ಬೆಂಗಳೂರು: ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ‘ಗ್ರೇಟರ್ ಬೆಂಗಳೂರು ಇನ್ನೋವೇಶನ್ ಆ್ಯಂಡ್ ಟೆಕ್ ಸಿಟಿ’ಗೆ ಬೆಂಗಳೂರು ದಕ್ಷಿಣ ಜಿಲ್ಲೆಯ ಜಿಲ್ಲಾಧಿಕಾರಿ ಕಚೇರಿಯಲ್ಲಿ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಚಾಲನೆ ನೀಡಿದರು.
ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಕನಕಪುರ ಮೆಡಿಕಲ್ ಕಾಲೇಜಿಗೆ ಅನುಮೋದನೆ ದೊರಕಿದೆ. ಈ ಹಿಂದೆ ಬಿಜೆಪಿ ಹಾಗೂ ಜೆಡಿಎಸ್ ನಾಯಕರು ನಮ್ಮ ಕಾಲೇಜು ನೀವು ತೆಗೆದುಕೊಂಡು ಹೋಗ್ತಿದ್ದೀರಿ ಎಂದು ಧರಣಿ ಮಾಡಿದ್ದರು. ಆಗ ನೀವು ಏನ್ ಬೇಕಾದ್ರೂ ಟೀಕೆ ಮಾಡಿ, ರಾಮನಗರ ಹಾಗೂ ಕನಕಪುರದಲ್ಲಿ ಮೆಡಿಕಲ್ ಕಾಲೇಜು ಮಾಡ್ತೀನಿ ಎಂದು ಹೇಳಿದ್ದೆ. ಅದರಂತೆ ಈಗ ಕನಕಪುರ ಮೆಡಿಕಲ್ ಕಾಲೇಜಿಗೆ ಹೌಸಿಂಗ್ ಬೋರ್ಡ್ನಿಂದ 25 ಎಕರೆ ಜಮೀನಿಗೆ 60 ಕೋಟಿ ರೂಪಾಯಿ ಮೀಸಲಿಡಲಿಕ್ಕೆ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ. ಈಗಾಗಲೇ ರಾಮನಗರ ಮೆಡಿಕಲ್ ಕಾಲೇಜು ಕೆಲಸ ನಡೆಯುತ್ತಿದ್ದು, ಕೊಟ್ಟ ಮಾತನ್ನು ನಾವು ಉಳಿಸಿಕೊಳ್ಳುತ್ತಿದ್ದೇವೆ.
2006ರಲ್ಲಿ ಕುಮಾರಸ್ವಾಮಿಯವರು ಮುಖ್ಯಮಂತ್ರಿಯಾಗಿದ್ದಾಗ ರಾಮನಗರ, ಸೋಲೂರು, ಸಾತನೂರು, ಬಿಡದಿ ಸೇರಿದಂತೆ ಖಾಸಗಿ ಸಹಭಾಗಿತ್ವದಲ್ಲಿ ಯೋಜನೆ ನಿರ್ಮಾಣ ಮಾಡಲು ಹೊರಟು, ಗ್ಲೋಬಲ್ ಟೆಂಡರ್ ಸಹ ಕರೆದಿದ್ದರು. ಗ್ರೇಟರ್ ಬೆಂಗಳೂರು ಇಂಟಿಗ್ರೇಟೆಡ್ ಟೌನ್ಶಿಪ್ ಮಾಡಲು ನಾವು ಬಯಸಿದ್ದೇವೆ. ಬಿಡದಿ ಟೌನ್ಶಿಪ್ ಯೋಜನೆ ಒಮ್ಮೆ ನೋಟಿಫಿಕೇಷನ್ ಆದ್ಮೇಲೆ ಮತ್ತೆ ಡಿನೋಟಿಫೈ ಮಾಡಲು ಕಾನೂನಿನಲ್ಲಿ ಯಾವುದೇ ಅವಕಾಶವಿಲ್ಲ. ನಮ್ಮ ಉದ್ದೇಶ ಒಂದೇ, ಬೆಂಗಳೂರು ದಕ್ಷಿಣ ಜಿಲ್ಲೆಯಲ್ಲಿ ಹೆಚ್ಚು ಉದ್ಯೋಗ ಸೃಷ್ಟಿಯಾಗಬೇಕು. ಆಸ್ತಿ ಮೌಲ್ಯ ಹೆಚ್ಚಾಗಬೇಕು. ಆಸ್ಪತ್ರೆ, ಕೈಗಾರಿಕೆ, ಎಐ ಎಲ್ಲವೂ ನಮ್ಮ ಜಿಲ್ಲೆಗೆ ಬರಬೇಕು. ಎಐ ಸಿಟಿಯಾಗಿ ನಮ್ಮ ನಗರ ಬೆಳೆಯಬೇಕು. ಮುಂದಿನ ದಿನಗಳಲ್ಲಿ ಮೆಟ್ರೋ ಕೂಡ ಇಲ್ಲಿಗೆ ಬರಬೇಕು ಎನ್ನುವುದು.
