ಬೆಂಗಳೂರು : ಕೇಂದ್ರ ನಗರ ಪಾಲಿಕೆ ವ್ಯಾಪ್ತಿಯ ವಸಂತನಗರದಲ್ಲಿರುವ ಇಂದಿರಾ ಅಡುಗೆ ಕೋಣೆಗೆ ಎಲ್.ಪಿ.ಜಿ. ಸಮಸ್ಯೆ ಉಂಟಾಗದಂತೆ ನೋಡಿಕೊಳ್ಳುವಂತೆ ಆಯುಕ್ತರಾದ ರಾಜೇಂದ್ರ ಚೋಳನ್ ಗುತ್ತಿಗೆದಾರರಿಗೆ ಸೂಚನೆ ನೀಡಿದರು.
ಬೆಂಗಳೂರು ಕೇಂದ್ರ ನಗರ ಪಾಲಿಕೆ ವ್ಯಾಪ್ತಿಯಲ್ಲಿ ಇಂದು ವಿವಿಧ ಅಭಿವೃದ್ಧಿ ಕಾಮಗಾರಿಗಳ ಪ್ರಗತಿ ಪರಿಶೀಲನೆ ನಡೆಸಿದ ವೇಳೆ ಮಾತನಾಡಿದ ಅವರು, ಇಂದಿರಾ ಅಡುಗೆ ಕೋಣೆಗೆ ಭೇಟಿ ನೀಡಿ, ಈ ಅಡುಗೆ ಕೋಣೆಯಿಂದ 14 ಇಂದಿರಾ ಕ್ಯಾಂಟೀನ್ಗಳಿಗೆ ಆಹಾರ ಪೂರೈಕೆ ಮಾಡಲಾಗುತ್ತಿದೆ. ಈ ಸಂಬಂಧ ಯಾವುದೇ ಕಾರಣಕ್ಕೂ ಆಹಾರ ಪೂರೈಕೆ ನಿಲ್ಲಿಸುವಂತಿಲ್ಲ. ಎಲ್.ಪಿ.ಜಿ. ವ್ಯವಸ್ಥೆಯನ್ನು ಸಮರ್ಪಕವಾಗಿ ಮಾಡಿಕೊಂಡು ಯಾವುದೇ ಸಮಸ್ಯೆ ಉಂಟಾಗದಂತೆ ಆಹಾರ ಪೂರೈಕೆಗೆ ಕ್ರಮ ವಹಿಸುವಂತೆ ಅಧಿಕಾರಿಗಳು ಹಾಗೂ ಗುತ್ತಿಗೆದಾರರಿಗೆ ನಿರ್ದೇಶನ ನೀಡಿದರು.
ಎಂ.ಜಿ ರಸ್ತೆ ಡಾಂಬರೀಕರಣ 15 ದಿನಗಳಲ್ಲಿ ಪೂರ್ಣಗೊಳಿಸಿ:
ಎಂ.ಜಿ ರಸ್ತೆಯಲ್ಲಿ ಟ್ರಿನಿಟಿ ವೃತ್ತದಿಂದ ಮಹಾತ್ಮ ಗಾಂಧೀಜಿ ಉದ್ಯಾನವನದವರೆಗೆ 2.2 ಕಿ.ಮೀ (ಎರಡು ಭಾಗ ಸೇರಿ 4.4 ಕಿ.ಮೀ) ಡಾಂಬರೀಕರಣ ಕಾಮಗಾರಿ ಪ್ರಗತಿಯಲ್ಲಿದೆ. ಈಗಾಗಲೇ ಉದ್ಯಾನವನದಿಂದ ಬ್ರಿಗೆಡ್ ರಸ್ತೆಯವರೆಗೆ 1.2 ಕಿ.ಮೀ (ಎರಡೂ ಭಾಗ ಸೇರಿ 2.4 ಕಿ.ಮೀ) ಉದ್ದದ ರಸ್ತೆಗೆ ಒಂದು ಪದರದ ಡಾಂಬರು ಹಾಕಲಾಗಿದೆ. ವಾಹನಗಳ ಸಂಚಾರಕ್ಕೆ ಯಾವುದೇ ರೀತಿಯ ತೊಂದರೆ ಆಗದಂತೆ ರಾತ್ರಿ ವೇಳೆ ಡಾಂಬರೀಕರಣ ಕಾರ್ಯವನ್ನು ಹಂತ ಹಂತವಾಗಿ ನಡೆಸಲಾಗುತ್ತಿದೆ. ಹಗಲಿನಲ್ಲಿ ರಸ್ತೆ ಬದಿಯ ಸೈಡ್ ಡ್ರೇನ್ಗಳಲ್ಲಿ ಹೂಳೆತ್ತುವ ಕೆಲಸ ನಡೆಯುತ್ತಿದೆ. ರಸ್ತೆ ಕಾಮಗಾರಿಯನ್ನು