ಬೆಂಗಳೂರು: ಕರ್ನಾಟಕದಲ್ಲಿ ನಡೆಸಿದ ಜಾತಿ ಗಣತಿ ವರದಿ 10 ವರ್ಷಗಳಷ್ಟು ಹಳೆಯದಾಗಿದ್ದು, ಹೊಸದಾಗಿ ಜಾತಿಗಣತಿ ನಡೆಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ. ಜಾತಿಗಣತಿಗೆ ಸಾಕಷ್ಟು ಅಪಸ್ವರ ಕೇಳಿ ಬಂದ ಬೆನ್ನಲ್ಲೇ ಪಕ್ಷದ ವರಿಷ್ಠರು ಹೊಸದಾಗಿ ಜಾತಿ ಗಣತಿ ನಡೆಸಲು ಮುಖ್ಯಮಂತ್ರಿ ಸಿದ್ದರಾಯ್ಯ ಮತ್ತು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರಿಗೆ ಸೂಚನೆ ನೀಡಿದ್ದಾರೆ. ಕಾಲಮಿತಿಯಲ್ಲಿ ಜಾತಿಗಣತಿ ನಡೆಸಲೂ ವರಿಷ್ಠರು ಸಲಹೆ ನೀಡಿದ್ದಾರೆ.
ಈ ನಿಟ್ಟಿನಲ್ಲಿ ಜಾತಿಗಣತಿ ಕುರಿತು ಚರ್ಚಿಸಲು ಜೂನ್ 12 , ನಾಡಿದ್ದು ಗುರುವಾರ ಮಹತ್ವದ ಸಚಿವ ಸಂಪುಟ ಸಭೆ ನಡೆಯಲಿದೆ.
ಸಚಿವ ಸಂಪುಟ ಸಭೆಯಲ್ಲಿ ಜಾತಿ ಗಣತಿಯ ಬಗ್ಗೆ ಮಹತ್ವದ ನಿರ್ಧಾರವನ್ನು ಕೈಗೊಳ್ಳುವ ಸಾಧ್ಯತೆ ಇದೆ. ಜಾತಿ ಗಣತಿಯ ಅಂಕಿ ಅಂಶಗಳನ್ನು ಕುರಿತು ಪ್ರಭಾವಿ ಸಮುದಾಯಗಳಾದ ವೀರಶೈವ ಲಿಂಗಾಯತ ಮತ್ತಿತರ ಸಮುದಾಯಗಳು ವಿರೋಧ ವ್ಯಕ್ತಪಡಿಸಿದ್ದವು. ಈ ವರದಿಯಲ್ಲಿ ಜಾತಿ ಜಾತಿಗಳ ಜನಸಂಖ್ಯೆ ಕುರಿತು ಗೊಂದಲ ಇದೆ ಎಂದು ಅಸಮಾಧಾನವನ್ನು ಹೊರಹಾಕಿದ್ದವು. ಈ ನಿಟ್ಟಿನಲ್ಲಿ ಗುರುವಾರದ ಸಚಿವ ಸಂಪುಟ ಸಭೆ ಸಾಕಷ್ಟು ಮಹತ್ವ ಪಡೆದುಕೊಂಡಿದೆ.
ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಪ್ರತಿಕ್ರಿಯಿಸಿ ಜಾತಿ ಗಣತಿಯ ಮರು ಸಮೀಕ್ಷೆಗೆ ತೀರ್ಮಾನ ಮಾಡಲಾಗಿದೆ. ಮರು ಸಮೀಕ್ಷೆ ಮಾಡುವ ಸಂದರ್ಭದಲ್ಲಿ ಎಲ್ಲರೂ ಇದರಲ್ಲಿ ಭಾಗಿಯಾಗಬೇಕು ಎಂದು ಮನವಿ ಮಾಡಿದ್ದಾರೆ.
ಜಾತಿಗಣತಿ ಕುರಿತು ಯಾರಿಗೂ ಆತಂಕ ಬೇಡ. ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಳ್ಳಬೇಕು ಎನ್ನುವುದೇ ನಮ್ಮ ಸರ್ಕಾರದ ಉದ್ದೇಶವಾಗಿದೆ ಎಂದೂ ತಿಳಿಸಿದ್ದಾರೆ.
ಸಿಎಂ ಡಿಸಿಎಂ ಜತೆ ಚರ್ಚೆ ನಡೆಸಿದ ನಂತರ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ ವೇಣುಗೋಪಾಲ್ ಮಾತನಾಡಿ, ಇಂದಿನ ಸಭೆಯಲ್ಲಿ ಜಾತಿ ಜನಗಣತಿ ಕುರಿತು ಚರ್ಚೆ ಮಾಡಿದ್ದೇವೆ. ಜೂನ್ 12 ರಂದು ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಸರ್ಕಾರ ನಿರ್ಧಾರ ಕೈಗೊಳ್ಳಲಿದೆ ಎಂದು ತಿಳಿಸಿದ್ದಾರೆ.