ಶ್ರೀನಗರ: ಭಾರತ ಮತ್ತು ಪಾಕಿಸ್ತಾನ ನಡುವಿನ ಸಂಘರ್ಷವನ್ನು ಮಾತುಕತೆಯ ಮೂಲಕ ಬಗೆಹರಿಸಿಕೊಳ್ಳಲು ಪ್ರಯತ್ನ ಮಾಡುವಂತೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪೀಪಲ್ಸ್ ಡೆಮಾಕ್ರಟಿಕ್ ಪಾರ್ಟಿ(ಪಿಡಿಪಿ) ಅಧ್ಯಕ್ಷೆ ಮೆಹಬೂಬಾ ಮುಫ್ತಿ ಅವರು ಮನವಿ ಮಾಡಿಕೊಂಡಿದ್ದಾರೆ. ಪಹಲ್ಗಾಮ್ ನಲ್ಲಿ ಭಯೋತ್ಪಾದನಾ ದಾಳಿಯಾದ ನಂತರ ಭಾರತ ಮತ್ತು ಪಾಕ್ ನಡುವಿನ ದ್ವಿಪಕ್ಷೀಯ ಸಂಬಂಧವು ಹದಗೆಟ್ಟಿದೆ ಎಂದು ಅವರು ‘ಎಕ್ಸ್’ನಲ್ಲಿ ಪೋಸ್ಟ್ ಮಾಡಿದ್ದಾರೆ.
ಉಭಯ ದೇಶಗಳ ನಡುವಿನ ಸಂಘರ್ಷದಿಂದ ಭಾರತ ಮತ್ತು ಪಾಕಿಸ್ತಾನ ದೇಶಗಳೆರಡರಲ್ಲೂ ಮಹಿಳೆ ಹಾಗೂ ಮಕ್ಕಳು ಸೇರಿದಂತೆ ಅಮಾಯಕರ ಸಾವಾಗುತ್ತಿದ್ದು, ಮನುಷ್ಯರ ಜೀವಕ್ಕೆ ಬೆಲೆ ಇಲ್ಲದಂತಾಗಿದೆ. ಇದೇ ರೀತಿ ಸಂಘರ್ಷ ಮುಂದುವರಿದರೆ ಎರಡೂ ಕಡೆಗಳಲ್ಲಿ ಮತ್ತಷ್ಟು ಸಾವುಗಳಾಗಲಿವೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.
ಸೈನ್ಯದ ತಂತ್ರಗಳ ಮೂಲಕ ಸಂಘರ್ಷಗಳನ್ನು ತಪ್ಪಿಸಲು ಸಾಧ್ಯವಿಲ್ಲ. ಅದರಿಂದ ಕೇವಲ ನೋವಷ್ಟೇ ಉಂಟಾಗಲಿದೆ. ಎರಡೂ ದೇಶಗಳ ನಾಯಕರು ಶಾಂತಿ ಸಂಧಾನದ ಮೂಲಕ ಸಮಸ್ಯೆ ಬಗೆಹರಿಸಿಕೊಳ್ಳಬೇಕು ಎಂದು ಅವರು ಹೇಳಿದ್ದಾರೆ.
ಉಭಯ ದೇಶಗಳ ನಡುವಿನ ಸಂಘರ್ಷವನ್ನು ಶಾಂತಿ ಸಂಧಾನ ಅಥವಾ ಮಾತುಕತೆಯ ಮೂಲಕ ಬಗೆಹರಿಸಿಕೊಳ್ಳುವಂತೆ ಪ್ರಧಾನಿ ಮೋದಿಯವರಿಗೆ ಮನವಿ ಮಾಡುತ್ತೇನೆ. ಇದರಿಂದ ಕಣಿವೆ ರಾಜ್ಯದಲ್ಲಿ ಮತ್ತೆ ಶಾಂತಿ ನೆಲೆಯಾಗಲಿದೆ ಎಂದು ಅವರು ಪೋಸ್ಟ್ ಮಾಡಿದ್ದಾರೆ.