Saturday, July 27, 2024

ನಾರಾಯಣಗೌಡರ ಬಿಡುಗಡೆಗೆ ʻನಮ್ಮ ಮೆಟ್ರೋ ಹಿಂದಿ ಹೇರಿಕೆ ಹೋರಾಟʼ ಅಡ್ಡಿ

Most read

ಕನ್ನಡದಲ್ಲಿ ನಾಮಫಲಕ ಅಭಿಯಾನ ಕೈಗೊಂಡು, ಬೆಂಗಳೂರಿನಲ್ಲಿ ತೀವ್ರ ಸ್ವರೂಪದ ಪ್ರತಿಭಟನೆ ನಡೆಸಿದ ಕರ್ನಾಟಕ ರಕ್ಷಣಾ ವೇದಿಕೆ‌ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣಗೌಡ ಅವರಿಗೆ ಹಾಗು ಇತರ ಮೂವತ್ತು ಕರವೇ ಮುಖಂಡರಿಗೆ ದೇವನಹಳ್ಳಿ ಐದನೇ ಹೆಚ್ಚುವರಿ ಸೆಷನ್ಸ್ ನ್ಯಾಯಾಲಯ ಶನಿವಾರವೇ ಜಾಮೀನು ನೀಡಿದೆ, ಎಲ್ಲ ಮೂವತ್ತು ಮಂದಿ ಇಂದು ಸಂಜೆಯೊಳಗೆ ಬಿಡುಗಡೆಯಾಗಲಿದ್ದರೂ ನಾರಾಯಣಗೌಡರ ಬಿಡುಗಡೆ ಸಾಧ್ಯತೆ ಕ್ಷೀಣಿಸುತ್ತಿದೆ.

ಟಿ.ಎ.ನಾರಾಯಣಗೌಡರ ಬಿಡುಗಡೆಗೆ 2017ರಲ್ಲಿ ನಡೆದ ನಮ್ಮ ಮೆಟ್ರೋ ಹಿಂದಿ ಹೇರಿಕೆ ಹೋರಾಟ ಅಡ್ಡಿಯಾಗಿದೆ. ವಿಶೇಷವೆಂದರೆ ಅದೂ ಕೂಡ ನಾಮಫಲಕಕ್ಕೆ ಸಂಬಂಧಿಸಿದ ಹೋರಾಟವೇ ಆಗಿದೆ.  2017ರಲ್ಲಿ ಬೆಂಗಳೂರಿನ ನಮ್ಮ ಮೆಟ್ರೋದಲ್ಲಿ ಹಿಂದಿ ಭಾಷೆಯನ್ನು ತುರುಕಿರುವುದನ್ನು ಖಂಡಿಸಿ ಕರ್ನಾಟಕ ರಕ್ಷಣಾ ವೇದಿಕೆ ಸತತ ಚಳವಳಿ ಸಂಘಟಿಸಿತ್ತು. ಶಾಂತಿಯುತ ಹೋರಾಟಕ್ಕೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಕಿವಿಗೊಡದ ಹಿನ್ನೆಲೆಯಲ್ಲಿ 2017ರ ಜೂನ್‌ 20ರಂದು ಆಗ ಅಸ್ತಿತ್ವದಲ್ಲಿ ಇದ್ದ ಸುಮಾರು 24 ಮೆಟ್ರೋ ನಿಲ್ದಾಣಗಳಿಗೆ ಬೆಳಗಿನ ಜಾವ 4ರಿಂದ 5 ಗಂಟೆಯವರೆಗೆ ನುಗ್ಗಿದ್ದ ಕರವೇ ಕಾರ್ಯಕರ್ತರು ಹಿಂದಿ ನಾಮಫಲಕಗಳಿಗೆ ಮಸಿ ಬಳಿದಿದ್ದರು. ಸುಮಾರು 24 ಕರವೇ ಮುಖಂಡರ ತಂಡಗಳು ಏಕಕಾಲಕ್ಕೆ ಈ ದಾಳಿ ಸಂಘಟಿಸಿದ್ದವು. ಈ ಘಟನೆ ರಾಷ್ಟ್ರಮಟ್ಟದಲ್ಲಿ ದೊಡ್ಡ ಸುದ್ದಿಯಾಗಿತ್ತು.

ಈ ಚಳವಳಿಯ ನಂತರ ಎಚ್ಚೆತ್ತುಕೊಂಡ ಆಗಿನ ಮುಖ್ಯಮಂತ್ರಿ ಸಿದ್ಧರಾಮಯ್ಯನವರು ನಮ್ಮ ಮೆಟ್ರೋ ರಾಜ್ಯ ಸರ್ಕಾರದ ಯೋಜನೆಯಾಗಿದ್ದು, ಇದರಲ್ಲಿ ಹಿಂದಿ ಬಳಕೆಯ ಅವಶ್ಯಕತೆ ಇಲ್ಲ. ಹೀಗಾಗಿ ಹಿಂದಿಯನ್ನು ತೆಗೆದುಹಾಕುವುದಾಗಿ ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿದ್ದರು. ನಂತರ ನಮ್ಮ ಮೆಟ್ರೋದಲ್ಲಿ ಇದ್ದ ಹಿಂದಿ ಅಕ್ಷರಗಳು ಮರೆಯಾಗಿದ್ದವು.

