ಕುಸಿದ ಮಾವು ಬೆಲೆ: ಬೆಂಬಲ ಬೆಲೆ ಘೋಷಿಸಲು ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಗೆ ಸಿಎಂ ಸಿದ್ದರಾಮಯ್ಯ ಮನವಿ

Most read

ಬೆಂಗಳೂರು: ಕರ್ನಾಟಕದ ಮಾವು ಬೆಳೆಗಾರರಿಗೆ ತುರ್ತು ಬೆಲೆ ಕೊರತೆ ಪಾವತಿ ಮತ್ತು ಮಾರುಕಟ್ಟೆ ಮಧ್ಯಸ್ಥಿಕೆ ಯೋಜನೆ ಜಾರಿಗೆ ತರುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರಿಗೆ ಮನವಿ ಮಾಡಿಕೊಂಡಿದ್ದಾರೆ.

ಮಾರುಕಟ್ಟೆಯಲ್ಲಿ ಮಾವಿನ ಬೆಲೆ ತೀವ್ರ ಕುಸಿತ ಕಂಡ ಹಿನ್ನೆಲೆಯ್ಲಲಿ ರಾಜ್ಯದ ಮಾವು ಬೆಳೆಗಾರರು ಎದುರಿಸುತ್ತಿರುವ ಸಂಕಷ್ಟ ಕುರಿತು ಮುಖ್ಯಮಂತ್ರಿಗಳು ಕೇಂದ್ರ ಸಚಿವರಿಗೆ ಪತ್ರ ಬರೆದಿದ್ದಾರೆ.

ರಾಜ್ಯದ ತೋಟಗಾರಿಕಾ ಬೆಳೆಗಳಲ್ಲಿ ಮಾವು ಕೂಡ ಒಂದಾಗಿದ್ದು, ಸುಮಾರು 1.39 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬೆಳೆಯಲಾಗುತ್ತದೆ. ಈ ಅವಧಿಯಲ್ಲಿ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಕೋಲಾರ ಮತ್ತು ಬೆಂಗಳೂರು ದಕ್ಷಿಣ ಜಿಲ್ಲೆಗಳಲ್ಲಿ 8 ರಿಂದ 10 ಲಕ್ಷ ಮೆಟ್ರಿಕ್ ಟನ್ ಉತ್ಪಾದನೆಯ ಅಂದಾಜು ಇದೆ.

ಮೇ ನಿಂದ ಜುಲೈವರೆಗೆ ಮಾವಿನ ಸುಗ್ಗಿಯಾಗಿದ್ದು, ಮಾರುಕಟ್ಟೆಗೆ ಹೆಚ್ಚಿನ ಪ್ರಮಾಣದಲ್ಲಿ ಮಾವು ಪೂರೈಕೆಯಾಗುತ್ತದೆ. ಈ ಹಿಂದೆ ಕ್ವಿಂಟಲ್‌ ಗೆ 12,000 ರೂ. ಗಳಷ್ಟಿದ್ದ ದರ ಈಗ ಕ್ವಿಂಟಲ್‌ ಗೆ 3,000 ರೂ. ಗೆ ಇಳಿದಿವೆ. ಆದರೆ, ರಾಜ್ಯ ಕೃಷಿ ಬೆಲೆ ಆಯೋಗವು ಕೃಷಿ ವೆಚ್ಚವನ್ನು ಕ್ವಿಂಟಲ್‌ಗೆ 5,466 ರೂ.ಗಳಿಗೆ ಶಿಫಾರಸು ಮಾಡಿದೆ. ಉತ್ಪಾದನಾ ವೆಚ್ಚ ಮತ್ತು ಮಾರುಕಟ್ಟೆ ಏರಿಳಿತಗಳ ನಡುವಿನ ಈ ತೀವ್ರ ಹೊಂದಾಣಿಕೆಯು ರೈತ ಸಮುದಾಯವನ್ನು ತೀವ್ರ ಆರ್ಥಿಕ ಒತ್ತಡಕ್ಕೆ ಸಿಲುಕಿಸಿದೆ ಎಂದು ಅವರು ಪತ್ರದಲ್ಲಿ ವಿವರಿಸಿದ್ದಾರೆ.

ಸಾವಿರಾರು ಸಣ್ಣ ಮತ್ತು ಅತಿ ಸಣ್ಣ ಮಾವು ಬೆಳೆಗಾರರು ತಮ್ಮ ಮೂಲ ವೆಚ್ಚವನ್ನೂ ಹಿಂಪಡೆಯಲು ಸಾಧ್ಯವಾಗುತ್ತಿಲ್ಲ. ಇದು ರೈತರಲ್ಲಿ ಆತಂಕ ಮೂಡಿಸಿದೆ ಮತ್ತು ಆಕ್ರೋಶಕ್ಕೆ ಕಾರಣವಾಗಿದೆ. ಆದ್ದರಿಂದ ಕೂಡಲೇ ತ್ವರಿತ ಮತ್ತು ಪರಿಣಾಮಕಾರಿ ಕ್ರಮಗಳನ್ನು ಕೈಗೊಳ್ಳದಿದ್ದರೆ  ಈ ಬಿಕ್ಕಟ್ಟು ಗಂಭೀರ ಸಾಮಾಜಿಕ ಆರ್ಥಿಕ ಪರಿಣಾಮಗಳಿಗೆ ಕಾರಣವಾಗಬಹುದು ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

ಈ ಗಂಭೀರ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು, ಮಾವಿನಹಣ್ಣಿಗೆ ಮಾರುಕಟ್ಟೆ ಹಸ್ತಕ್ಷೇಪ ಯೋಜನೆ (ಎಂಐಎಸ್) ಅಡಿಯಲ್ಲಿ ಬೆಲೆ ಕೊರತೆ ಪಾವತಿ ಯೋಜನೆ (ಪಿಡಿಪಿಎಸ್) ಜಾರಿಗೆ ತರಲು ತಕ್ಷಣದ ಕ್ರಮಗಳನ್ನು ತೆಗೆದುಕೊಳ್ಳಬೇಕೆಂದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮನವಿ ಮಾಡಿಕೊಂಡಿದ್ದಾರೆ.

ರೈತರು ಹಾಕಿದ ಬಂಡವಾಳವನ್ನಾದರೂ ಹಿಂಪಡೆಯಲು ಸೂಕ್ತ ಮಧ್ಯಸ್ಥಿಕೆ ಬೆಲೆಯಲ್ಲಿ ಖರೀದಿ ಪ್ರಾರಂಭಿಸಲು NAFED ಮತ್ತು NCCF ನಂತಹ ಕೇಂದ್ರ ಖರೀದಿ ಸಂಸ್ಥೆಗಳಿಗೆ ಅಗತ್ಯ ನಿರ್ದೇಶನಗಳನ್ನು ನೀಡಬೇಕು ಎಂದೂ ಅವರು ಕೋರಿದ್ದಾರೆ.

More articles

Latest article