ಬೆಂಗಳೂರು: ಸರಕು ಮತ್ತು ಸೇವಾ ತೆರಿಗೆ (ಜಿಎಸ್ ಟಿ)ಯ ಪ್ರಮಾಣವನ್ನು ಬರೋಬ್ಬರಿ 8 ವರ್ಷಗಳ ನಂತರ ಇಳಿಕೆ ಮಾಡಿ ಇದೀಗ ದೊಡ್ಡ ಸಾಧನೆ ಮಾಡಿರುವ ಹಾಗೆ ಬಿಂಬಿಸಿಕೊಳ್ಳುತ್ತಿರುವ ಪ್ರಧಾನಿ ನರೇಂದ್ರ ಮೋದಿ ಅವರನ್ನು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ತರಾಟೆಗೆ ತೆಗೆದುಕೊಂಡಿದ್ದಾರೆ.
ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಬಿಜೆಪಿ ನೇತೃತ್ವದ ಎನ್ ಡಿಎ ಸರ್ಕಾರವನ್ನು ಅವರು ತರಾಟೆಗೆ ತೆಗೆದುಕೊಂಡಿದ್ದಾರೆ.
ಗಬ್ಬರ್ ಸಿಂಗ್ ದರೋಡೆಯ ಪ್ರಮಾಣವನ್ನು ಕಡಿಮೆ ಮಾಡಿದ್ದಾನೆ, ಇದಕ್ಕಾಗಿ ಎಲ್ಲರೂ ಉತ್ಸವ ಆಚರಿಸಬೇಕು. ಈ ಗಬ್ಬರ್ ಸಿಂಗ್ 8 ವರ್ಷ ಮಾಡಿದ ಪೂರ್ಣ ಪ್ರಮಾಣದ ಲೂಟಿಯನ್ನು ಎಲ್ಲರೂ ಮರೆತುಬಿಡಬೇಕು! ಕೇಂದ್ರ ಸರ್ಕಾರದ ವರಸೆ ಇದು! ಎಂದು ಟೀಕಿಸಿದ್ದಾರೆ.
ಈ ದೇಶದ ಜನರನ್ನು ಹೇಗೆ ಬೇಕಾದರೂ ಮರಳು ಮಾಡಬಹುದಾದಷ್ಟು ಮೂರ್ಖರು ಎಂದು ಭ್ರಮಿಸಿದೆ ಬಿಜೆಪಿ. ಆದರೆ ಜನರು ಮೂರ್ಖರಲ್ಲ. ಈಗ “GST ಉಳಿತಾಯ ಉತ್ಸವ“ ಮಾಡಬೇಕಂತೆ, ಕಳೆದ 8 ವರ್ಷದಿಂದ ”GST ಲೂಟಿ ಉತ್ಸವ” ಮಾಡುತ್ತಿದ್ದರಲ್ಲವೇ? ಜನರನ್ನು ಬಾವಿಗೆ ತಳ್ಳಿದ್ದು ಇವರೇ, ಈಗ ಬಾವಿಯಿಂದ ಮೇಲೇತ್ತಲು ಏಣಿ ಕೊಟ್ಟಿದ್ದೇವೆ ಎನ್ನುತ್ತಿರುವವರೂ ಇವರೇ. ಏಣಿ ಕೊಟ್ಟಿದ್ದಕ್ಕೆ ಕ್ರೆಡಿಟ್ ತೆಗೆದುಕೊಳ್ಳಲು ಹವಣಿಸುತ್ತಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.
8 ವರ್ಷದಿಂದ ಜನರನ್ನು ಬಾವಿಗೆ ತಳ್ಳಿದ್ದರ ಪಾಪದ ಹೊಣೆಯೂ ಮೋದಿಯವರದ್ದೇ.
ಶ್ರೀ @RahulGandhi ಅವರು ಗಬ್ಬರ್ ಸಿಂಗ್ ಟ್ಯಾಕ್ಸ್ ಕಡಿತಗೊಳಿಸಬೇಕು ಎಂದು ಈ ಹಿಂದೆಯೇ ಹಲವು ಬಾರಿ ಆಗ್ರಹಿಸಿದ್ದಾಗ ಅವರ ಮಾತುಗಳನ್ನು ವ್ಯಂಗ್ಯ ಮಾಡಿದ್ದ ಬಿಜೆಪಿಯವರಿಗೆ ಈಗ ಜನಾಕ್ರೋಶಕ್ಕೆ ಬೆದರಿ GST ಕಡಿತಗೊಳಿಸಿದ್ದರ ಕ್ರೆಡಿಟ್ ತೆಗೆದುಕೊಳ್ಳಲು ನಾಚಿಕೆ ಎನಿಸುವುದಿಲ್ಲವೇ?
ದುಬಾರಿ GST ಜಾರಿ ಮಾಡಿದಾಗಲೂ ಮಾಸ್ಟರ್ ಸ್ಟ್ರೋಕ್ ಅಂದರು, ಈಗ GST ಕಡಿತಗೊಳಿಸಿದ್ದನ್ನೂ ಮಾಸ್ಟರ್ ಸ್ಟ್ರೋಕ್ ಅನ್ನುತ್ತಿದ್ದಾರೆ!
ಆದರೆ ಈ ಎಂಟು ವರ್ಷಗಳಲ್ಲಿ ಜನತೆಗೆ, ದೇಶದ ಆರ್ಥಿಕತೆಗೆ ಆಗಿರುವ ಹಾನಿಯನ್ನು ಭರಿಸುವವರು ಯಾರು?
ಈ 8 ವರ್ಷಗಳಲ್ಲಿ ಹಲವು ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳು GST ಪರಿಣಾಮದಿಂದ ಮುಚ್ಚಿಹೋಗಿದ್ದಕ್ಕೆ ಜವಾಬ್ದಾರಿ ಯಾರು?
ಈ 8 ವರ್ಷಗಳಲ್ಲಿ ದೇಶದ ಆರ್ಥಿಕತೆಗೆ ಬಿದ್ದ ಹೊಡೆತಕ್ಕೆ ಹೊಣೆ ಯಾರು?
ಆಗಿರುವ ಉದ್ಯೋಗ ನಷ್ಟಕ್ಕೆ ಜವಾಬ್ದಾರಿ ಯಾರು?
ಇದೆಲ್ಲವಕ್ಕೂ ಮೋದಿಯವರೇ ಹೊಣೆಯಲ್ಲವೇ @BJP4Karnataka!? ಎಂದು ರಾಜ್ಯ ಬಿಜೆಪಿ ನಾಯಕರನ್ನು ಪ್ರಶ್ನಿಸಿದ್ದಾರೆ.