ಬೆಂಗಳೂರು: ಆರ್ ಸಿ ಬಿ ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಸುತ್ತಮುತ್ತ ಉಂಟಾದ ಕಾಲ್ತುಳಿತದಲ್ಲಿ 11 ಮಂದಿ ದುರ್ಮರಣವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿಸಲ್ಪಟ್ಟಿದ್ದ ಆರ್ಸಿಬಿ ಮತ್ತು ಡಿ ಎನ್ ಎ ಪದಾಧಿಕಾರಿಗಳಿಗೆ ಹೈಕೋರ್ಟ್, ಬಿಡುಗಡೆಗೆ ಷರತ್ತುಬದ್ಧ ಮಧ್ಯಂತರ ಜಾಮೀನು ಮಂಜೂರು ಮಾಡಿದೆ.
ನಮ್ಮನ್ನು ಬಿಡುಗಡೆ ಮಾಡಲು ನಿರ್ದೇಶಿಸಬೇಕು ಎಂದು ಕೋರಿ ಆರ್ ಸಿಬಿ ಮತ್ತು ಡಿಎನ್ ಎ ಪದಾಧಿಕಾರಿಗಳು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್, ಬಿಡುಗಡೆಗೆ ಷರತ್ತುಬದ್ಧ ಮಧ್ಯಂತರ ಜಾಮೀನು ಮಂಜೂರು ಮಾಡಿದೆ. ಆರ್ ಸಿಬಿ ಮಾರುಕಟ್ಟೆ ವಿಭಾಗದ ಮುಖ್ಯಸ್ಥ ನಿಖಿಲ್ ಸೋಸಲೆ ಪರ ಅವರ ಪತ್ನಿ ಮಾಳವಿಕಾ ನಾಯಕ್, ಮೆಸರ್ಸ್ ಡಿಎನ್ ಎ ಎಂಟರ್ ಟೈನ್ ಮೆಂಟ್ ನೆಟ್ವರ್ಕ್ಸ್ ಪ್ರೈವೇಟ್ ಲಿಮಿಟೆಡ್ ಕಂಪನಿ ನಿರ್ದೇಶಕ ಆರ್.ಸುನಿಲ್ ಮ್ಯಾಥ್ಯೂ ಪರವಾಗಿ ಅವರ ಪತ್ನಿ ರೋಶನಿ ಸುನಿಲ್, ಎಸ್.ಕಿರಣ್ ಕುಮಾರ್ ಪರವಾಗಿ ಅವರ ಪತ್ನಿ ಕೆ.ನಂದಿನಿ ಮತ್ತು ಎನ್.ಪಿ.ಶಮಂತ್ ಅವರ ತಾಯಿ ನಿರ್ಮಲಾ ಸಲ್ಲಿಸಿದ್ದ ರಿಟ್ ಅರ್ಜಿಗಳನ್ನು ನ್ಯಾಯಮೂರ್ತಿ ಎಸ್.ಆರ್.ಕೃಷ್ಣಕುಮಾರ್ ಅವರಿದ್ದ ಏಕಸದಸ್ಯ ನ್ಯಾಯಪೀಠ ವಿಚಾರಣೆ ನಡೆಸಿತು.
ಪ್ರಕರಣ ಸಂಬಂಧ ಬುಧವಾರ ವಿಚಾರಣೆ ನಡೆಸಿ ಕಾಯ್ದಿರಿಸಿದ್ದ ಮಧ್ಯಂತರ ಆದೇಶವನ್ನು ನ್ಯಾಯಮೂರ್ತಿ ಎಸ್.ಆರ್.ಕೃಷ್ಣ ಕುಮಾರ್ ಅವರು ಇಂದು ಮಧ್ಯಾಹ್ನ ಪ್ರಕಟಿಸಿದರು. ಅರ್ಜಿದಾರರು ತಮ್ಮ ಪಾಸ್ ಪೋರ್ಟ್ ಅನ್ನು ಒಪ್ಪಿಸುವಂತೆ ನ್ಯಾಯಾಲಯ ಷರತ್ತು ವಿಧಿಸಿದೆ.