ನಮ್ಮ ಮೆಟ್ರೋದಲ್ಲಿ ಹಿಂದಿ ಹೇರಿಕೆ ವಿರೋಧಿಸಿದ ಕರವೇ ಮುಖಂಡರ ಮೇಲೆ ಹಲವು ಠಾಣೆಗಳಲ್ಲಿ ಮೊಕದ್ದಮೆಗಳು ದಾಖಲಾಗಿದ್ದವು. ಟಿ.ಎ.ನಾರಾಯಣಗೌಡರು ಖುದ್ದಾಗಿ ಭಾಗವಹಿಸದೇ ಇದ್ದರೂ ಕುಮಾರಸ್ವಾಮಿ ಲೇಔಟ್‌ ಠಾಣೆಯಲ್ಲಿ ದಾಖಲಾದ ಪ್ರಕರಣವೊಂದರಲ್ಲಿ ಅವರನ್ನೂ ಸಹ ಆರೋಪಿಯನ್ನಾಗಿ ಮಾಡಲಾಗಿತ್ತು.

ಇದೀಗ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯಕ್ಕೆ ಹಾಜರಾಗದ ಕಾರಣಕ್ಕಾಗಿ ಟಿ.ಎ.ನಾರಾಯಣಗೌಡರ ವಿರುದ್ಧ ವಾರಂಟ್‌ ಹೊರಡಿಸಲಾಗಿದ್ದು, ಈಗ ನಾಮಫಲಕ ಅಭಿಯಾನ ಸಂಬಂಧ ಜೈಲಿನಲ್ಲಿರುವ ಗೌಡರ ಬಿಡುಗಡೆಗೆ ಅಡ್ಡಿಯಾಗಿದೆ. ಕುಮಾರಸ್ವಾಮಿ ಲೇ ಔಟ್‌ ಪೊಲೀಸ್‌ ಠಾಣೆ ಸಿಬ್ಬಂದಿ ಶನಿವಾರದಿಂದಲೇ ಗೌಡರ ಬಿಡುಗಡೆಗೆ ಕಾಯುತ್ತಿದ್ದು, ವಾರಂಟ್‌ ನೀಡಿ, ನ್ಯಾಯಾಲಯಕ್ಕೆ ಹಾಜರುಪಡಿಸುವ ಸಾಧ್ಯತೆ ಇದೆ.  ಒಂದು ವೇಳೆ ನ್ಯಾಯಾಲಯದ ಸಮಯದ ಒಳಗೆ ಅವರನ್ನು ಹಾಜರುಪಡಿಸಿದರೆ ಇಂದೇ ಜಾಮೀನು ದೊರಕುವ ಸಂಭವವಿದೆ. ಒಂದು ವೇಳೆ ನ್ಯಾಯಾಲಯದ ಸಮಯ ಮೀರಿದರೆ, ಪೊಲೀಸರು ನ್ಯಾಯಾಧೀಶರ ನಿವಾಸಕ್ಕೆ ಕರೆದೊಯ್ದು ಹಾಜರುಪಡಿಸಲಿದ್ದಾರೆ. ಅಲ್ಲಿ ಪಬ್ಲಿಕ್‌ ಪ್ರಾಸಿಕ್ಯೂಟರ್‌ ಇಲ್ಲದೇ ಇರುವ ಕಾರಣಕ್ಕೆ ಜಾಮೀನು ಇಂದೇ ಸಿಗುವ ಸಾಧ್ಯತೆ ಕಡಿಮೆಯಾಗಲಿದೆ.

ಶನಿವಾರವೇ ಎಲ್ಲ ಮುಖಂಡರು ಬಿಡುಗಡೆಯಾಗಬೇಕಿದ್ದರೂ, ಶೂರಿಟಿ ಇತ್ಯಾದಿ ಕಾನೂನು ಪ್ರಕ್ರಿಯೆಗಳು ಮುಗಿಯದ ಕಾರಣ ಸೋಮವಾರ (ಇಂದು) ಬಿಡುಗಡೆಯಾಗಲಿದ್ದಾರೆ ಎಂದು ಕರವೇ ಪರ ವಕೀಲರಾದ ಕುಮಾರ್ ತಿಳಿಸಿದ್ದರು.

ಹಿಂದೆ ಬಿ.ಎಸ್.ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿದ್ದಾಗ ತಿರುವಳ್ಳುವರ್ ಪ್ರತಿಮೆ ಅನಾವರಣದ ಸಂದರ್ಭದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣಗೌಡ ಸೇರಿದಂತೆ ಐನೂರಕ್ಕೂ ಹೆಚ್ಚು ಕರವೇ ಕಾರ್ಯಕರ್ತರನ್ನು ಒಂದು ತಿಂಗಳಿಗೂ ಹೆಚ್ಚು ಕಾಲ ಬಂಧಿಸಿಡಲಾಗಿತ್ತು. ಎಲ್ಲರಿಗೂ ಜಾಮೀನು ಮಂಜೂರಾದರೂ ನಾರಾಯಣಗೌಡರನ್ನು ಒಂದಾದ ಮೇಲೊಂದರಂತೆ ಬಾಡಿ ವಾರಂಟ್ ತಂದು ಮತ್ತೆ ಮತ್ತೆ ಬಂಧಿಸಲಾಗಿತ್ತು. ಈಗಲೂ ಸಹ ಬೆಂಗಳೂರು ಪೊಲೀಸರು ಅದೇ ರೀತಿ ಮಾಡುವರೇ ಎಂಬ ಪ್ರಶ್ನೆ ಎದ್ದಿದೆ‌.

