ಬೆಂಗಳೂರು: ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ (ಕಸಾಪ) ನಡೆದಿದೆ ಎನ್ನಲಾದ ಹಣಕಾಸಿನ ಅವ್ಯವಹಾರ ಹಾಗೂ ಅಧಿಕಾರ ದುರ್ಬಳಕೆಯ ಆರೋಪಗಳನ್ನು ಕುರಿತು ವಿಚಾರಣೆ ನಡೆಸಲು ಸಹಕಾರ ಇಲಾಖೆ ಆದೇಶ ಹೊರಡಿಸಿದೆ. ಬೆಂಗಳೂರು ನಗರ ಜಿಲ್ಲೆಯ ಸಹಕಾರ ಸಂಘಗಳ ಉಪ ನಿಬಂಧಕ ಪಿ.ಶಶಿಧರ್ ಅವರನ್ನು ವಿಚಾರಣಾಧಿಕಾರಿಯನ್ನಾಗಿ ನೇಮಿಸಿದೆ.
ಕಸಾಪ ಕಾರ್ಯಚಟುವಟಿಕೆಗಳನ್ನು ಕುರಿತು ಹಲವು ದೂರುಗಳು ಸಲ್ಲಿಕೆಯಾಗಿವೆ. ಈ ದೂರುಗಳ ಸತ್ಯಾಸತ್ಯತೆ ಅರಿಯಲು ಕರ್ನಾಟಕ ಸಂಘಗಳ ನೋಂದಣಿ ಕಾಯ್ದೆ 1960ರ ಕಲಂ 25ರ ಅಡಿ 17 ಅಂಶಗಳ ಬಗ್ಗೆ ವಿಚಾರಣೆ ನಡೆಸಲು ನಿರ್ಧರಿಸಿ ಆದೇಶ ಹೊರಡಿಸಲಾಗಿದೆ. ವಿಚಾರಣೆಗೆ 45 ದಿನಗಳ ಕಾಲಮಿತಿ ವಿಧಿಸಲಾಗಿದೆ. ಅಷ್ಟರೊಳಗೆ ವಿಚಾರಣೆ ನಡೆಸಿ, ವರದಿ ಸಲ್ಲಿಸಬೇಕು ಎಂದು ಸಂಘಗಳ ಜಿಲ್ಲಾ ನೋಂದಣಾಧಿಕಾರಿ ಹಾಗೂ ಸಹಕಾರ ಸಂಘಗಳ ಉಪ ನಿಬಂಧಕರು ತಿಳಿಸಿದ್ದಾರೆ.
ಪರಿಷತ್ತಿನ ನಿಯಮ ಹಾಗೂ ನಿಬಂಧನೆಗಳ ಪ್ರಕಾರ ಆಯ್ಕೆಗೊಂಡಿರುವ ಆಡಳಿತ ಮಂಡಳಿಯ ಪದಾಧಿಕಾರಿಗಳಿಗೆ ಮತ್ತು ಜಿಲ್ಲಾ ಪದಾಧಿಕಾರಿಗಳಿಗೆ ಕಸಾಪ ಅಧ್ಯಕ್ಷರು ನಿಯಮ ಬಾಹಿರವಾಗಿ ನೋಟಿಸ್ ಜಾರಿ ಮಾಡುತ್ತಿರುವ ಬಗ್ಗೆ ಮತ್ತು 2022–23ನೇ ಸಾಲಿನಿಂದ ಈವರೆಗೆ ವಾಹನಗಳ ಖರೀದಿ ಮತ್ತು ಮಾರಾಟ ಮಾಡುವಲ್ಲಿ ಆಗಿರುವ ಹಣಕಾಸಿನ ದುರುಪಯೋಗದ ಬಗ್ಗೆ ಪರಿಶೀಲನೆ ನಡೆಸಬೇಕು ಎಂದು ಆದೇಶದಲ್ಲಿ ಸೂಚಿಸಲಾಗಿದೆ.
ಹಾವೇರಿ ಮತ್ತು ಮಂಡ್ಯ ಜಿಲ್ಲೆಯಲ್ಲಿ ನಡೆದ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಲೆಕ್ಕಪತ್ರಗಳನ್ನು ಇದುವರೆಗೂ ಸಲ್ಲಿಸಿಲ್ಲ. ಈ ಸಂಬಂಧ ಹಣ ದುರುಪಯೋಗ ಮಾಡಿರುವ ಬಗ್ಗೆ ಪರಿಶೀಲಿಸಬೇಕು. ಪರಿಷತ್ತಿನ ಕಟ್ಟಡದ ನಿರ್ಮಾಣ ಮತ್ತು ನವೀಕರಣದಲ್ಲಿನ ಹಣ ದುರುಪಯೋಗವಾಗಿರುವ ಬಗ್ಗೆ ದೂರು ಸಲ್ಲಿಕೆಯಾಗಿದ್ದು, ವಿಚಾರಣೆ ನಡೆಸಬೇಕು ಎಂದು ಸೂಚನೆ ನೀಡಲಾಗಿದೆ.
