ಬೆಂಗಳೂರು: ತಮಿಳುನಾಡು ಮಾಜಿ ಮುಖ್ಯಮಂತ್ರಿ ಜಯಲಲಿತಾ ಅವರಿಗೆ ಸಂಬಂಧಿಸಿದ ಆಸ್ತಿ ಪತ್ರಗಳು, 11,344 ರೇಷ್ಮೆ ಸೀರೆಗಳು, 7 ಕೆಜಿ ತೂಕದ 468 ಚಿನ್ನ, ವಜ್ರದ ಆಭರಣಗಳು, 750 ಜೊತೆ ಚಪ್ಪಲಿಗಳು, ಬೆಲೆ ಬಾಳುವ ಕೈಗಡಿಯಾರಗಳು ಸೇರಿದಂತೆ ಇನ್ನಿತರ ಬೆಲೆಬಾಳುವ ವಸ್ತುಗಳನ್ನು ತಮಿಳುನಾಡು ಸರ್ಕಾರಕ್ಕೆ ಹಸ್ತಾಂತರಿಸುವ ಪ್ರಕ್ರಿಯೆ ಆರಂಭವಾಗಿದೆ. ತಮಿಳುನಾಡಿನ ಪೊಲೀಸರು ಬಿಗಿ ಭದ್ರತೆಯಲ್ಲಿ ಬೆಂಗಳೂರಿಗೆ ಆಗಮಿಸಿದ್ದು, ಇಂದು ಅಥವಾ ನಾಳೆ ಈ ಎಲ್ಲ ವಸ್ತುಗಳನ್ನು ಕೊಂಡೊಯ್ಯಲಿದ್ದಾರೆ.
ಜಯಲಲಿತಾ ಸಂಬಂಧಿಕರು ಎಂದು ಹೇಳಿಕೊಂಡು ದೀಪಾ ಹಾಗೂ ದೀಪಕ್ ಎಂಬುವರು ಜಯಲಲಿತಾ ಅವರ ಆಭರಣಗಳನ್ನು ತಮಗೆ ಹಸ್ತಾಂತರಿಸಬೇಕು ಎಂದು ಕರ್ನಾಟಕ ಹೈಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದ್ದರು. ಆದರೆ ಹೈಕೋರ್ಟ್ ಅವರ ಅರ್ಜಿಯನ್ನು ವಜಾ ಮಾಡಿತ್ತು. ಇಂದು ನ್ಯಾಯಾಧೀಶರ ಸಮ್ಮುಖದಲ್ಲಿ ತಮಿಳುನಾಡು ಸರ್ಕಾರಕ್ಕೆ ಎಲ್ಲಾ ವಸ್ತುಗಳನ್ನು ವರ್ಗಾವಣೆ ಮಾಡಲಾಗುತ್ತಿದೆ. ವಕೀಲರು ಹಾಗೂ ತಮಿಳುನಾಡಿನ ಕೆಲವು ಅಧಿಕಾರಿಗಳು ನ್ಯಾಯಾಧೀಶರ ಮುಂದೆ ಪ್ರತಿಯೊಂದು ಮಾಹಿತಿಯನ್ನು ನೀಡಿ ಚಿನ್ನದ ಒಡವೆಗಳನ್ನು ತೂಕವನ್ನು ಹಾಕುತ್ತಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಅಕ್ರಮ ಆಸ್ತಿ ಗಳಿಕೆ ಪ್ರಕರಣ ಸಂಬಂಧ ತಮಿಳುನಾಡು ಮಾಜಿ ಮುಖ್ಯಮಂತ್ರಿ ಜಯಲಲಿತಾ ಅವರಿಂದ ಮುಟ್ಟುಗೋಲು ಹಾಕಿಕೊಂಡಿದ್ದ ಬೆಲೆ ಬಾಳುವ ವಸ್ತುಗಳು ಮತ್ತು ಆಸ್ತಿಗಳನ್ನು ಹರಾಜು ಹಾಕುವ ಬದಲು ತಮಿಳುನಾಡು ಸರಕಾರದ ಸುಪರ್ದಿಗೆ ನೀಡುವಂತೆ ವಿಶೇಷ ನ್ಯಾಯಾಲಯವು ಆದೇಶಿಸಿತ್ತು.
ವಿಶೇಷ ನ್ಯಾಯಾಲಯವು ಬೆಲೆ ಬಾಳುವ ವಸ್ತುಗಳು, ಚಿನ್ನ ಮತ್ತು ವಜ್ರಾಭರಣಗಳನ್ನು ಹಿಂದಿರುಗಿಸಲು 2024ರ ಫೆ.19ಕ್ಕೆ ದಿನಾಂಕ ನಿಗದಿಪಡಿಸಿತ್ತು. 2024ರ ಮಾರ್ಚ್ 6 ಮತ್ತು 7ರಂದು ಅವುಗಳನ್ನು ಸ್ವಾಧೀನಪಡಿಸಿಕೊಳ್ಳಲು ಅಧಿಕೃತ ಅಧಿಕಾರಿಗಳನ್ನು ನಿಯೋಜಿಸುವಂತೆ ತಮಿಳುನಾಡು ಸರಕಾರಕ್ಕೆ ನಿರ್ದೇಶನ ನೀಡಿತ್ತು. ಈ ಮಧ್ಯೆ, ದೀಪಾ ಮತ್ತು ದೀಪಕ್ ಅವರು ವಿಶೇಷ ನ್ಯಾಯಾಲಯದ ಆದೇಶದ ವಿರುದ್ಧ ಹೈಕೋರ್ಟ್ಗೆ ಮೇಲ್ಮನವಿ ಸಲ್ಲಿಸಿದ್ದರು. ಆಸ್ತಿ ಮತ್ತು ಬೆಲೆ ಬಾಳುವ ವಸ್ತುಗಳ ಹಸ್ತಾಂತರ ಪ್ರಕ್ರಿಯೆಗೆ ಒಂದು ದಿನ ಮೊದಲು 2024ರ ಮಾರ್ಚ್ 5ರಂದು ಹೈಕೋರ್ಟ್ನ ಏಕ ಸದಸ್ಯ ಪೀಠ, ವಿಶೇಷ ನ್ಯಾಯಾಲಯದ ಆದೇಶವನ್ನು ತಡೆಹಿಡಿದಿತ್ತು. ಈಗ ಮೇಲ್ಮನವಿ ವಜಾಗೊಂಡ ಹಿನ್ನೆಲೆಯಲ್ಲಿ ವಿಶೇಷ ನ್ಯಾಯಾಲಯವು ಆಸ್ತಿ ಮತ್ತು ಆಭರಣಗಳನ್ನು ಹಸ್ತಾಂತರಿಸುತ್ತಿದೆ. ಅಕ್ರಮ ಆಸ್ತಿ ಗಳಿಕೆ ಪ್ರಕರಣದ ವಿಚಾರಣೆ ನಡೆಸಿದ್ದ ವಿಶೇಷ ನ್ಯಾಯಾಲಯವು, 2014ರ ಸೆ.27ರಂದು ಜಯಲಲಿತಾ ಅವರಿಗೆ ನಾಲ್ಕು ವರ್ಷ ಜೈಲು ಮತ್ತು 100 ಕೋಟಿ ರೂ. ದಂಡ ವಿಧಿಸಿತ್ತು.