ನವದೆಹಲಿ: ಸಧ್ಯದ ಬೆಳವಣಿಗೆಯಲ್ಲಿ ಭಾರತ ಪಾಕಿಸ್ತಾನ ನಡುವಿನ ಉದ್ವಿಗ್ನ ಪರಿಸ್ಥಿತಿ ಕುರಿತು ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಸ್ರಿ ಅವರು ಮೇ 19 ರಂದು ಸಂಸತ್ತಿನ ವಿದೇಶಾಂಗ ವ್ಯವಹಾರಗಳ ಸ್ಥಾಯಿ ಸಮಿತಿಗೆ ಮಾಹಿತಿ ನೀಡಲಿದ್ದಾರೆ ಎಂದು ತಿಳಿದು ಬಂದಿದೆ.
ಕಾಶ್ಮೀರದ ಪಹಲ್ಗಾಮ್ ಮೇಲೆ ಪಾಕ್ ಬೆಂಬಲಿತ ಭಯೋತ್ಪಾದಕರು ಪ್ರವಾಸಿಗರ ಮೇಲೆ ಬಾಂಬ್ ದಾಳಿ ನಡೆಸಿದ್ದರು. ನಂತರ ಭಾರತ, ಪಾಕಿಸ್ತಾನದಲ್ಲಿರುವ ಭಯೋತ್ಪಾದಕ ತಾಣಗಳ ಮೇಲೆ ಮೇ 7ರಂದು ಭಾರತ ‘ಆಪರೇಷನ್ ಸಿಂಧೂರ‘ ಹೆಸರಿನಲ್ಲಿ ಸೇನಾ ಕಾರ್ಯಾಚರಣೆ ನಡೆಸಿ ಭಯೋತ್ಪಾದಕರ ನೆಲೆಗಳನ್ನು ಧ್ವಂಸಗೊಳಿಸಿತ್ತು. ನಂತರ ಉಭಯ ದೇಶಗಳ ನಡುವೆ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿತ್ತು. ಅಮೆರಿಕ ಮಧ್ಯಸ್ಥಿಕೆಯಲ್ಲಿ ಮೇ 10ರಂದು ಎರಡೂ ದೇಶಗಳು ಕದನ ವಿರಾಮಕ್ಕೆ ಒಪ್ಪಿಕೊಂಡಿದ್ದವು. ಆ ನಂತರ ನಡೆದ ಬೆಳವಣಿಗೆಗಳನ್ನು ಕುರಿತು ವಿದೇಶಾಂಗ ವ್ಯವಹಾರಗಳ ಸ್ಥಾಯಿ ಸಮಿತಿಗೆ ಮಿಸ್ರಿ ಅವರು, ಮೇ 19, ಸೋಮವಾರದಂದು ವಿವರಣೆ ನೀಡಲಿದ್ದಾರೆ ಎಂದು ಸಮಿತಿಯ ಅಧ್ಯಕ್ಷ ಹಾಗೂ ಕಾಂಗ್ರೆಸ್ ಸಂಸದ ಶಶಿ ತರೂರ್ ತಿಳಿಸಿದ್ದಾರೆ.
ಬಾಂಗ್ಲಾದೇಶ ಸೇರಿ ನೆರೆಹೊರೆಯ ದೇಶಗಳಲ್ಲಿನ ಬೆಳವಣಿಗೆಗಳು ಮತ್ತು ಕೆನಡಾದೊಂದಿಗಿನ ಸಂಬಂಧಗಳು ಸೇರಿದಂತೆ ವಿದೇಶಾಂಗ ವ್ಯವಹಾರಗಳ ಹಲವಾರು ವಿಷಯಗಳ ಕುರಿತು ಮಿಸ್ರಿ ನಿಯಮಿತವಾಗಿ ಈ ಸಮಿತಿಗೆ ವಿವರಿಸುತ್ತಾ ಬಂದಿದ್ದಾರೆ.