ಪರಿಷತ್ತಿನ ಅಧ್ಯಕ್ಷರು ಮತ್ತಿತರರು ನಿಯಮ ಬಾಹಿರವಾಗಿ ವಿದೇಶ ಪ್ರವಾಸ ಕೈಗೊಂಡು, ಹಣ ದುರುಪಯೋಗ ಮತ್ತು ನಷ್ಟ ಮಾಡಿರುವ ಬಗ್ಗೆ, ಪರಿಷತ್ತಿನ ಹಣವನ್ನು ಕಸಾಪ ಅಧ್ಯಕ್ಷರ ಕುಟುಂಬದ ಸದಸ್ಯರ ಕಾರ್ಯಕ್ರಮಗಳಿಗೆ ನಿಯಮ ಬಾಹಿರವಾಗಿ ಬಳಕೆ ಮಾಡಿಕೊಂಡಿರುವ ಬಗ್ಗೆಯೂ ವಿಚಾರಣೆ ನಡೆಯಲಿದೆ.
ಪರಿಷತ್ತಿನ ಚಟುವಟಿಕೆ ಹಣ ಬಳಕೆ ಹಾಗೂ ಅಧಿಕಾರ ದುರುಪಯೋಗದ ಬಗೆಗಿನ ಆರೋಪಗಳನ್ನು ಆದೇಶದಲ್ಲಿ ಉಲ್ಲೇಖಿಸಲಾಗಿದ್ದು ಆ ಬಗ್ಗೆ ವಿಚಾರಣೆ ನಡೆಸುವಂತೆ ವಿಚಾರಣಾಧಿಕಾರಿಗೆ ಸೂಚಿಸಲಾಗಿದೆ. 2022-23ರಿಂದ ಈವರೆಗೆ ಅನುಮೋದಿಸಿರುವ ತಿದ್ದುಪಡಿಗಳು *ಸರ್ಕಾರ ಮತ್ತು ಇತರೆ ಮೂಲಗಳಿಂದ ಪರಿಷತ್ತಿನಲ್ಲಿ ಸಂಗ್ರಹವಾಗಿರುವ ಅನುದಾನವನ್ನು ಪಾರದರ್ಶಕವಾಗಿ ನಿರ್ವಹಿಸದೆ ಹಣ ದುರುಪಯೋಗ ಮಾಡಿರುವುದು ಬೆಳಕಿಗೆ ಬಂದಿದ್ದು ಈ ಸಂಬಂಧವೂ ತನಿಖೆ ನಡೆಯಲಿದೆ.
ವಿವಿಧ ಕಾರ್ಯಕ್ರಮಗಳಿಗಾಗಿ ಜಿಲ್ಲಾ ಘಟಕ ತಾಲ್ಲೂಕು ಘಟಕ ಮತ್ತು ಇತರೆ ಸಂಘ–ಸಂಸ್ಥೆಗಳಿಗೆ ನೀಡಿರುವ ಅನುದಾನವನ್ನು ಪಾರದರ್ಶಕವಾಗಿ ನಿರ್ವಹಿಸದೆ ಹಣ ದುರುಪಯೋಗ ಮಾಡಿರುವುದು ಹಾಗೂ ಕಂಪ್ಯೂಟರ್ ಖರೀದಿ ಸಿ.ಸಿ.ಟಿ.ವಿ ಕ್ಯಾಮೆರಾ ಅಳವಡಿಕೆ ಅಗ್ನಿಶಾಮಕ ಉಪಕರಣದ ಅಳವಡಿಕೆ ಪುಸ್ತಕಗಳ ಮುದ್ರಣಗಳಿಗೆ ಸಂಬಂಧಿಸಿದಂತೆ ಹಣ ದುರ್ಬಳಕೆ ಮಾಡಿರುವ ಬಗ್ಗೆಯೂ ವಿಚಾರಣೆ ನಡೆಯಲಿದೆ.
ಪರಿಷತ್ತಿನಲ್ಲಿ ಸಂಗ್ರಹವಾಗಿರುವ ಕಾರ್ಪೊರೇಟ್ ಕಂಪನಿಗಳ ಸಾಮಾಜಿಕ ಹೊಣೆಗಾರಿಕೆ ನಿಧಿ (ಸಿ ಎಸ್ ಆರ್) ದುರುಪಯೋಗ, ಸಿಬ್ಬಂದಿ ನೇಮಕಾತಿ ಪ್ರಕ್ರಿಯೆಯಲ್ಲಿ ದೋಷಗಳ ಪತ್ತೆ ಮಾಡುವುದು, ಸಂಘದ ಗುರುತಿನ ಚೀಟಿ (ಸ್ಮಾರ್ಟ್ ಕಾರ್ಡ್) ನೀಡುವಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ಕುರಿತು ವಿಚಾರಣೆ ನಡೆಸಲಿದ್ದಾರೆ.