ಬೆಂಗಳೂರು: ದೇವದಾಸಿ ಪದ್ಧತಿ ನಿಷೇಧಗೊಂಡಿದ್ದು, ಎಲ್ಲಿಯಾದರೂ ನಡೆದದ್ದು ಗಮನಕ್ಕೆ ಬಂದರೆ ಎಸ್ ಪಿ, ಡಿಸಿ ವಿರುದ್ಧ ಮುಲಾಜಿಲ್ಲದೆ ಕ್ರಮ ಕೈಗೊಳ್ಳುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ ನೀಡಿದ್ದಾರೆ. ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆಯುತ್ತಿರುವ ರಾಜ್ಯ ಮಟ್ಟದ ಜಾಗೃತ ಮತ್ತು ಉಸ್ತುವಾರಿ ಸಮಿತಿ ಸಭೆಯಲ್ಲಿ ಮುಖ್ಯಮಂತ್ರಿಗಳು ಈ ಎಚ್ಚರಿಕೆ ನೀಡಿದರು.
ಜಾತಿ ದೌರ್ಜನ್ಯ ಪ್ರಕರಣಗಳಲ್ಲಿ ಮತ್ತು ಗಂಭೀರ ಪ್ರಕರಣಗಳಲ್ಲಿ ಆರೋಪಿಗಳಿಗೆ ಸುಲಭವಾಗಿ ಜಾಮೀನು ಸಿಕ್ಕರೆ ಅದು ಅಧಿಕಾರಿಗಳ ದೌರ್ಬಲ್ಯವಾಗುತ್ತದೆ. ಹೀಗಾದರೆ ಜಾತಿ ದೌರ್ಜನ್ಯ ತಡೆಗಟ್ಟುವುದು ಸಾಧ್ಯವಿಲ್ಲ. ಮೇಲ್ಮನವಿ ಹೋಗಿ ಜಾಮೀನು ರದ್ದುಪಡಿಸಿ ಆರೋಪಿಗೆ ಶಿಕ್ಷೆ ಕೊಡಿಸಿದ ಪ್ರಕರಣಗಳು ಎಷ್ಟಿವೆ ? ಈ ಬಗ್ಗೆ ವಿವರ ಕೊಡಿ ಎಂದು ಗರಂ ಆಗಿ ಅಧಿಕಾರಿಗಳಿಗೆ ಪ್ರಶ್ನಿಸಿದರು.
ಪೊಲೀಸ್ ಇಲಾಖೆಯಲ್ಲಿ ಸೀನಿಯಾರಿಟಿ ಉಲ್ಲಂಘನೆಯಾಗಿ ಪರಿಶಿಷ್ಠರಿಗೆ ಅನ್ಯಾಯ ಆಗುತ್ತಿದೆ. ಸಮಿತಿ ಮುಂದೆ ದೂರು ಬಂದು ಹಿರಿಯ ಅಧಿಕಾರಿಗಳ ಗಮನಕ್ಕೂ ತಂದರೂ ಸಮಸ್ಯೆ ಬಗೆಹರಿಸುತ್ತಿಲ್ಲ ಏಕೆ ? ಆಡಳಿತ ವಿಭಾಗದ ADGP ಅವರು ಸರಿಯಾಗಿ ನಡೆದುಕೊಳ್ಳುತ್ತಿಲ್ಲ ಎಂದು ಸಂಸದ ಈ.ತುಕಾರಾಮ್ ಮತ್ತು ಶಾಸಕ ನರೇಂದ್ರಸ್ವಾಮಿ ಅವರು ಸಭೆಯ ಗಮನಕ್ಕೆ ತಂದರು. ಇದರಿಂದ ಅಸಮಾಧಾನಗೊಂಡ ಸಿಎಂ ಈ ವಿಚಾರವನ್ನು ಮುಂದಿನ ಕ್ಯಾಬಿನೆಟ್ ಗೆ ತರಲು ಸರ್ಕಾರದ ಮುಖ್ಯ ಕಾರ್ಯದರ್ಶಿಗಳಿಗೆ ಸೂಚಿಸಿದರು.
