ಬೆಂಗಳೂರು: ನೋಂದಣಿರಹಿತ ಮತ್ತು ಪರವಾನಗಿರಹಿತ ಮೈಕ್ರೊ ಫೈನಾನ್ಸ್ ಕಂಪನಿಗಳು ಮತ್ತು ಲೇವಾದೇವಿದಾರರು ನೀಡಿರುವ ಸಾಲದ ಅಸಲು ಹಾಗೂ ಬಡ್ಡಿಯ ಮೊತ್ತವನ್ನು ಸಾಲಗಾರರು ಮರುಪಾವತಿ ಮಾಡಬೇಕಿಲ್ಲ ಎಂಬ ನಿಯಮವನ್ನು ಜಾರಿಗೆ ತರಲು ರಾಜ್ಯ ಸರ್ಕಾರ ಮುಂದಾಗಿದೆ. ಈ ಅಂಶವನ್ನು ಮೈಕ್ರೊ ಫೈನಾನ್ಸ್ ಕಂಪನಿಗಳ ನಿಯಂತ್ರಣಕ್ಕೆ ಸಂಬಂಧಿಸಿದ ಸುಗ್ರೀವಾಜ್ಞೆ ಕರಡಿನಲ್ಲಿ ಸೇರಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.
ಮೈಕ್ರೊ ಫೈನಾನ್ಸ್ ಕಂಪನಿಗಳು ಮತ್ತು ಲೇವಾದೇವಿದಾರರು ನೀಡುತ್ತಿರುವ ಕಿರುಕುಳದಿಂದ ಸಾಲಗಾರರನ್ನು ರಕ್ಷಿಸುವ ಉದ್ದೇಶದಿಂದ ‘ಕರ್ನಾಟಕ ಮೈಕ್ರೊ ಫೈನಾನ್ಸ್ (ಬಲವಂತದ ಕ್ರಮಗಳ ತಡೆ) ಸುಗ್ರೀವಾಜ್ಞೆ–2025’ ಅನ್ನು ಹೊರಡಿಸಲು ರಾಜ್ಯ ಸರ್ಕಾರ ನಿರ್ಧರಿಸಿದ್ದು, ಸುಗ್ರೀವಾಜ್ಞೆಯ ಕರಡು ಬಹುತೇಕ ಅಂತಿಮಗೊಳಿಸಲಾಗಿದೆ.
ನೋಂದಣಿರಹಿತ ಮತ್ತು ಪರವಾನಗಿರಹಿತ ಮೈಕ್ರೊ ಫೈನಾನ್ಸ್ ಕಂಪನಿಗಳು, ಲೇವಾದೇವಿದಾರರು ನೀಡಿರುವ ಸಾಲ ಹಾಗೂ ಬಡ್ಡಿ ವಸೂಲಿಗೆ ಸಂಬಂಧಿಸಿದಂತೆ ಸಾಲಗಾರರ ಮೇಲೆ ಯಾವುದೇ ಸಿವಿಲ್ ನ್ಯಾಯಾಲಯದಲ್ಲಿ ಪ್ರಕರಣ ದಾಖಲಿಸಲು ಅವಕಾಶವಿರುವುದಿಲ್ಲ. ಇದೇ ವಿಷಯಕ್ಕೆ ಸಂಬಂಧಿಸಿದಂತೆ ಅರ್ಜಿ ಸಲ್ಲಿಸಿದ ಮತ್ತು ವಿಚಾರಣಾ ಹಂತದಲ್ಲಿ ಇರುವ ಎಲ್ಲ ಪ್ರಕರಣಗಳೂ ಸುಗ್ರೀವಾಜ್ಞೆ ಜಾರಿಯಾದ ಕ್ಷಣದಿಂದ ರದ್ದುಗೊಳ್ಳಲಿವೆ ಎಂಬ ಅಂಶವೂ ಕರಡಿನಲ್ಲಿ ಸೇರಸಲಾಗಿದೆ.
ಸುಗ್ರೀವಾಜ್ಞೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅನುಮೋದನೆ ನೀಡಿದ ಬಳಿಕ ರಾಜ್ಯಪಾಲ ಥಾವರಚಂದ್ ಗೆಹಲೋತ್ ಅವರ ಅಂಕಿತಕ್ಕೆ ಕಳುಹಿಸಲಾಗುವುದು ಎಂದು ಉನ್ನತ ಅಧಿಕಾರಿಗಳು ತಿಳಸಿದ್ದಾರೆ.
