಪಖ್ಯಾತಿ ತಂದಿದ್ದಾರೆ ಎಂದು ದೂರಿದ್ದಾರೆ.

ಹಿಂದುಳಿದ ವರ್ಗದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮೇಲೆ ಅಪವಾದ ಹೊರೆಸಿ ಅವರನ್ನು ಸಿಎಂ ಸ್ಥಾನದಿಂದ ಇಳಿಸಿ ಸರ್ಕಾರವನ್ನು ಕೆಡವಲು ಕೇಂದ್ರ ಹಾಗೂ ರಾಜ್ಯಪಾಲರು ಉನ್ನಾರ ನಡೆಸಿದ್ದಾರೆ. ಇಂತಹ ಕಪೋಲಕಲ್ಪಿತ ಪಿತೂರಿಗಳು ಜನತಾ ನ್ಯಾಯಾಲಯದಲ್ಲಿ ಎಂದಿಗೂ ಯಶಸ್ವಿಯಾಗಿಲ್ಲ. ಕಾಂಗ್ರೆಸ್ ಗ್ಯಾರಂಟಿಗಳನ್ನು ನಿಲ್ಲಿಸಲು ಬಿಜೆಪಿ ತನ್ನ ದುಷ್ಟ ಪ್ರಯತ್ನದ ವಿರುದ್ಧ ಕಾಂಗ್ರೆಸ್ ಪಕ್ಷ ಮತ್ತು ಅದರ ಸರ್ಕಾರ ಎಂದಿಗೂ ಹೋರಾಡುತ್ತದೆ. ನಾವು ಕಾನೂನಾತ್ಮಕವಾಗಿ ಕರ್ನಾಟಕ ಮತ್ತು ದೇಶದ ಜನತಾ ನ್ಯಾಯಾಲಯದಲ್ಲಿ ಹೋರಾಡುತ್ತೇವೆ. ಸತ್ಯಕ್ಕೆ ಜಯ ಸಿಗುತ್ತದೆ. ಸತ್ಯಮೇವ ಜಯತೇ! ಎಂದು ಸಿದ್ದರಾಮಯ್ಯ ಅವರ ಬೆಂಬಲಕ್ಕೆ ನಿಂತಿದ್ದಾರೆ.

More articles

Latest article