ನಮ್ಮ ಜಿಲ್ಲೆಯ ಕೆಂಗಲ್ ಹನುಮಂತಯ್ಯ ಅವರು ವಿಧಾನಸೌಧ ಕಟ್ಟಿದ್ರು, ಮಾಗಡಿ ಕೆಂಪೇಗೌಡರು ಬೆಂಗಳೂರು ಕಟ್ಟಿದ್ರು. ಕೆಂಪೇಗೌಡರು ಬೆಂಗಳೂರು ನಗರ ಇಷ್ಟು ಬೆಳೆಯುತ್ತೆ ಎಂದು ಯೋಚಿಸಿರಲಿಲ್ಲ. ಪ್ರತಿದಿನ 75 ಲಕ್ಷ ಜನ ಹೊರಗಿನಿಂದ ಬಂದು ಬೆಂಗಳೂರಿನಲ್ಲಿ ಕೆಲಸ ಮಾಡುತ್ತಿದ್ದಾರೆ. ನಮ್ಮ ನಗರದ ಜನರಿಗೆ ಮೊದಲು ಕೆಲಸ ಸಿಗಬೇಕು ಎಂಬುದು ನಮ್ಮ ಉದ್ದೇಶವಾಗಿದೆ ಎಂದು ಎಕ್ಸ್ ನಲ್ಲಿ ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದಾರೆ.
ಗ್ರೇಟರ್ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದಿಂದ ಬಿಡದಿಯಲ್ಲಿ ‘ಕೆಲಸ, ವಾಸ, ಉಲ್ಲಾಸ‘ ಪರಿಕಲ್ಪನೆ ಅಡಿಯಲ್ಲಿ ಬಿಡದಿ ಸಮಗ್ರ ಉಪನಗರ ನಿರ್ಮಾಣವಾಗುತ್ತಿದೆ. ದೇಶದಲ್ಲೇ ಮೊದಲ ಕೃತಕ ಬುದ್ಧಿಮತ್ತೆ (ಎ.ಐ) ನಗರವನ್ನು ಅಭಿವೃದ್ಧಿಪಡಿಸಲಾಗುವುದು ಎಂದು ಅವರು ಹೇಳಿದ್ದಾರೆ.
ಈ ಯೋಜನೆಗಾಗಿ ಒಂಬತ್ತು ಗ್ರಾಮಗಳ 8,493 ಎಕರೆ ಜಮೀನು ಸ್ವಾಧೀನಪಡಿಸಿಕೊಳ್ಳಲಾಗುತ್ತದೆ. ಭೂಮಿ ಕಳೆದುಕೊಂಡವರಿಗೆ 2013ರ ಭೂ ಸ್ವಾಧೀನ ಕಾಯ್ದೆ ಅಡಿ ಪ್ರಸಕ್ತ ಮಾರುಕಟ್ಟೆ ದರದಲ್ಲಿ ಪ್ರತಿ ಎಕರೆಗೆ ರೂ.1.50 ಕೋಟಿಯಿಂದ ರೂ.2.50 ಕೋಟಿವರೆಗೆ ಪರಿಹಾರ ಲಭ್ಯವಾಗಲಿದೆ.
ಪರಿಹಾರದ ಹಣ ಬೇಡ ಎಂದರೆ ಬದಲು ಯೋಜನೆಯ ಸಹಭಾಗಿತ್ವ ಪಡೆಯಲೂ ಅವಕಾಶ ಇದೆ. ವಸತಿ ಉದ್ದೇಶಕ್ಕೆ ಅಭಿವೃದ್ಧಿಪಡಿಸುವ ಬಡಾವಣೆಗಳಲ್ಲಿ 50:50 ಅನುಪಾತದಲ್ಲಿ ಹಾಗೂ ವಾಣಿಜ್ಯ ಉದ್ದೇಶಕ್ಕೆ ಅಭಿವೃದ್ಧಿಪಡಿಸುವ ಪ್ರದೇಶದಲ್ಲಿ 45:55 ಅನುಪಾತದಲ್ಲಿ ನಿವೇಶನ ಒದಗಿಸಲು ತೀರ್ಮಾನಿಸಲಾಗಿದೆ.
ಸಮಾರಂಭದಲ್ಲಿ ಶಾಸಕರಾದ ಎಚ್.ಎ. ಇಕ್ಬಾಲ್ ಹುಸೇನ್, ಎಚ್.ಸಿ ಬಾಲಕೃಷ್ಣ, ವಿಧಾನ ಪರಿಷತ್ ಸದಸ್ಯ ಎಸ್. ರವಿ, ಬಮೂಲ್ ಅಧ್ಯಕ್ಷ ಡಿ.ಕೆ. ಸುರೇಶ್, ಗ್ರೇಟರ್ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಗಾಣಕಲ್ ನಟರಾಜ್, ಆಯುಕ್ತ ರಾಜೇಂದ್ರ ಪಿ. ಚೋಳನ್, ಜಿಲ್ಲಾಧಿಕಾರಿ ಯಶವಂತ್ ವಿ. ಗುರುಕರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶ್ರೀನಿವಾಸ್ ಗೌಡ ಹಾಗೂ ಇತರರು ಉಪಸ್ಥಿತರಿದ್ದರು.