ಸಾಲಗಾರರಿಗೆ ಹಿಂಸೆ, ಕಿರುಕುಳ ನೀಡುವ ಮೈಕ್ರೊ ಫೈನಾನ್ಸ್ ಕಂಪನಿಗಳು ಅಥವಾ ಲೇವಾದೇವಿದಾರರಿಗೆ ಆರು ತಿಂಗಳಿಗಿಂತ ಕಡಿಮೆ ಇಲ್ಲದ, ಮೂರು ವರ್ಷದವರೆಗೆ ವಿಸ್ತರಿಸಬಹುದಾದ ಜೈಲು ಶಿಕ್ಷೆ ಮತ್ತು ರೂ.5 ಲಕ್ಷದವರೆಗೆ ವಿಸ್ತರಿಸಬಹುದಾದ ದಂಡ ವಿಧಿಸಲು ಅವಕಾಶ ಕಲ್ಪಿಸಲಾಗಿದೆ. ಅಲ್ಲದೆ, ನೋಂದಣಿ ಪ್ರಾಧಿಕಾರವು ಅಂತಹ ಸಂಸ್ಥೆಗಳ ನೋಂದಣಿಯನ್ನು ಅಮಾನತು ಅಥವಾ ರದ್ದುಪಡಿಸುವ ಕಠಿಣ ನಿಯಮ ಕೂಡಾ ಈ ಸುಗ್ರೀವಾಜ್ಞೆಯಲ್ಲಿದೆ.
ಸಾಲಗಾರರ ಮೇಲೆ ದೌರ್ಜನ್ಯ ಎಸಗುವ ಮೈಕ್ರೊ ಫೈನಾನ್ಸ್ ಕಂಪನಿಗಳು ಅಥವಾ ಲೇವಾದೇವಿದಾರಿಗೆ ಮೂರು ವರ್ಷದವರೆಗೆ ಜೈಲು ಮತ್ತು ರೂ.1 ಲಕ್ಷವರೆಗೆ ದಂಡ ವಿಧಿಸಲು ಅವಕಾಶ ಕಲ್ಪಿಸುವ ಸುಗ್ರೀವಾಜ್ಞೆ ಹೊರಡಿಸುವ ಕುರಿತು ಕಳೆದ ವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ನಡೆಸಲಾಗಿತ್ತು. ಆದರೆ, ಚರ್ಚೆಯ ಸಂದರ್ಭದಲ್ಲಿ ಕೆಲವು ತಾಂತ್ರಿಕ ಸಮಸ್ಯೆಗಳು ಪ್ರಸ್ತಾಪಗೊಂಡ ಕಾರಣ ಮತ್ತು ನಿಯಮಗಳನ್ನು ಇನ್ನಷ್ಟು ಬಿಗಿಗೊಳಿಸಬೇಕೆಂಬ ಕಾರಣಕ್ಕೆ ಕಾನೂನು ಸಚಿವ ಎಚ್.ಕೆ. ಪಾಟೀಲ, ಗೃಹ ಸಚಿವ ಜಿ. ಪರಮೇಶ್ವರ, ಸಹಕಾರ ಸಚಿವ ಕೆ.ಎನ್. ರಾಜಣ್ಣ ಮತ್ತು ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಜೊತೆ ಮುಖ್ಯಮಂತ್ರಿಗಳು ಸಭೆ ನಡೆಸಿದ್ದರು.
ವರದಿಯ ಮುಖ್ಯಾಂಶಗಳು:
- ಎಲ್ಲ ಮೈಕ್ರೊ ಫೈನಾನ್ಸ್ ಕಂಪನಿಗಳು, ಲೇವಾದೇವಿದಾರ ಸಂಸ್ಥೆಗಳು ಸುಗ್ರೀವಾಜ್ಞೆ ಹೊರಡಿಸಿದ 30 ದಿನಗಳ ಒಳಗೆ ಆಯಾ ನೋಂದಣಿ ಪ್ರಾಧಿಕಾರದಲ್ಲಿ (ಜಿಲ್ಲಾಧಿಕಾರಿ) ನೋಂದಣಿ ಮಾಡಿಕೊಳ್ಳಬೇಕು
- ಸಾಲಗಾರರ ಸಂಪೂರ್ಣ ಮಾಹಿತಿ, ಸಾಲದ ಮೊತ್ತ, ಬಡ್ಡಿ ದರ, ವಸೂಲಿಗೆ ಬಾಕಿ, ಸಾಲ ಪಡೆಯುವಾಗ ಸಂಗ್ರಹಿಸಿದ ಲಿಖಿತ ಮುಚ್ಚಳಿಕೆ ನೀಡಬೇಕು
