ಬೆಂಗಳೂರು : ಪರಪ್ಪನ ಆಗ್ರಹಾರ ಜೈಲಿನಲ್ಲಿ ಸಿಸಿಬಿ ದಾಳಿ ನಡೆಸಲು ಆದೇಶ ನೀಡಿದ್ದು ನಾನೇ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.
ಈ ಬಗ್ಗೆ ಖುದ್ದು ಹೇಳೀಕೆ ನೀಡಿರುವ ಸಚಿವರು, ಕೆಲವು ವಾರಗಳ ಹಿಂದೆ ಪರಪ್ಪನ ಅಗ್ರಹಾರಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಅಲ್ಲಿ ಇರುವ ಲೋಪಗಳನ್ನು ಸೂಕ್ಷ್ಮವಾಗಿ ಗಮನಿಸಿದ್ದೆ. ಈ ಕುರಿತು ಅಲ್ಲಿನ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿ, ಮುಖ್ಯಮಂತ್ರಿಗಳಿಗೂ ತಿಳಿಸಿ ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿತ್ತು. ಬಳಿಕವಷ್ಟೇ ಸಿಸಿಬಿ ದಾಳೀ ನಡೆಸಲಾಯಿತು ಎಂದು ತಿಳಿಸಿದ್ದಾರೆ.
ಇದು ಕೇವಲ ಬೆಂಗಳೂರು ಜೈಲು ಮಾತ್ರವಲ್ಲದೆ, ಮುಂದಿನ ದಿನಗಳಲ್ಲಿ ಎಲ್ಲ ಜೈಲುಗಳಲ್ಲಿಯೂ ಇಂತಹ ಕಠಿಣ ನಿರ್ಧಾರಗಳು ತೆಗೆದುಕೊಳ್ಳುವ ಅಗತ್ಯವಿದೆ ಎಂದು ರಾಜ್ಯದಲ್ಲಿರುವ ಜೈಲುಗಳಿಗೆ ಎಚ್ಚರಿಕೆ ರವಾನಿಸಿದ್ದಾರೆ.
ಜೈಲಿನಲ್ಲಿರುವ ಆರೋಪಿಗಳು, ಅಪರಾಧಿಗಳಿಗೆ ಸಹಕರಿಸುತ್ತಿರುವ ಕೆಲವು ಸಿಬ್ಬಂದಿಗಳನ್ನು ಈಗಾಗಲೇ ಅಮಾನತು ಮಾಡಲಾಗಿದೆ. ಕೆಲವು ಪೊಲೀಸ್ ಸಿಬ್ಬಂದಿಗೆ ಬದಲಾಗುವುದಕ್ಕೆ ಅವಕಾಶ ನೀಡಿದರೂ ಸಹ ತಮ್ಮ ಹಳೆಯ ಚಾಳಿಯನ್ನು ಮುಂದುವರಿಸುತ್ತಿದ್ದಾರೆ. ಅವರ ವಿರುದ್ಧ ಕಾನೂನಿನ ಪ್ರಕಾರ ಕ್ರಮ ಕೈಗೊಳ್ಳಲಾಗುವುದು. ಜೈಲಿನಲ್ಲಿ ವಿಐಪಿ ಟ್ರೀಟ್ಮೆಂಟ್ ನೀಡುತ್ತಿರುವವರಿಗೆ ಈ ದಾಳಿ ಸ್ಪಷ್ಟ ಸಂದೇಶ. ಕಾನೂನು ಸುವ್ಯವಸ್ಥೆಯನ್ನು ಪಾಲಿಸುವುದು ಎಲ್ಲರ ಕರ್ತವ್ಯವಾಗಿದೆ ಎಂದು ಹೇಳಿದ್ದಾರೆ.

