ನವದೆಹಲಿ: ಪ್ರಧಾನಮಂತ್ರಿ ಸ್ವಾಸ್ಥ್ಯ ಸುರಕ್ಷಾ ಯೋಜನೆಯಡಿ ಕರ್ನಾಟಕ ರಾಜ್ಯಕ್ಕೆ ಏಮ್ಸ್ ಸ್ಥಾಪನೆಗೆ ಅನುಮೋದನೆ ನೀಡಿಲ್ಲ ಎಂದು ಕೇಂದ್ರ ಆರೊಗ್ಯ ಸಚಿವಾಲಯ ತಿಳಿಸಿದೆ.
ರಾಜ್ಯದಲ್ಲಿ ಏಮ್ಸ್ ಸ್ಥಾಪನೆ ಕುರಿತು ಲೋಕಸಭೆಯಲ್ಲಿ ಶುಕ್ರವಾರ ಪ್ರಶ್ನೋತ್ತರ ಅವಧಿಯಲ್ಲಿ ಸಂಸದರಾದ ಜಿ. ಕುಮಾರ ನಾಯಕ ಹಾಗೂ ಇ. ತುಕಾರಾಮ್ ಕೇಳಿದ ಪ್ರಶ್ನೆಗೆ ಆರೋಗ್ಯ ಖಾತೆ ರಾಜ್ಯ ಸಚಿವ ಪ್ರತಾಪ್ ರಾವ್ ಜಾಧವ್ ಈ ಉತ್ತರ ನೀಡಿದ್ದಾರೆ. ಈ ಯೋಜನೆಯಡಿ ಇದುವರೆಗೆ ದೇಶದಲ್ಲಿ 22 ಏಮ್ಸ್ ಸ್ಥಾಪನೆಗೆ ಅನುಮೋದನೆ ನೀಡಲಾಗಿದೆ ಎಂದು ಉತ್ತರಿಸಿದ್ದಾರೆ.
ಹಿಂದುಳಿದ ಜಿಲ್ಲೆ ರಾಯಚೂರಿನಲ್ಲಿ ಏಮ್ಸ್ ಸ್ಥಾಪನೆ ಮಾಡಬೇಕು ಎಂದು ರಾಜ್ಯ ಸರ್ಕಾರವು ಕೇಂದ್ರಕ್ಕೆ ಹಲವು ಸಲ ಪತ್ರ ಬರೆದಿತ್ತು. ಆ ಭಾಗದ ಸಂಸದರು ಮತ್ತು ಶಾಸಕರೂ ಸಹ ಕೇಂದ್ರ ಸರ್ಕಾರವನ್ನು ಒತ್ತಾಯಿಸುತ್ತಲೇ ಬಂದಿದ್ದರು. ಆದರೆ ರಾಜ್ಯದ ಕನಸಿಗೆ ಕೇಂದ್ರ ಸರ್ಕಾರ ತಣ್ಣೀರೆರಚಿದೆ.