ಬೆಳಗಾವಿ: ಬಿಜೆಪಿ ನೇತೃತ್ವದ ಎನ್ಡಿಎ ಸರ್ಕಾರದಲ್ಲೇ ಗೊಂದಲಗಳು ಉಂಟಾಗಿದ್ದು ಪ್ರಧಾನಿ ಮೋದಿ ವಿರುದ್ಧ ಬಿಜೆಪಿ ಸಚಿವರು ಅಸಮಾಧಾನಗೊಂಡಿದ್ದಾರೆ. ಹಾಗಾಗಿ ಪ್ರಧಾನಿ ಸ್ಥಾನಕ್ಕೆ ಆಂಧ್ರಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರನ್ನು ಕೂರಿಸಬಹುದು ಎಂದು ಕಾರ್ಮಿಕ ಸಚಿವ ಸಂತೋಷ ಲಾಡ್ ಭವಿಷ್ಯ ನುಡಿದಿದ್ದಾರೆ. ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಕುರಿತು ಕೇಳಿದ ಪ್ರಶ್ನೆಗೆ ಅವರು ಹೀಗೆ ಉತ್ತರಿಸಿದರು.
ಬಿಜೆಪಿ ನಾಯಕರು ಮೋದಿ ಸಾಧನೆ ಬಗ್ಗೆ ಮಾತ್ರ ಮಾತನಾಡುತ್ತಾರೆ. ಆದರೆ, ಯಾರೂ ಉಳಿದ ಯಾವೊಬ್ಬ ನಾಯಕರ ಸಾಧನೆ ಕುರಿತು ಮಾತನಾಡುವುದೇ ಇಲ್ಲ. ಕೇಂದ್ರದಲ್ಲಿ ಬಿಜೆಪಿಗೆ ಬಹುಮತ ಇಲ್ಲ. ಹಾಗಾಗಿ ಪ್ರಧಾನಿ ಮೋದಿ ಬದಲಾವಣೆ ಆಗಬಹುದು ಎಂಬ ಚರ್ಚೆ ನಡೆಯುತ್ತಿದೆ. ಈ ಬಗ್ಗೆಯೂ ನೀವು ಕೇಳಬೇಕು ಎಂದು ಮಾಧ್ಯಮಗಳಿಗೆ ಹೇಳಿದರು.
11 ವರ್ಷ ವಿಶ್ವಗುರು ನೋಡಿದ್ದೇವೆ. ಅವರನ್ನು ಕೆಳಗಿಳಿಸಲಿ. ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರನ್ನು ಪ್ರಧಾನಿ ಮಾಡಿದರೂ ನಮ್ಮ ಅಭ್ಯಂತರವೇನೂ ಇಲ್ಲ ಎಂದೂ ಲಾಡ್ ಹೇಳಿದರು.