ಬ್ಯಾಕ್ ಲಾಗ್ ಮತ್ತು ಬಡ್ತಿ ವಿಚಾರದಲ್ಲಿ ಆಗುತ್ತಿರುವ ಅನ್ಯಾಯಗಳನ್ನು ಉಪ ಸಮಿತಿ ಪತ್ತೆ ಹಚ್ಚಿ ಗಮನಕ್ಕೆ ತಂದರೂ ಸಮಸ್ಯೆ ಬಗೆಹರಿಸದೆ ನಿರ್ಲಕ್ಷ್ಯ ತೋರಿಸುತ್ತಿದ್ದೀರಿ. ಹಾಗಾದರೆ ಉಪಸಮಿತಿ ಕೊಡುವ ವರದಿಗಳಿಗೆ ಬೆಲೆ ಇಲ್ಲವೇ ಎಂದು ವಿಧಾನ ಪರಿಷತ್ ಸದಸ್ಯ ಸುಧಾಮ್ ದಾಸ್ ಅವರು ಸಭೆಯ ಗಮನಕ್ಕೆ ತಂದರು. ಜಾತಿ ದೌರ್ಜನ್ಯ ದೂರು ಬಂದಾಗ ಪೊಲೀಸರೇ ಪ್ರತಿ ದೂರು ಪಡೆದು ಪ್ರಕರಣವನ್ನು ದುರ್ಬಲಗೊಳಿಸುವ ಬಗ್ಗೆ ದೂರುಗಳು ಬಂದರೆ ಅದನ್ನು ಸಹಿಸುವುದಿಲ್ಲ. ಇಂತಹ ಪ್ರಕರಣಗಳು ನಮ್ಮ ಗಮನಕ್ಕೆ ಬಂದರೆ ಸಂಬಂಧಪಟ್ಟವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳುವುದಾಗಿ ಎಚ್ಚರಿಕೆ ನೀಡಿದರು.
ಎಲ್ಲಾ ಇಲಾಖೆಗಳೂ ಬಡ್ತಿಯಲ್ಲಿ ಮೀಸಲಾತಿಯನ್ನು ಚಾಚೂ ತಪ್ಪದೆ ಪಾಲಿಸಬೇಕು. ಪರಿಶಿಷ್ಢ ಸಮುದಾಯದವರಿಗೆ ಅವಕಾಶ ತಪ್ಪಿಸಲು ಅಧಿಕಾರಿಗಳು ಕುಟಿಲ ನೀತಿ ಅನುಸರಿಸಿದರೆ ಸಹಿಸುವುದಿಲ್ಲ ಎಂದ ಮುಖ್ಯಮಂತ್ರಿಗಳು ಇಲಾಖಾವಾರು ಮುಂಬಡ್ತಿಯಲ್ಲಿ ಆಗಿರುವ ಅನ್ಯಾಯಗಳ ಬಗ್ಗೆ ಪರಿಶೀಲಿಸಲು ಪ್ರತ್ಯೇಕ Review ಮೀಟಿಂಗ್ ಕರೆಯುವಂತೆ ಮುಖ್ಯಮಂತ್ರಿಗಳು ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರಿಗೆ ಸೂಚಿಸಿದರು. ಪ್ರತೀ ಆರು ತಿಂಗಳಿಗೊಮ್ಮೆ ಉಸ್ತುವಾರಿ ಸಮಿತಿ ಸಭೆಯನ್ನು ಕಡ್ಡಾಯವಾಗಿ ಕರೆಯುತ್ತೇವೆ. ಈ ಸಭೆಗಳಲ್ಲಿ ಅಧಿಕಾರಿಗಳ ನಿರ್ಲಕ್ಷ್ಯ ಕಂಡು ಬಂದರೆ ಸರ್ಕಾರ ಕ್ರಮ ತೆಗೆದುಕೊಳ್ಳುತ್ತದೆ ಎಂದು ಸಿಎಂ ಎಚ್ಚರಿಸಿದರು.

                                    