ಬ್ಯಾಂಕಾಕ್: ಥಾಯ್ಲೆಂಡ್ ಮತ್ತು ಮ್ಯಾನ್ಮಾರ್ ದೇಶಗಳಲ್ಲಿ ಸಂಭವಿಸಿದ ಭೂಕಂಪಕ್ಕೆ ಮೃತರು ಮತ್ತು ಗಾಯಗೊಂಡವರ ಸಂಖ್ಯೆ ಗಂಟೆ ಗಂಟೆಗೂ ಏರುತ್ತಲೇ ಇರುವುದು ಗಾಬರಿ ಮೂಡಿಸಿದೆ. ಭೂಕಂಪದಿಂದಾಗಿ ಮ್ಯಾನ್ಮಾರ್ನಲ್ಲಿ ಮೃತಪಟ್ಟವರ ಸಂಖ್ಯೆ 694ಕ್ಕೆ ಏರಿಕೆಯಾಗಿದ್ದು, 1,670 ಜನರು ಗಾಯಗೊಂಡಿದ್ದಾರೆ ಎಂದು ಅಲ್ಲಿನ ಸರ್ಕಾರದ ವಕ್ತಾರರು ತಿಳಿಸಿದ್ದಾರೆ. ಥಾಯ್ಲೆಂಡ್ ಮತ್ತು ಮ್ಯಾನ್ಮಾರ್ ದೇಶಗಳಲ್ಲಿ ಶುಕ್ರವಾರ 7.7ರಷ್ಟು ತೀವ್ರತೆಯ ಭೂಕಂಪನ ಸಂಭವಿಸಿದ್ದು, ಜನರನ್ನು ಬೆಚ್ಚಿಬೀಳಿಸಿದೆ.
ಭೂಕಂಪದಿಂದಾಗಿ ಮೂಭೂತ ಸೌಕರ್ಯಗಳಾದ ರಸ್ತೆಗಳು, ಸೇತುವೆಗಳು ಮತ್ತು ಕಟ್ಟಡಗಳು ಹಾನಿಗೊಳಗಾಗಿದ್ದು, ಸಂಚಾರಕ್ಕೆ ಅಡಚಣೆ ಉಂಟಾಗಿದೆ. ಜನರ ಸಾವುನೋವು ಮತ್ತು ಗಾಯಾಳುಗಳ ಸಂಖ್ಯೆ ಏರಿಕೆಯಾಗುತ್ತಿರುವುದು ಸರ್ಕಾರಕ್ಕೆ ಆತಂಕ ಮೂಡಿಸಿದೆ. ಭೂಕಂಪ ಪೀಡಿತ ಪ್ರದೇಶಗಳಲ್ಲಿ ರಕ್ಷಣಾ ಕಾರ್ಯಾಚರಣೆ ನಡೆಸಲಾಗುತ್ತಿದೆ ಎಂದು ಸರ್ಕಾರ ತಿಳಿಸಿದೆ. ಭೂಕಂಪ ಪೀಡಿತ ಥಾಯ್ಲೆಂಡ್ ಮತ್ತು ಮ್ಯಾನ್ಮಾರ್ ದೇಶಗಳಿಗೆ ಭಾರತ, ಚೀನಾ, ರಷ್ಯಾ, ಅಮೆರಿಕ ಸೇರಿದಂತೆ ಹಲವು ರಾಷ್ಟ್ರಗಳು ನೆರವು ನೀಡುವುದಾಗಿ ಘೋಷಿಸಿವೆ.
ಥಾಯ್ಲೆಂಡ್ ರಾಜಧಾನಿ ಬ್ಯಾಂಕಾಕ್ನಲ್ಲಿ ನಿರ್ಮಾಣ ಹಂತದ 30 ಮಹಡಿಯ ಸರ್ಕಾರಿ ಕಟ್ಟಡ ನೆಲಕ್ಕುರುಳಿದೆ. ಮ್ಯಾನ್ಮಾರ್ ಸರ್ಕಾರವು 6 ವಲಯಗಳಲ್ಲಿ ತುರ್ತುಪರಿಸ್ಥಿತಿ ಘೋಷಿಸಿದೆ. ಮ್ಯಾನ್ಮಾರ್ನ 2ನೇ ಅತಿದೊಡ್ಡ ನಗರವಾಗಿರುವ ಮ್ಯಾಂಡಲೆ ಭೂಕಂಪದ ಕೇಂದ್ರಬಿಂದುವಾಗಿದೆ.
ಅಮೆರಿಕದ ಭೂವಿಜ್ಞಾನ ಕೇಂದ್ರದ ಪ್ರಕಾರ, ಕೇಂದ್ರ ಬಿಂದುವಿನಲ್ಲಿ ಸುಮಾರು 10 ಕಿ.ಮೀ ಆಳದಲ್ಲಿ ಭೂಕಂಪನವಾಗಿದೆ. ಅದರ ತೀವ್ರತೆಯು ಕೇಂದ್ರಬಿಂದುವಿನಿಂದ 10 ಕಿ.ಮೀ ಪರಿಧಿಯಲ್ಲಿ ವ್ಯಕ್ತವಾಗಿದೆ ಎಂದು ಅಂದಾಜು ಮಾಡಿದೆ.
ಮೊದಲಿಗೆ 7.7 ತೀವ್ರತೆಯ ಭೂಕಂಪನವಾಗಿದ್ದು, 11 ನಿಮಿಷದ ತರುವಾಯ ಮತ್ತೆ 6.4 ತೀವ್ರತೆಯ ಭೂಕಂಪ ಸಂಭವಿಸಿರುವುದು ದಾಖಲಾಗಿದೆ. 7.7 ತೀವ್ರತೆಯು ಹೆಚ್ಚು ಪ್ರಬಲವಾದದ್ದು ಎಂದು ಕೇಂದ್ರವು ವಿಶ್ಲೇಷಿಸಿದೆ. ಭೂಕಂಪದ ಅನುಭವವಾದಂತೆ ಬ್ಯಾಂಕಾಕ್ ನಗರದಲ್ಲಿ ಎಚ್ಚರಿಕೆ ಗಂಟೆಯನ್ನು ಮೊಳಗಿಸಲಾಯಿತು. ಬ್ಯಾಂಕಾಕ್ನ ಒಟ್ಟು ಜನಸಂಖ್ಯೆ 1.7 ಕೋಟಿಗೂ ಹೆಚ್ಚಿದ್ದು, ಹೆಚ್ಚಿನವರು ಬಹುಮಹಡಿ ವಸತಿ ಸಂಕೀರ್ಣಗಳಲ್ಲಿಯೇ ವಾಸವಿದ್ದಾರೆ.