- ಸುಗ್ರೀವಾಜ್ಞೆ ಜಾರಿಯಾದ ಬಳಿಕ ಮೈಕ್ರೊ ಫೈನಾನ್ಸ್ ಕಂಪನಿ, ಲೇವಾ ದೇವಿದಾರರು ನೋಂದಣಿ ಮಾಡದೆ ಸಾಲ ವಹಿವಾಟು ಮಾಡುವಂತಿಲ್ಲ
- ನೋಂದಣಿ ಅವಧಿ ಒಂದು ವರ್ಷ ಮಾತ್ರ. ಅವಧಿ ಮುಗಿಯುವ 60 ದಿನಗಳ ಮೊದಲು ಮರು ನವೀಕರಣಕ್ಕೆ ಅರ್ಜಿ ಸಲ್ಲಿಸಬೇಕು. ಅರ್ಜಿ ಪರಿಶೀಲಿಸಿದ ಬಳಿಕ ಪ್ರಾಧಿಕಾರವು ಈ ಬಗ್ಗೆ ನಿರ್ಧಾರ ತೆಗೆದುಕೊಳ್ಳಲಿದೆ
- ದೂರು ಬಂದರೆ ಅಥವಾ ಸ್ವಯಂಪ್ರೇರಿತವಾಗಿ ನೋಂದಣಿ ರದ್ದು ಮಾಡುವ ಅಧಿಕಾರವು ಪ್ರಾಧಿಕಾರಕ್ಕೆ ಇರಲಿದೆ
- ಸುಗ್ರೀವಾಜ್ಞೆಯಲ್ಲಿರುವ ಯಾವುದೇ ನಿಯಮವನ್ನು ಉಲ್ಲಂಘಿಸಿದರೆ, ಪ್ರಾಧಿಕಾರವು ನೋಟಿಸ್ ನೀಡದೆ ನೋಂದಣಿಯನ್ನು ಅಮಾನತು ಅಥವಾ ರದ್ದು ಮಾಡಬಹುದು
- ಸಾಲ ನೀಡುವ ಮತ್ತು ವಸೂಲು ಮಾಡುವ ನಿಯಮಗಳನ್ನು ಅಧಿಸೂಚನೆ ಮೂಲಕ ಸರ್ಕಾರ ರೂಪಿಸಬಹುದು
- ಸಾಲಗಾರರಿಂದ ಭದ್ರತೆಯಾಗಿ ಯಾವುದೇ ವಸ್ತು ಅಥವಾ ಆಸ್ತಿ ಅಡಮಾನ ಇಟ್ಟುಕೊಳ್ಳಬಾರದು. ಅಡಮಾನ ಇಟ್ಟು ಕೊಂಡಿದ್ದರೆ ಅದನ್ನು ಸಾಲಗಾರರಿಗೆ ಹಿಂದಿರುಗಿಸಬೇಕು
- ಸಾಲಗಾರರು ಅಥವಾ ಅವರ ಕುಟುಂಬದ ಸದಸ್ಯರ ಮೇಲೆ ಒತ್ತಡ ಹೇರುವುದು, ಅವಮಾನಿಸುವುದು, ಅಡ್ಡಿಪಡಿಸುವುದು, ಹಿಂಸಿಸುವುದು
- ಸಾಲಗಾರರು ಅಥವಾ ಅವರ ಕುಟುಂಬದ ಸದಸ್ಯರನ್ನು ನಿರಂತರವಾಗಿ ಹಿಂಬಾಲಿಸುವುದು, ಅವರ ಸ್ವಾಧೀನ ದಲ್ಲಿರುವ ಸ್ವತ್ತುಗಳ ಬಳಕೆಗೆ ಅಡ್ಡಿಪಡಿಸುವುದು
- ಸಾಲಗಾರರು ಅಥವಾ ಅವರ ಕುಟುಂಬದವರು ವಾಸಿಸುವ, ಕೆಲಸ ಮಾಡುವ ಸ್ಥಳಕ್ಕೆ ನಿರಂತರವಾಗಿ ಭೇಟಿ ನೀಡಿ ಚಟುವಟಿಕೆಗಳಿಗೆ ಅಡ್ಡಿಪಡಿಸುವುದು
- ಬಲವಂತದಿಂದ ಸಾಲ ವಸೂಲಿ ಮಾಡಲು ಹೊರಗುತ್ತಿಗೆ ಸಿಬ್ಬಂದಿ ಬಳಕೆ, ಅಪರಾಧ ಹಿನ್ನೆಲೆಯ ವ್ಯಕ್ತಿಗಳನ್ನು ಬಳಸಿಕೊಳ್ಳುವುದು
- ಸಾಲಗಾರನು ಸರ್ಕಾರದಿಂದ ಯಾವುದೇ ಸೌಲಭ್ಯ ಪಡೆಯಲು ಅಗತ್ಯವಿರುವ ದಾಖಲೆಗಳನ್ನು ಸಾಲದಾತ ಅಥವಾ ಅವರ ಸಿಬ್ಬಂದಿ ಕಿತ್ತುಕೊಳ್ಳುವುದು