ದಾವಣಗೆರೆ: ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಮಹೇಶ್ ಜೋಶಿ ಅಧಿಕಾರವಧಿಯಲ್ಲಿ ನಡೆದಿರುವ ಅವ್ಯವಹಾರಗಳನ್ನು ಕುರಿತು ತನಿಖೆ ನಡೆಸಬೇಕು. ಇದಕ್ಕಾಗಿ ಸರ್ಕಾರ ಸಮಿತಿಯೊಂದನ್ನು ರಚಿಸಬೇಕು ಎಂದು ಸಾಹಿತಿ ಎಸ್.ಜಿ. ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.
ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಸರ್ವಾಧಿಕಾರಿ ಧೋರಣೆ ಹೊಂದಿರುವ ಅಧ್ಯಕ್ಷರ ವಿರುದ್ಧ ಶಿಸ್ತು ಕ್ರಮ ಜರುಗಿಸಬೇಕು. ಪರಿಷತ್ತಿನಲ್ಲಿ ನಡೆಯುತ್ತಿರುವ ಬೆಳವಣಿಗೆಗಳನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಬೇಕು. ತನಿಖೆ ಪೂರ್ಣಗೊಳ್ಳುವವರೆಗೂ ಅಧ್ಯಕ್ಷರನ್ನು ಅಮಾನತ್ತಿನಲ್ಲಿಟ್ಟು ಆಡಳಿತಾಧಿಕಾರಿ ನೇಮಕ ಮಾಡಬೇಕು. ಸಮಿತಿಯ ವರದಿಯನ್ನು ಆಧರಿಸಿ ಅಧ್ಯಕ್ಷ ಸ್ಥಾನದಿಂದ ಜೋಶಿ ಅವರನ್ನು ವಜಾಗೊಳಿಸಬೇಕು. ಸಾಹಿತ್ಯ ಪರಿಷತ್ತಿಗೆ ಶೀಘ್ರ ಮರು ಚುನಾವಣೆ ನಡೆಸಬೇಕು ಎಂದೂ ಅವರು ಆಗ್ರಹಪಡಿಸಿದ್ದಾರೆ.
ಜೋಶಿ ಅವರು ಅಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯ ಸಂದರ್ಭದಲ್ಲಿ ಪರಿಷತ್ತಿನ ಸ್ವಾಯತ್ತತೆಗೆ ಧಕ್ಕೆ ತರುವಂತೆ ನಡೆದುಕೊಂಡಿದ್ದಾರೆ. ಪಕ್ಷ ರಾಜಕಾರಣವನ್ನು ಬಳಸಿಕೊಂಡು ಸಾಂಸ್ಕೃತಿಕ ವಾತಾವರಣ ಮಲಿನಗೊಳಿಸಿದ್ದಾರೆ. ಪರಿಷತ್ತಿನ ಅಧ್ಯಕ್ಷರಾಗಿ ಸಾಹಿತ್ಯದ ಸೂಕ್ಷ್ಮತೆ, ಸಾಂಸ್ಕೃತಿಕ ಸಂವೇದನಾಶೀಲತೆ ಮರೆತು ವರ್ತಿಸುತ್ತಿದ್ದಾರೆ. ಕನ್ನಡ ಭಾಷೆ, ನಾಡಿಗೆ ಧಕ್ಕೆ ತಂದಿದ್ದಾರೆ ಎಂದು ಅವರು ಆರೋಪಿಸಿದರು.
ಅರಮನೆಗೆ ಸೀಮಿತವಾಗಿದ್ದ ಕಲೆ, ಸಾಹಿತ್ಯ, ಸಂಗೀತವನ್ನು ಶ್ರೀಸಾಮಾನ್ಯರ ಬಳಿಗೆ ತಂದವರು ಮೈಸೂರು ಸಂಸ್ಥಾನದ ನಾಲ್ವಡಿ ಕೃಷ್ಣರಾಜ ಒಡೆಯರ್. ಅವರು ಪರಿಷತ್ತಿಗೆ ಸ್ವಾಯತ್ತತೆ ನೀಡಿ ಪ್ರೋತ್ಸಾಹಿಸಿದ್ದರು. ಸಾಹಿತ್ಯ ಪರಿಷತ್ತನ್ನು ಎಂದಿಗೂ ಅರಮನೆಯ ತಮಟೆಯಾಗಿ ಬಳಸಿಕೊಳ್ಳಲಿಲ್ಲ. ಅವರ ಆಶಯಗಳಿಗೆ ವಿರುದ್ಧವಾಗಿ ಜೋಶಿ ನಡೆದುಕೊಳ್ಳುತ್ತಿದ್ದಾರೆ ಎಂದು ದೂರಿದರು.
