ದಾವಣಗೆರೆ: ಇಂದಿರಾ ಕ್ಯಾಂಟೀನ್ಗಳಲ್ಲಿ ಮಾಂಸಾಹಾರ ಪೂರೈಕೆ ಮಾಡುವ ಆಲೋಚನೆ ಇದೆ. ಆದರೆ ಈವರೆಗೂ ಇದನ್ನು ಕಾರ್ಯರೂಪಕ್ಕೆ ತರಲು ಸಾಧ್ಯವಾಗಿಲ್ಲ. ಆರಂಭದಲ್ಲಿ ಮೊಟ್ಟೆ ಪೂರೈಸುವ ಪ್ರಸ್ತಾವ ಸರ್ಕಾರದ ಮುಂದಿದೆ ಎಂದು ಪೌರಾಡಳಿತ ಸಚಿವ ರಹೀಂ ಖಾನ್ ತಿಳಿಸಿದ್ದಾರೆ.
ಇಲ್ಲಿನ ಇಂದಿರಾ ಕ್ಯಾಂಟೀನ್ ವೊಂದಕ್ಕೆ ಭೇಟಿ ನೀಡಿ ಪರಿಶೀಲಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಡವರಿಗೂ ಊಟದಲ್ಲಿ ಪೋಷಕಾಂಶ ಸಿಗಬೇಕು. ಈ ನಿಟ್ಟಿನಲ್ಲಿ ಮಾಂಸಾಹಾರ ಮತ್ತು ಮೊಟ್ಟೆಗೆ ಸಾರ್ವಜನಿಕರಿಂದ ಬೇಡಿಕೆ ಕೇಳಿ ಬಂದಿದ್ದು ಸರ್ಕಾರ ಪರಿಶೀಲಿಸುತ್ತಿದೆ ಎಂದರು.
ಇಂದಿರಾ ಕ್ಯಾಂಟೀನ್ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕನಸಿನ ಯೋಜನೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದ ಎರಡು ವರ್ಷದಲ್ಲಿ 186 ಹೊಸ ಇಂದಿರಾ ಕ್ಯಾಂಟೀನ್ ಗಳಿಗೆ ಅನುಮೋದನೆ ನೀಡಲಾಗಿದೆ. ಈಗಾಗಲೇ ನೂರಕ್ಕೂ ಅಧಿಕ ಕ್ಯಾಂಟೀನ್ ಗಳು ಆರಂಭವಾಗಿದ್ದು ಊಟವನ್ನು ಪೂರೈಸುತ್ತಿವೆ. ಉಳಿದ ಕ್ಯಾಂಟೀನ್ ಗಳು ಶೀಘ್ರದಲ್ಲೇ ಕಾರ್ಯಾರಂಭ ಆಗಲಿವೆ. ಇದರಿಂದ ಬಡ ಜನತೆಗೆ ಅನುಕೂಲವಾಗಲಿದೆ ಎಂದು ತಿಳಿಸಿದರು.