ಬೆಂಗಳೂರು: ರಾಜ್ಯದ ಬಿಜೆಪಿ ಸಂಸದರಿಗೆ ಧಮ್ ಮತ್ತು ತಾಕತ್ ಇದ್ದರೆ ‘ನಮ್ಮ ಮೆಟ್ರೊ’ ಪ್ರಯಾಣ ದರ ಕಡಿಮೆ ಮಾಡಿಸಲಿ. ಅದನ್ನು ಬಿಟ್ಟು ಪ್ರಯಾಣ ದರ ಹೆಚ್ಚು ಮಾಡಿದಾಗ ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸುವುದು, ಕಡಿಮೆ ಮಾಡಿದಾಗ ಕೇಂದ್ರ ಸರ್ಕಾರಕ್ಕೆ ಧನ್ಯವಾದ ಸಲ್ಲಿಸುವುದು ಅಲ್ಲ’ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಕಿಡಿಕಾರಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಮೆಟ್ರೊ’ ಕೇಂದ್ರ ಸರ್ಕಾರದ ನಿಯಂತ್ರಣದಲ್ಲಿದೆ. ಈ ಹಿಂದೆ ಮೆಟ್ರೊ ಪ್ರಯಾಣ ದರ ಏರಿಕೆ ಮಾಡುವುದಿಲ್ಲ ಎಂದಾಗ ಬಿಜೆಪಿ ಸಂಸದರರೊಬ್ಬರು ಕೇಂದ್ರ ಸರ್ಕಾರಕ್ಕೆ ಧನ್ಯವಾದ ಹೇಳಿದ್ದರು.
ಆದರೆ, ಈಗ ದರ ಏರಿಕೆ ಮಾಡಿದಾಗ ನಾವು (ರಾಜ್ಯ ಸರ್ಕಾರ) ಜವಾಬ್ದಾರಿಯೇ? ಈಗಲೂ ಕೇಂದ್ರ ಸರ್ಕಾರವನ್ನು ಹೋಗಿ ಕೇಳಲಿ ಎಂದರು.
ನಾವು ಬಸ್ ಪ್ರಯಾಣ ದರ ಏರಿಕೆ ಮಾಡಿದಾಗ ಇದೇ ಬಿಜೆಪಿ ನಾಯಕರು ಗುಲಾಬಿ ಹೂ ಹಿಡಿದುಕೊಂಡು ಬಸ್ ನಿಲ್ದಾಣಕ್ಕೆ ಹೋಗಿ ಪ್ರಯಾಣಿಕರ ಬಳಿ ಕ್ಷಮೆ ಕೇಳಿದ್ದರು. ಈಗಲೂ ಬಿಜೆಪಿ ನಾಯಕರು ಮೆಟ್ರೊ ನಿಲ್ದಾಣಕ್ಕೆ ಹೋಗಿ ಪ್ರಧಾನಿ ನರೇಂದ್ರ ಮೋದಿ ಪರವಾಗಿ ಕ್ಷಮೆ ಕೇಳಲಿ. ಬೇಕಿದ್ದರೆ ಗುಲಾಬಿ ಹೂ ವನ್ನು ನಾವೇ ಒದಗಿಸುತ್ತೇವೆ ಎಂದು ತಿರುಗೇಟು ನೀಡಿದರು.