ಇಂದು ಮಧ್ಯಾಹ್ನದ ನಂತರ ಪರಪ್ಪನ ಅಗ್ರಹಾರ ಕಾರಾಗೃಹದ ಬಳಿ ನೂರಾರು ಕರವೇ ಕಾರ್ಯಕರ್ತರು ತಮ್ಮ ನಾಯಕನನ್ನು ಸ್ವಾಗತಿಸುವ ನಿಟ್ಟಿನಲ್ಲಿ ನೆರೆಯುವ ಸಾಧ್ಯತೆ ಇದೆ. ಈಗಾಗಲೇ 144ನೇ ಸೆಕ್ಷನ್ ಅನ್ವಯ ನಿಷೇಧಾಜ್ಞೆ ಜಾರಿಯಲ್ಲಿರುವುದರಿಂದ ಪೊಲೀಸರು ಮತ್ತು ಕರವೇ ಕಾರ್ಯಕರ್ತರ ನಡುವೆ ಮತ್ತೊಂದು ಹಂತದ ಸಂಘರ್ಷ ನಡೆಯುವ ಸಾಧ್ಯತೆ ಇದೆ.

ಡಿಸೆಂಬರ್ 27ರಂದು ಕರ್ನಾಟಕ ರಕ್ಷಣಾ ವೇದಿಕೆಯ ಹತ್ತು ಸಾವಿರಕ್ಕೂ ಹೆಚ್ಚು ಕಾರ್ಯಕರ್ತರು ಬೆಂಗಳೂರಿನ ಹಲವಾರು ಭಾಗಗಳಲ್ಲಿ ನಡೆಸಿದ ಕನ್ನಡ ನಾಮಫಲಕ ಅಭಿಯಾನದ ಸಂದರ್ಭದಲ್ಲಿ ಕನ್ನಡವಿಲ್ಲದ ಸಾವಿರಾರು ನಾಮಫಲಕಗಳನ್ನು, ಜಾಹೀರಾತು ಫಲಕಗಳನ್ನು ಕಿತ್ತೆಸೆದಿದ್ದರು. ಘಟನೆಯ ನಂತರ ರಾಜ್ಯ ಸರ್ಕಾರ ರಾಜ್ಯದ ಎಲ್ಲ ಉದ್ಯಮ, ಅಂಗಡಿ ಮುಂಗಟ್ಟುಗಳ ಮುಂದೆ ಶೇ.60 ರಷ್ಟು ಕನ್ನಡದ ನಾಮಫಲಕಗಳು ಇರಬೇಕು ಮತ್ತು ಕನ್ನಡವೇ ಮೊದಲಿರಬೇಕು ಎಂಬ ಸುಗ್ರೀವಾಜ್ಞೆ ಹೊರಡಿಸಿತ್ತು.

ಕರವೇ ಮುಖಂಡರು ಕಾರ್ಯಕರ್ತರ ಮೇಲೆ ಚಿಕ್ಕಜಾಲ, ಕಬ್ಬನ್ ಪಾರ್ಕ್, ಆಡುಗೋಡಿ, ಕಾಟನ್ ಪೇಟೆ ಇತ್ಯಾದಿ ಪೊಲೀಸ್ ಠಾಣೆಗಳಲ್ಲಿ ಹತ್ತಕ್ಕೂ ಹೆಚ್ಚು ಪ್ರಕರಣಗಳನ್ನು ದಾಖಲಿಸಲಾಗಿದೆ.

ಚಿಕ್ಕಜಾಲ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಕರವೇ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣಗೌಡರೂ ಸೇರಿದಂತೆ ಹಲವರ ಮೇಲೆ ದಾಖಲಿಸಲಾಗಿದ್ದ ಪ್ರಕರಣ ಸಂಬಂಧ ದೇವನಹಳ್ಳಿ ಐದನೇ ಹೆಚ್ಚುವರಿ ಸೆಷನ್ಸ್ ನ್ಯಾಯಾಲಯ ಹದಿನಾಲ್ಕು ದಿನಗಳ ನ್ಯಾಯಾಂಗ ಬಂಧನ ವಿಧಿಸಿತ್ತು. ಈ ಸಂಬಂಧ ಜಾಮೀನು ಕೋರಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಪುರಸ್ಕರಿಸಿದ ನ್ಯಾಯಾಲಯ ಕಳೆದ ಶನಿವಾರ ಜಾಮೀನು ಮಂಜೂರು ಮಾಡಿತ್ತು.

.

More articles

Latest article