ಬೆಂಗಳೂರು : ಪಶು ವೈದ್ಯಾಧಿಕಾರಿಗಳ ನೇಮಕ ಹಗರಣದ ಹಿನ್ನೆಲೆಯಲ್ಲಿ ಸಿಐಡಿ ಬಂಧಿಸಿರುವ ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ಗಂಗಾವರ್ ಅವರನ್ನು ಕೋರ್ಟ್ ಭಾನುವಾರ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.
ಶನಿವಾರ ಬೆಳಿಗ್ಗೆ 11 ಗಂಟೆಗೆ ತನಿಖಾಧಿಕಾರಿಗಳೆದುರು ಹಾಜರಾದ ಜ್ಞಾನೇಂದ್ರ ಕುಮಾರ್ ಅವರನ್ನು ಸುದೀರ್ಘ ವಿಚಾರಣೆಗೆ ಒಳಪಡಿಸಲಾಗಿತ್ತು. ಬಳಿಕ ತಡರಾತ್ರಿ ಸಿಐಡಿ ಅಧಿಕಾರಿಗಳು ಅವರನ್ನು ವಶಕ್ಕೆ ಪಡೆದು, ಭಾನುವಾರ ಕೋರಮಂಗಲದ ನ್ಯಾಯಾಧೀಶರ ನಿವಾಸಕ್ಕೆ ಹಾಜರುಪಡಿಸಿದ್ದರು. ವಿಚಾರಣೆ ನಡೆಸಿದ ನ್ಯಾಯಾಧೀಶರು, ಜ್ಞಾನೇಂದ್ರ ಕುಮಾರ್ ಅವರಿಗೆ ನ್ಯಾಯಾಂಗ ಬಂಧನ ವಿಧಿಸಿದ್ದು, ಸೋಮವಾರ ಮತ್ತೆ ನ್ಯಾಯಾಲಯದ ಮುಂದೆ ಹಾಜರುಪಡಿಸುವಂತೆ ಸೂಚಿಸಿದ್ದಾರೆ.
ಪಶು ವೈದ್ಯಾಧಿಕಾರಿಗಳ ನೇಮಕಾತಿಯಲ್ಲಿ ಭಾರಿ ಅಕ್ರಮಗಳು ನಡೆದಿವೆ ಎಂದು ಆರೋಪಿಸಿ ಕೆಪಿಎಸ್ಸಿ ಅಧ್ಯಕ್ಷ, ಸದಸ್ಯರ ವಿರುದ್ಧ ಬೆಂಗಳೂರಿನ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ಒಟ್ಟು 4 ಎಫ್ಐಆರ್ಗಳು ದಾಖಲಾಗಿದ್ದವು. ಹಲವು ಅಭ್ಯರ್ಥಿಗಳಿಗೆ ಮಧ್ಯವರ್ತಿಗಳು ಕರೆ ಮಾಡಿ ಹುದ್ದೆ ಕೊಡಿಸಲು 70 ರಿಂದ 80 ಲಕ್ಷ ರೂಪಾಯಿ ಲಂಚದ ಬೇಡಿಕೆ ಇಟ್ಟ ಆರೋಪಕ್ಕೆ ಪುಷ್ಟಿ ನೀಡುವಂತಹ ಆಡಿಯೋ ಸಂಭಾಷಣೆಯ ರೆಕಾರ್ಡಿಂಗ್ಗಳನ್ನು ದೂರುದಾರರು ತನಿಖಾ ಸಂಸ್ಥೆಗೆ ಹಸ್ತಾಂತರಿಸಿದ್ದರು. ಬಳಿಕ ಪ್ರಕರಣವನ್ನು ಸಿಐಡಿ ತನಿಖೆಗೆ ವಹಿಸಲಾಗಿತ್ತು.
ತನಿಖೆ ಕೈಗೊಂಡ ಸಿಐಡಿ ಎಸ್ಪಿ ರಾಘವೇಂದ್ರ ಹೆಗ್ಡೆ ನೇತೃತ್ವದ ತಂಡ ಆ ಸಂದರ್ಭದಲ್ಲಿ ಪರೀಕ್ಷಾ ನಿಯಂತ್ರಕರಾಗಿ ಉಸ್ತುವಾರಿ ವಹಿಸಿದ್ದ ಜ್ಞಾನೇಂದ್ರ ಕುಮಾರ್ ಗಂಗ್ವಾರ್ ಅವರಿಗೆ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿ ನೋಟಿಸ್ ನೀಡಿತ್ತು. ತನಿಖೆ ವೇಳೆ ಲಭ್ಯವಾದ ದಾಖಲೆಗಳನ್ನ ಆಧರಿಸಿ ಕಳೆದ ಎರಡು ದಿನಗಳಿಂದ ಜ್ಞಾನೇಂದ್ರ ಕುಮಾರ್ ಅವರನ್ನು ವಿಚಾರಣೆ ನಡೆಸಲಾಗುತ್ತಿತ್ತು. ಆದರೆ ಕೇಳಲಾದ ಪ್ರಶ್ನೆಗಳಿಗೆ ಜ್ಞಾನೇಂದ್ರ ಕುಮಾರ್ ಅಸ್ಪಷ್ಟ ಉತ್ತರಗಳನ್ನು ನೀಡುತ್ತಿದ್ದುದಲ್ಲದೆ, ತನಿಖೆಗೆ ಸಹಕಾರ ನೀಡದ ಆರೋಪ ಕೇಳಿಬಂದಿತ್ತು. ತಡರಾತ್ರಿ ಜ್ಞಾನೇಂದ್ರ ಕುಮಾರ್ ಅವರನ್ನು ಸಿಐಡಿ ಅಧಿಕಾರಿಗಳು ವಶಕ್ಕೆ ಪಡೆದಿದ್ದರು.ಇದೇ ಪ್ರಕರಣದ ತನಿಖೆ ನಡೆಸುತ್ತಿರುವ ಇ.ಡಿ ಸಹ ಕೆಪಿಎಸ್ಸಿಯ ಮಾಜಿ ಅಧ್ಯಕ್ಷರು, ಸದಸ್ಯರು ಹಾಗೂ ಸಂಬಂಧಿಸಿದ ಅಧಿಕಾರಿಗಳ ಮನೆಗಳ ಮೇಲೆ ದಾಳಿ ಮಾಡಿ ಪರಿಶೀಲನೆ ನಡೆಸಿತ್ತು.

