ಗ್ಯಾರಂಟಿ ಯೋಜನೆ ಜಾರಿಯಲ್ಲಿ ಶೇ.98ರಷ್ಟು ಯಶಸ್ಸು: ಹೆಚ್.ಎಂ.ರೇವಣ್ಣ

Most read

ಕಾಂಗ್ರೆಸ್ ಸರ್ಕಾರದ 5 ಗ್ಯಾರಂಟಿ ಯೋಜನೆ ಜಾರಿಯಲ್ಲಿ ಶೇ.98ರಷ್ಟು ಯಶಸ್ಸು ಸಾಧಿಸಿದ್ದೇವೆಂದು ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿಯ ರಾಜ್ಯಾಧ್ಯಕ್ಷ ಹೆಚ್.ಎಂ.ರೇವಣ್ಣ ಅವರು ಮಂಗಳವಾರ ಹೇಳಿದರು.

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ 28 ವಿಧಾನಸಭಾ ಕ್ಷೇತ್ರಗಳಲ್ಲಿ ರಾಜ್ಯ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳ ಪರಿಶೀಲನಾ ಸಭೆ ನಡೆಸಿದ ಬಳಿಕ ರೇವಣ್ಣ ಅವರು ಮಾತನಾಡಿದರು.

ಮಹಿಳೆಯರಿಗೆ ಸರ್ಕಾರಿ ಬಸ್‌ಗಳಲ್ಲಿ ಉಚಿತ ಪ್ರಯಾಣ, ಬಡವರಿಗೆ 200 ಯೂನಿಟ್‌ವರೆಗೆ ಉಚಿತ ವಿದ್ಯುತ್, ಬಿಪಿಎಲ್ ಕುಟುಂಬಕ್ಕೆ 10 ಕೆಜಿ ಅಕ್ಕಿ ಮತ್ತು ಪಡಿತರ ಕೊರತೆಯಾದರೆ ನಗದು ವಿತರಣೆ, ಕುಟುಂಬದ ಮಹಿಳೆಗೆ 2000 ರೂ. ಮತ್ತು ಯುವ ನಿಧಿ ಯೋಜನೆಯಡಿಯಲ್ಲಿ ವಿದ್ಯಾರ್ಥಿ ವೇತನ (ಪದವೀಧರರಿಗೆ ನಿರ್ದಿಷ್ಟ ಅವಧಿಗೆ ಉದ್ಯೋಗ ಸಿಗುವವರೆಗೆ) ನೀಡುವ 5 ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತರಲಾಗಿದೆ. ಕೆಲವು ಪ್ರಕರಣಗಳಲ್ಲಿ ತಾಂತ್ರಿಕ ದೋಷದಿಂದ ಮಾತ್ರ ಸವಲತ್ತುಗಳನ್ನು ನೀಡಲು ಸಾಧ್ಯವಾಗುತ್ತಿಲ್ಲ ಎಂದು ಹೇಳಿದರು.

ಬೆಂಗಳೂರಿನ 28 ವಿಧಾನಸಭಾ ಕ್ಷೇತ್ರಗಳಲ್ಲಿ ಗ್ಯಾರಂಟಿ ಯೋಜನೆಗಳ ಪ್ರಯೋಜನವನ್ನು ಎಲ್ಲಾ ಜನರು ಪಡೆಯುತ್ತಿದ್ದಾರೆಂದು ತಿಳಿಸಿದರು, ಸಭೆಯಲ್ಲಿ ಎಲ್ಲ ಸಮಿತಿಗಳ ಅಧ್ಯಕ್ಷರಿಗೂ ಯಾವುದೇ ದೋಷವಿಲ್ಲದೆ ಗ್ಯಾರಂಟಿ ಯೋಜನೆಗಳು ಜನರ ತಲುಪುವಂತೆ ನೋಡಿಕೊಳ್ಳುವಂತೆ ಸೂಚಿಸಿದರು.

ಜಾತಿ ಗಣತಿ ವರದಿ ಜಾರಿ ಕುರಿತು ಪ್ರತಿಕ್ರಿಯಿಸಿದ ರೇವಣ್ಣ, ರಾಜ್ಯದಲ್ಲಿ ಕಾರ್ಯಕ್ರಮ ರೂಪಿಸಲು ಜನರ ಸ್ಥಿತಿಗತಿ ಅರಿಯಬೇಕು. ಇದು ಬಹಳ ದಿನಗಳಿಂದ ಚಿಂತನೆಯಾಗಿತ್ತು. ಸುಪ್ರೀಂ ಕೋರ್ಟ್ ಕೂಡ ಸಮೀಕ್ಷೆಗೆ ಆದೇಶಿಸಿದೆ. 55 ಪ್ರಶ್ನೆಗಳನ್ನು ಪರಿಗಣಿಸಿ ಈ ವರದಿಯನ್ನು ಸಿದ್ಧಪಡಿಸಲಾಗಿದೆ. ಸಿಎಂ ಸಿದ್ದರಾಮಯ್ಯ ಅವರು ಬಹಳ ಶ್ರಮವಹಿಸಿ ಇದನ್ನು ಮಾಡಿದ್ದಾರೆ. ರಾಹುಲ್ ಗಾಂಧಿ ವರದಿಯನ್ನು ಜಾರಿಗೊಳಿಸಬೇಕು ಎಂದು ಹೇಳಿದ್ದರು. ನಾವು ನಮ್ಮ ಚುನಾವಣಾ ಪ್ರಣಾಳಿಕೆಯಲ್ಲೂ ಇದನ್ನು ಉಲ್ಲೇಖಿಸಿದ್ದೇವೆ. ಇದು ರಾಜ್ಯದ ಜನರ ಶೈಕ್ಷಣಿಕ, ಸಾಮಾಜಿಕ ಮತ್ತು ಆರ್ಥಿಕ ಸ್ಥಿತಿಯನ್ನು ತಿಳಿದುಕೊಳ್ಳುವ ಪ್ರಯತ್ನವಾಗಿದೆ ಎಂದು ಹೇಳಿದರು.

ನಾವು ಯಾವುದೇ ಜಾತಿ, ಸಮುದಾಯವನ್ನು ಕಡೆಗಣಿಸಿಲ್ಲ, ಬಿಜೆಪಿಯವರು ಆರ್ಥಿಕವಾಗಿ ದುರ್ಬಲ ವರ್ಗದವರಿಗೆ ಶೇ.10ರಷ್ಟು ಮೀಸಲಾತಿ ತಂದಿದ್ದಾರೆ. ಇದರಿಂದ ಒಟ್ಟಾರೆ ಮೀಸಲಾತಿಯನ್ನು ಶೇ.60ಕ್ಕೆ ಹೆಚ್ಚಿಸಿದ್ದಾರೆ. ಇದರಿಂದ ರಾಜ್ಯಕ್ಕೆ ಮತ್ತು ಜನರಿಗೆ ಏನು ಪ್ರಯೋಜನ? ವರದಿ ಜಾರಿಗೆ ತರಲು ಈ ಹಿಂದಿನಿಂದಲೂ ಚರ್ಚೆ ನಡೆಯುತ್ತಿದೆ. ಇದೀಗ ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಚರ್ಚೆ, ನಡೆಸಿ ವರದಿಯನ್ನು ಜಾರಿಗೆ ತರಲಾಗುವುದು ಎಂದು ತಿಳಿಸಿದರು.

More articles

Latest article