ಸಂಪೂರ್ಣವಾಗಿ 15 ದಿನಗಳೊಳಗೆ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಮಹಾತ್ಮ ಗಾಂಧಿ ಉದ್ಯಾನವನಕ್ಕೆ ಅತ್ಯಾಧುನಿಕ ಸ್ಪರ್ಶ: ಮಹಾತ್ಮ ಗಾಂಧಿ ಉದ್ಯಾನವನವನ್ನು 4 ಕೋಟಿ ರೂ. ವೆಚ್ಚದಲ್ಲಿ ಅಭಿವೃದ್ಧಿಪಡಿಸುವ ಕಾಮಗಾರಿಯನ್ನು ಕೈಗೆತ್ತಿಕೊಳ್ಳಲಾಗಿದೆ. ಉದ್ಯಾನವನಕ್ಕೆ ಅತ್ಯಾಧುನಿಕ ಸ್ಪರ್ಶ ನೀಡುವ ಮೂಲಕ ಅದನ್ನು ಪ್ರವಾಸಿಗರ ಆಕರ್ಷಕ ತಾಣವನ್ನಾಗಿ ರೂಪಿಸಲಾಗುತ್ತದೆ. ಜೊತೆಗೆ ಕಲಾವಿದರಿಗಾಗಿ ಮೀಸಲಾದ ವೇದಿಕೆ, ಕುಟೀರ ಸೇರಿದಂತೆ ಇನ್ನಿತರ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲಾಗುತ್ತದೆ. ಕಾಮಗಾರಿಗೆ ವೇಗ ನೀಡಿ ಕಾಲಮಿತಿಯೊಳಗೆ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ದ್ವಿತೀಯ ಹಂತದ ಘನತ್ಯಾಜ್ಯ ಸಂಸ್ಕರಣಾ ಘಟಕ: ಶಿವಾಜಿನಗರದ ಮಿಲ್ಲರ್ಸ್ ರಸ್ತೆಯಲ್ಲಿ ಬೆಂಗಳೂರು ಘನತ್ಯಾಜ್ಯ ನಿರ್ವಹಣೆ ನಿಯಮಿತದಿಂದ ದ್ವಿತೀಯ ಹಂತದ ಘನತ್ಯಾಜ್ಯ ಸಂಸ್ಕರಣಾ ಘಟಕದ ಕಾಮಗಾರಿ ಬಹುತೇಕ ಪೂರ್ಣಗೊಂಡಿದ್ದು, ಬಾಕಿ ಉಳಿದಿರುವ ಕಾಮಗಾರಿಯನ್ನು ಏಪ್ರಿಲ್ 15ರೊಳಗೆ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಾನ್ಸನ್ ಮಾರುಕಟ್ಟೆಗೆ ಡಿಪಿಆರ್ ಸಿದ್ಧಪಡಿಸಿ : ಶಿವಾಜಿನಗರ ವ್ಯಾಪ್ತಿಯಲ್ಲಿರುವ ಜಾನ್ಸನ್ ಮಾರುಕಟ್ಟೆ ಶಿಥಿಲಾವಸ್ಥೆಯಲ್ಲಿದ್ದು, ಸುಮಾರು 24,000 ಚ.ಮೀ ವ್ಯಾಪ್ತಿಯಲ್ಲಿ ವಿಸ್ತರಿಸಿದೆ. ಇರುವ ಕಟ್ಟಡವನ್ನು ನೆಲಸಮಗೊಳಿಸಿ ವಿನೂತನ ಮಾದರಿಯಲ್ಲಿ ಮಾರುಕಟ್ಟೆ ನಿರ್ಮಿಸುವ ಉದ್ದೇಶದಿಂದ ವಿವರವಾದ ಯೋಜನಾ ವರದಿ (ಡಿಪಿಆರ್) ಸಿದ್ಧಪಡಿಸಲು ಅಭಿಯಂತರರಿಗೆ ಸೂಚನೆ ನೀಡಿದರು.