ಸಾಹಿತ್ಯ ಪರಿಷತ್ತಿನಲ್ಲಿ 4.5 ಲಕ್ಷಕ್ಕೂ ಅಧಿಕ ಸದಸ್ಯರಿದ್ದಾರೆ. ಹೆಚ್ಚು ಸದಸ್ಯರು ಇರುವ ಸ್ಥಳದಲ್ಲಿ ಸರ್ವ ಸದಸ್ಯರ ಸಭೆ ಕರೆಯುವುದು ಅಧ್ಯಕ್ಷರ ನೈತಿಕ ಜವಾಬ್ದಾರಿ. ಸಾರಿಗೆ ಸೌಲಭ್ಯಕ್ಕೆ ಅನುಕೂಲ ಇಲ್ಲದಿರುವ ಹಾಗೂ ವಸತಿ ಸೌಲಭ್ಯ ಸಮರ್ಪಕವಾಗಿ ಹೊಂದಿರದ ಸಂಡೂರಿನಲ್ಲಿ ಸಭೆ ಕರೆದಿರುವುದರ ಹಿಂದೆ ಹುನ್ನಾರ ಅಡಗಿದೆ ಎಂದು ಸಿದ್ದರಾಮಯ್ಯ ಅವರು ಟೀಕಿಸಿದರು.
ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಅರಿವು ಮತ್ತು ಅಕ್ಷರ ಜಾತ್ರೆಯೇ ಹೊರತು ಮೆರವಣಿಗೆಯಲ್ಲ. ದುಂದು ವೆಚ್ಚಕ್ಕೆ, ರಾಜಕೀಯ ಹಿತಾಸಕ್ತಿಗೆ ಸಾಹಿತ್ಯ ವೇದಿಕೆ ದುರ್ಬಳಕೆ ಮಾಡಿಕೊಳ್ಳಲು ಕನ್ನಡಿಗರು ಅವಕಾಶ ನೀಡುವುದಿಲ್ಲ. ರಾಜ್ಯ ಸರ್ಕಾರವು ಸಮ್ಮೇಳನಕ್ಕೆ ರೂ. 40 ಕೋಟಿ ಅನುದಾನ ನೀಡುವ ಬದಲು ಸರ್ಕಾರಿ ಶಾಲೆಯ ಅಭಿವೃದ್ಧಿಗೆ ಒದಗಿಸಿದರೆ ಅನುಕೂಲವಾಗುತ್ತದೆ ಎಂದು ಅಭಿಪ್ರಾಯಪಟ್ಟರು.
ಜೆಡಿಯು ರಾಜ್ಯ ಘಟಕದ ಅಧ್ಯಕ್ಷ ಮಹಿಮ ಪಟೇಲ್ ಮಾತನಾಡಿ, ಕನ್ನಡ ಸಾಹಿತ್ಯ ಪರಿಷತ್ತು ಸರಿಯಾದ ದಿಕ್ಕಿನಲ್ಲಿ ಸಾಗುತ್ತಿಲ್ಲ. ಈ ಕುರಿತು ಸಾಹಿತಿಗಳು ಧ್ವನಿಯತ್ತಿರುವುದಕ್ಕೆ ನನ್ನ ಬೆಂಬಲವಿದೆ. ಪರಿಷತ್ತು ಸ್ವಾಯತ್ತತೆ ಉಳಿಸಿಕೊಳ್ಳಬೇಕು ಎಂದರು.
ಜೂನ್ 29ರಂದು ಸಂಡೂರಿನಲ್ಲಿ ಹಮ್ಮಿಕೊಂಡಿರುವ ಕಸಾಪ ಸರ್ವ ಸದಸ್ಯರ ಸಭೆಯನ್ನು ತಡೆಯುವುದಾಗಿ ಜಾಣಗೆರೆ ವೆಂಕಟರಾಮಯ್ಯ ಅವರು ಎಚ್ಚರಿಕೆ ನೀಡಿದರು.